Karnataka Assembly Elections 2023: ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಯ ನಂತರವೇ ರಾಜ್ಯ ವಿಧಾನಸಭೆ ಚುನಾವಣೆ?
ಚುನಾವಣಾ ಆಯೋಗವು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಬಹುದು. ಇದಕ್ಕಾಗಿ ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ನಡೆಸಿದೆ.
ಬೆಂಗಳೂರು ಜನವರಿ 28: ಚುನಾವಣಾ ಆಯೋಗವು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಬಹುದು. ಇದಕ್ಕಾಗಿ ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ನಡೆಸಿದೆ. ಮೇ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳು ಇವೆ. ಹಾಲಿ ವಿಧಾನಸಭೆಯ ಅವಧಿ ಈ ವರ್ಷ ಮೇ 24ಕ್ಕೆ ಕೊನೆಗೊಳ್ಳಲಿದೆ. ಅದರೊಳಗೆ ಹೊಸ ವಿಧಾನಸಭೆ ರಚನೆಯಾಗಬೇಕು. ಕಳೆದ ಬಾರಿ 2018ರಲ್ಲಿ ಮೇ 12ರಂದು ಮತದಾನ ನಡೆದಿತ್ತು. ಈ ಬಾರಿಯೂ ಇದೇ ಅವಧಿಯಲ್ಲಿ ಚುನಾವಣೆ ನಡೆಯಬಹುದು.
ಹೀಗಾಗಿ ಚುನಾವಣಾ ಆಯೋಗ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣ ಪ್ರಕ್ರಿಯೆಗೆ ಮೂರು ಲಕ್ಷ ಸಿಬಂದಿ ಅಗತ್ಯವಿದ್ದು ಬಹುತೇಕ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಲಾಗುತ್ತಿದೆ. ಮಾರ್ಚ್ನಲ್ಲಿ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ಇದರ ಬಳಿಕವಷ್ಟೇ ಚುನಾವಣೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಜೊತೆಗೆ ಮೂರು ಪ್ರಬಲ ಪಕ್ಷಗಳು ಚುನಾವಣೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿವೆ.
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮೇ 12, 2018ರಂದು ಚುನಾವಣೆ ನಡೆಯಿತು. ಬಿಜೆಪಿ, ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ನೇತೃತ್ವದ ಜೆಡಿಎಸ್ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾಗಿದ್ದವು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸೀಟುಗಳನ್ನು ಪಡೆದುಕೊಂಡು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ, ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ಗೆ 9 ಸೀಟುಗಳು ಬೇಕಾಗಿತ್ತು. ಕಾಂಗ್ರೆಸ್ 80 ಸೀಟುಗಳು, ಜೆಡಿಎಸ್ ಪಕ್ಷ 37 ಸೀಟುಗಳನ್ನು ಪಡೆಯಿತು. ಜೆಡಿಎಸ್ ಮತ್ತು ಕಾಂಗ್ರೆಸ್ ತಕ್ಷಣ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿತು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಜೆಪಿಯ ಯಡಿಯೂರಪ್ಪ ಅವರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲು ಆಹ್ವಾನ ಕೊಟ್ಟರು. ಯಡಿಯೂರಪ್ಪ ಮೇ 17, 2018ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ವಿಧಾನಸಭೆಯಲ್ಲಿ ವಿಶ್ವಾಸಮತಗಳಿಸಲು ವಿಫಲವಾದ ಯಡಿಯೂರಪ್ಪ ಮೇ 19ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತು. ಎಚ್. ಡಿ. ಕುಮಾರಸ್ವಾಮಿ 2ನೇ ರಾಜ್ಯದ ಮುಖ್ಯಮಂತ್ರಿಯಾದರು. ಜೆಡಿಎಸ್ ಮತ್ತು ಕಾಂಗ್ರೆಸ್ನ 17 ಶಾಸಕರು ರಾಜೀನಾಮೆ ನೀಡಿದ ಕಾರಣ, ಬಹುಮತ ಕಳೆದುಕೊಂಡು ಸರ್ಕಾರ ಪತನಗೊಂಡಿತು. ಜುಲೈ 26, 2019 ರಂದು ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಯಡಿಯೂರಪ್ಪ ಪುನಃ ಮುಖ್ಯಮಂತ್ರಿಯಾದರು. ಅವರ ಬಳಿಕ ಬಸವರಾಜ ಬೊಬ್ಬಾಯಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು.