ಮುಂಗಾರು ಅಧಿವೇಶನ : ಗುರುವಾರದ ಕಲಾಪದ ಮುಖ್ಯಾಂಶಗಳು
ಬೆಂಗಳೂರು, ಜುಲೈ 16 : ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳ ಫ್ಲೈ ಓವರ್ಗೆ ಸಂಪರ್ಕಿಸುವ ಆರು ಪಥದ 6.72 ಕಿ.ಮೀ.ಉದ್ದದ ಸ್ಪೀಲ್ ಬ್ರಿಡ್ಜ್ ಕಾಮಗಾರಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.
ಬಿಜೆಪಿಯ ಅಶ್ವಥನಾರಾಯಣ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು 1350 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣವಾಗಲಿದೆ. ಕಾಂಕ್ರೀಟ್ ಮೇಲ್ಸೇತುವೆ ಬದಲು ಉಕ್ಕನ್ನು ಬಳಸಿ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದರು. ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಬಳಿಯೂ ಇದೇ ಮಾದರಿಯಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. [ಪರಿಷತ್ತಿನಲ್ಲಿ ಈಶ್ವರಪ್ಪ ಹೇಳಿದ ಸಣ್ಣಕಥೆ]
ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ : ಎಂಬಿಬಿಎಸ್ ಪದವಿ ಮುಗಿಸಿದ ವೈದ್ಯರಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ಕಾಯ್ದೆಯನ್ನು ಒಂದು ವಾರದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ತಿಳಿಸಿದರು. [ಗ್ರಾಮೀಣ ಸೇವೆ ಕಡ್ಡಾಯ]
ಬೀಳಗಿ ಶಾಸಕ ಜಿ.ಟಿ.ಪಾಟೀಲ (ಕಾಂಗ್ರೆಸ್) ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವೈದ್ಯರ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ರಾಷ್ಟ್ರಪತಿಗಳು ಈಗಾಗಲೇ ಅಂಕಿತ ಹಾಕಿದ್ದಾರೆ. ಕಾಯ್ದೆಗೆ ಪೂರಕವಾಗಿ ನಿಯಮಾವಳಿಗಳನ್ನು ಸಿದ್ಧಪಡಿಸಿದ್ದೇವೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅಂತಿಮ ಒಪ್ಪಿಗೆ ಪಡೆಯಲಾಗುತ್ತದೆ ಎಂದು ಹೇಳಿದರು.
ಸೋಮವಾರ ಶಾಸಕರ ಸಭೆ : ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುವ ಶಾಸಕರ ಸಭೆಯಲ್ಲಿ ಸೋಮವಾರ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಡೆಂಗ್ಯೂ ನಿಯಂತ್ರಣ, ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು, ಶಾಸರೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ಸಚಿವರು ವಿವರಣೆ ನೀಡಿದರು. ನಗರದಲ್ಲಿ ಔಷಧ ಸಿಂಪಡಣೆ ಮಾಡಿ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಚಿವರಿಗೆ ಸಲಹೆ ನೀಡಿದರು.
ಗುರುವಾರದ ಕಲಾಪ ಆರಂಭ : ಮುಂಗಾರು ಅಧಿವೇಶನದ ನಾಲ್ಕನೇ ದಿನದ ಕಲಾಪ ವಿಧಾನಸೌಧದಲ್ಲಿ ಆರಂಭವಾಗಿದೆ. ಪ್ರತಿಪಕ್ಷ ಜೆಡಿಎಸ್ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಸಲು ಸ್ಪೀಕರ್ ಕಾಗೋಡು ತಿಮ್ಮಪ್ಪ ಇಂದು ಅವಕಾಶ ನೀಡಲಿದ್ದಾರೆ.

ಅವಿಶ್ವಾಸ ನಿರ್ಣಯದ ಪರ ಚರ್ಚೆಗೆ ಇಂದು ಅವಕಾಶ ನೀಡುವುದಾಗಿ ಸ್ಪೀಕರ್ ಬುಧವಾರವೇ ತಿಳಿಸಿದ್ದಾರೆ. ಎಲ್ಲಾ ಶಾಸಕರೂ ಸದನದಲ್ಲಿ ಹಾಜರಿರಬೇಕೆಂದು ಕಾಂಗ್ರೆಸ್ ಸೂಚನೆ ನೀಡಿದೆ. ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನಿರ್ಣಯದ ಬಗ್ಗೆ ಮಾತನಾಡಲಿದ್ದು, ಹಲವಾರು ದಾಖಲೆಗಳನ್ನು ಸದನಕ್ಕೆ ತೆಗೆದುಕೊಂಡು ಬಂದಿದ್ದಾರೆ.
ಜೆಡಿಎಸ್ನ 28 ಶಾಸಕರು ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತವನ್ನು ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಅವಿಶ್ವಾಸ ನಿರ್ಣಯದಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಆದರೆ, ನಿರ್ಣಯದ ಕುರಿತು ಚರ್ಚೆ ನಡೆಯಲಿದೆ. [ಅವಿಶ್ವಾಸ ನಿರ್ಣಯ ಮಂಡನೆಗೆ ಅಸ್ತು ಎಂದ ಸ್ಪೀಕರ್]
ಶಾಸಕರ ಬಲಾಬಲ
* 224 ಸಂಖ್ಯಾಬಲದ ಕರ್ನಾಟಕ ವಿಧಾನಸಭೆ
* ಕಾಂಗ್ರೆಸ್ 123
* ಬಿಜೆಪಿ 44
* ಜೆಡಿಎಸ್ 40 ಶಾಸಕರು











Click it and Unblock the Notifications