ಬೆಳಗಾವಿ ಮುಂಗಾರು ಅಧಿವೇಶನದಲ್ಲಿ ಶುಕ್ರವಾರದ ಕಲಾಪ
ಬೆಳಗಾವಿ, ಜು.03 : ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರಾಮ ಪಂಚಾಯತಿಗಳಿಗೆ ಕಟ್ಟಡ ಸೇರಿದಂತೆ ಮೂಲಸೌಕರ್ಯಗಳನ್ನು 6 ತಿಂಗಳ ಒಳಗಾಗಿ ಕಲ್ಪಿಸಲಾಗುವುದು ಎಂದು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಹೊಸದಾಗಿ 449 ಗ್ರಾಮ ಪಂಚಾಯಿತಿಗಳನ್ನು ರಚಿಸಲಾಗಿದೆ ಎಂದರು.
ಈ ಪಂಚಾಯತ್ಗಳಿಗೆ ಈಗಾಗಲೇ ಚುನಾವಣೆ ಸಹ ನಡೆಸಲಾಗಿದೆ. ಪಂಚಾಯತಿಗಳಿಗೆ ಕಟ್ಟಡ, ಸಿಬ್ಬಂದಿ ನೇಮಕ, ಕಂಪ್ಯೂಟರ್ ಪೂರೈಕೆ ಇತ್ಯಾದಿಗಳನ್ನು ಆದಷ್ಟು ಬೇಗನೆ ಮಾಡುವಂತೆ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಇದಕ್ಕಾಗಿ ಪ್ರತಿ ಪಂಚಾಯತಿಗೆ 20ಲಕ್ಷ ರೂ. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಶೀಘ್ರವೇ 11 ಸಾವಿರ ಶಿಕ್ಷಕರ ನೇಮಕಾತಿ : ಪ್ರಾಥಮಿಕ ಶಾಲೆಯ 11 ಸಾವಿರ ಶಿಕ್ಷಕರ ನೇಮಕಾತಿಗೆ ಎರಡು ತಿಂಗಳಿನಲ್ಲಿ ಆದೇಶ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ವಿಧಾನಪರಿಷತ್ತಿನಲ್ಲಿ ಹೇಳಿದರು. ಜಿ.ಎಸ್.ನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಈಗಾಗಲೇ 11 ಸಾವಿರ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆಗಳನ್ನು ನಡೆಸಲಾಗಿದೆ, ಎರಡು ತಿಂಗಳಿನಲ್ಲಿ ನೇಮಕಾತಿ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ : ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದ 5ನೇ ದಿನದ ಕಲಾಪದಲ್ಲಿ ಚರ್ಚೆ ನಡೆಯುತ್ತಿದೆ. ಸದಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಚರ್ಚೆ ಆರಂಭಿಸಿದರು. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಇದಕ್ಕೆ ಧ್ವನಿ ಗೂಡಿಸಿದರು.
ಶುಕ್ರವಾರದ ಕಲಾಪ ಆರಂಭವಾಗುತ್ತಿದ್ದಂತೆ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ನಿಲುವಳಿ ಸೂಚನೆಯಡಿ ವಿಷಯ ಪ್ರಸ್ತಾಪಿಸಲು ಮುಂದಾದರು. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಅವರು ಈ ಚರ್ಚೆಗೆ ಸೇರಿಕೊಂಡರು.

ಆಗ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ನಿಯಮ 69ರ ಅಡಿ ವಿಸ್ತ್ರೃತವಾದ ಚರ್ಚೆ ನಡೆಸಲು ಅವಕಾಶ ನೀಡುತ್ತೇನೆ ಎಂದು ಹೇಳಿದರು. ನಂಜುಡಪ್ಪ ವರದಿ ಕುರಿತು ಜುಲೈ 9 ಮತ್ತು 10ರಂದು ಚರ್ಚೆ ನಡೆಸೋಣ ಎಂದು ಹೇಳಿದರು. [ಉತ್ತರ ಕರ್ನಾಟಕ ಪತ್ಯೇಕ ರಾಜ್ಯ, ಇದು ಕತ್ತಿ ಬೇಡಿಕೆಯಲ್ಲ!]












Click it and Unblock the Notifications