ಬೆಳಗಾವಿ ಅಧಿವೇಶನ, ಬುಧವಾರ ಸದನದಲ್ಲಿ ಏನಾಯ್ತು?
ಬೆಳಗಾವಿ, ಜು.01 : ಲೋಕಾಯುಕ್ತ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಹಗರಣದಲ್ಲಿ ಸಚಿವರ ಆಪ್ತರು ಸೇರಿದಂತೆ ಹಲವಾರು ಜನರು ಭಾಗಿಯಾಗಿರುವ ಆರೋಪಗಳಿವೆ. ಆದ್ದರಿಂದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, 'ಪ್ರಕರಣದ ತನಿಖೆಗಾಗಿ ಸರ್ಕಾರ ಎಸ್ಐಟಿ ನೇಮಕ ಮಾಡಿದೆ. ಕಮಲ್ ಪಂತ್ ಅವರು ಎಸ್ಐಟಿ ಮುಖ್ಯಸ್ಥರಾಗಿದ್ದಾರೆ. ಆದರೆ, ಅವರು ಮೂರು ತಿಂಗಳು ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಆದ್ದರಿಂದ ತನಿಖೆ ಹೇಗೆ ಸಾಧ್ಯ?. ಪ್ರಭಾವಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು' ಎಂದು ಒತ್ತಾಯಿಸಿದರು.
ಲೋಕಾ ಹಗರಣ, ಸಿಬಿಐ ತನಿಖೆ ಸಾಧ್ಯವಿಲ್ಲ : ಲೋಕಾಯುಕ್ತದಲ್ಲಿ ನಡೆದ ಹಣದ ಬೇಡಿಕೆ ಹಗರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿವೆ. ಆದರೆ. ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. [ಲೋಕಾ ಹಗರಣ, ಅಶ್ವಿನ್ ರಾವ್ ವಿರುದ್ಧ ಎಫ್ ಐಆರ್]

ಸಾಲಾ ಮನ್ನಾ ಮಾಡುವಂತೆ ಕೇಂದ್ರಕ್ಕೆ ಪತ್ರ : ದಾಳಿಂಬೆ ಬೆಳೆಗಾರರ ಸಾಲವನ್ನು ಮನ್ನಾ ಮಾಡುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾಲ ಮತ್ತು ಬಡ್ಡಿ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. [ಶೆಟ್ಟರ್, ಎಚ್ಡಿಕೆ ನೇಗಿಲು ಹಿಡಿದಿದ್ದಾರೆಯೇ?]
ಕಲಬುರಗಿಯಲ್ಲಿ ಕೆಎಟಿ ಪೀಠ ಸ್ಥಾಪನೆ : ಕಲಬುರಗಿಯಲ್ಲಿ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ಪೀಠ ಸ್ಥಾಪನೆ ಮಾಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು ಕಲಬುರಗಿ ಜಿಲ್ಲೆಗೆ ಸಂಬಂಧಿಸಿದ 1206 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು. [ರೈತರ ಸಮಸ್ಯೆಗೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು?]
ಟಿಎ, ಡಿಎಗಾಗಿ ಸದನಕ್ಕೆ ಬಂದಿಲ್ಲ : ಜೆಡಿಎಸ್ ಶಾಸಕರಿಗೆ ಕಲಾಪದಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂದು ಶಾಸಕಾಂಗ ಸಭೆಯಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಕಲಾಪ ಆರಂಭವಾಗುವುದಕ್ಕೂ ಮೊದಲು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಿತು. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕಲಾಪದಲ್ಲಿ ನಮಗೆ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂದು ಶಾಸಕರು ಸಭೆಯಲ್ಲಿ ಹೇಳಿದರು. ಕೇವಲ ಟಿಎ, ಡಿಎ ತೆಗೆದುಕೊಳ್ಳಲು ನಾವು ಸದನಕ್ಕೆ ಬರುವುದಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಕಲಾಪದಲ್ಲಿ ಬಿಜೆಪಿಯಿಂದ ಗದ್ದಲ : ಬೆಳಗಾವಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಮೂರನೇ ದಿನದ ಕಲಾಪದಲ್ಲಿ ಬಿಜೆಪಿ ಸದಸ್ಯರು ಗದ್ದಲವೆಬ್ಬಿಸಿದ್ದಾರೆ.ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಯಿತು. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಒಂದೇ ಕಂತಿನಲ್ಲಿ ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕು ಎಂದು ಪಟ್ಟು ಹಿಡಿದರು. ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದರು.
ಶೆಟ್ಟರ್ ಮಾತಿಗೆ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕಲಾಪದಲ್ಲಿಯೇ ಉತ್ತರ ಕೊಡಲಾಗಿದೆ. ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಗದ್ದಲ ಮಾಡಿದರು. ಆದ್ದರಿಂದ ಕಲಾಪವನ್ನು 10 ನಿಮಿಷಗಳ ಅವಧಿಗೆ ಮುಂದೂಡಲಾಯಿತು.












Click it and Unblock the Notifications