ಕರ್ನಾಟಕ ಚುನಾವಣೆ 2023; 7 ಲಕ್ಷ ಹೊಸ ಮತದಾರರು ಸೇರ್ಪಡೆ
ಬೆಂಗಳೂರು, ಜನವರಿ 05; ರಾಜ್ಯ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಿದ್ಧತೆಗಳನ್ನು ಆರಂಭಿಸಿದೆ. 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಆಯೋಗ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು ಖಚಿತಪಡಿಸಿಕೊಳ್ಳಲು ವೆಬ್ಸೈಟ್ ಅಥವ ಅಪ್ಲಿಕೇಶನ್ ಮೂಲಕ ವೀಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದೆ.
ಒಂದು ವೇಳೆ ಮತದಾರರು ತಮ್ಮ ಮಾಹಿತಿ ತಪ್ಪಿದ್ದಲ್ಲಿ ಮತ್ತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು. ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. 7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.

ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆಯಾಗಿದೆ. 1000 ಪುರಷರಿಗೆ 988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು. ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆಯಾಗಿದೆ ಎಂದು ಆಯೋಗ ತಿಳಿಸಿದೆ.
ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು (6,50,532). ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು (1,66,521) ಇದ್ದಾರೆ.
ಜನವರಿ 15ರಂದು ಪ್ರಕಟ; ರಾಜ್ಯ ಚುನಾವಣಾ ಆಯೋಗ ಪ್ರಸ್ತುತ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಉಳಿದ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರದ ಮತದಾರರ ಅಂತಿಮ ಪಟ್ಟಿಯನ್ನು ಜನವರಿ 15 ರಂದು ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.

ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ? ಎಂದು ಚೆಕ್ ಮಾಡಿಕೊಳ್ಳಲು ಮುಖ್ಯ ಚುನಾವಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ - 2023ರ ಅಭಿಯಾನದ ಬಳಿಕ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಗುರುವಾರ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಮಾನ್ಯತೆ ಪಡೆದ ಹಾಗೂ ನೋಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿ ಕುರಿತು ಸಹ ಚರ್ಚೆ ನಡೆಯಿತು. ಈ ಸಭೆಯಲ್ಲಿ ಸಿಪಿಐ, ಸಿಪಿಐಎಂ, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ರಾಜೇಂದ್ರ ಚೋಳನ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜನರು ಈ ಕೆಳಗಿನ ವೆಬ್ ಸೈಟ್ ಅಥವಾ ಅಪ್ಲಿಕೇಶ್ನ್ ಮೂಲಕ ತಮ್ಮ ಹೆಸರು ಪರಿಶೀಲಿಸಬಹುದು.
www.nvsp.in
Voter Portal
Voter Helpline Mobile App
ಅಧಿಕಾರಿಗಳ ಸಭೆ; ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೂರ್ವತಯಾರಿ ಸಭೆಯನ್ನು ನಡೆಸಲಾಯಿತು. ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ. ಸಿ. ಪಾತ್ರ ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿ, ಪೂರ್ವ ತಯಾರಿಗಳನ್ನು ವೀಕ್ಷಣೆ ಮಾಡಿದರು.
ಅಧಿಕಾರಿಗಳ ಜೊತೆ ಸಭೆ ನಡೆಸಿದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಿದ್ದರು. ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದ್ದರು.
ಜಿಲ್ಲಾಧಿಕಾರಿಗಳಿಗೆ ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ ಮತ್ತು ತೆಗೆದುಹಾಕಿರುವ 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸರಿಯಾದ ಕಾರಣಗಳನ್ನು ಹುಡುಕಿ ಗುರುತಿಸುವಂತೆ ಸೂಚಿಸಲಾಗಿತ್ತು.
ಈ ಸಭೆಯ ಬಳಿಕ ಅಧಿಕಾರಿಗಳು ಗುರುವಾರ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆ ಇದೆ.












Click it and Unblock the Notifications