ಮುಂಗಾರು ಅಧಿವೇಶನ : ಮಂಗಳವಾರದ ಕಲಾಪದ ಮುಖ್ಯಾಂಶಗಳು
ಬೆಂಗಳೂರು, ಜುಲೈ 14 : ಬೆಂಗಳೂರು ನಗರದಲ್ಲಿ 12 ಲಕ್ಷ ಹಳೆಯ ವಿದ್ಯುತ್ ಮೀಟರ್ಗಳನ್ನು ಬದಲಾವಣೆ ಮಾಡಿ ಹೊಸ ಮೀಟರ್ ಅಳವಡಿಸಬೇಕಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. ಬಿಜೆಪಿಯ ತಾರಾ ಅನುರಾಧಾ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹಳೆಯ ಮೀಟರ್ಗಳನ್ನು ಬದಲಿಸಿದ್ದರಿಂದ ಇಂಧನ ಇಲಾಖೆಯಲ್ಲಿ ಶೇ.30ರಷ್ಟು ಆದಾಯ ಹೆಚ್ಚಾಗಿದೆ ಎಂದರು.
ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿ : ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗುವಂತೆ ರಾಯಚೂರು, ಬಾಗಲಕೋಟೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಬೇಕು ಎಂದು ಬಿಜೆಪಿಯ ಗೋವಿಂದ ಕಾರಜೋಳ ಅವರು ಸರ್ಕಾರವನ್ನು ಒತ್ತಾಯಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೇಮಕಾತಿಯಲ್ಲಿ ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಾತಿನಿಧ್ಯ ದೊರೆಯಬೇಕು ಎಂದರು.[ಸೋಮವಾರದ ಕಲಾಪದ ಮುಖ್ಯಾಂಶಗಳು]
ವಿಜಯಪುರ ಜಿಲ್ಲೆಯಲ್ಲಿ ರಸಗೊಬ್ಬರ ಕಾರ್ಖಾನೆ ಆರಂಭವಾಗಬೇಕೆಂದು ನಾನು ಪ್ರಯತ್ನ ಮಾಡುತ್ತಿದ್ದೇನೆ. ಕೇಂದ್ರ ಸರ್ಕಾರವು ಸಮ್ಮತಿಸಿದೆ. ಸರ್ಕಾರ ಕಾರ್ಖಾನೆ ಸ್ಥಾಪನೆಗೆ ಒಬ್ಬ ನೋಡೆಲ್ ಅಧಿಕಾರಿಯನ್ನು ನೇಮಿಸಬೇಕೆಂದು ಮನವಿ ಮಾಡಿದರು. [ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ರಾಜ್ಯದಲ್ಲಿ ಹೊಸದಾಗಿ 30 ಪೊಲೀಸ್ ಠಾಣೆ ಸ್ಥಾಪನೆ : ರಾಜ್ಯದಲ್ಲಿ ಹೊಸದಾಗಿ 30 ಪೊಲೀಸ್ ಠಾಣೆಗಳನ್ನು ಆರಂಭಿಸಲಾಗುತ್ತದೆ ಎಂದು ಗೃಹ ಸಚಿವ ಕೆಜೆ ಜಾರ್ಜ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಹಾನಗಲ್ ಶಾಸಕ ಮನೋಹರ್ ತಹಸೀಲ್ದಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹೊಸದಾಗಿ 10 ಮಹಿಳಾ ಪೊಲೀಸ್ ಠಾಣೆ ಮತ್ತು 20 ಸಾಮಾನ್ಯ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ ಎಂದರು. ರಾಷ್ಟ್ರೀಯ ಪೊಲೀಸ್ ಆಯೋಗದ ಮಾನದಂಡದಂತೆ ಠಾಣೆಗಳನ್ನು ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಲೋಕಾಯುಕ್ತ ಹಗರಣದ ಬಗ್ಗೆ ಚರ್ಚೆ : ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ ಎರಡನೇ ದಿನದ ಕಲಾಪದಲ್ಲಿ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಚಾರ ಪ್ರಕರಣದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಈ ಕುರಿತು ಬೆಳಗಾವಿಯಲ್ಲಿ ಚರ್ಚಿಸಲಾಗಿದೆ ಎಂದು ಸರ್ಕಾರ ಸಮರ್ಥನೆ ನೀಡಿದೆ.
ಮಂಗಳವಾರದ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಲೋಕಾಯುಕ್ತ ಸಂಸ್ಥೆಯಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ. ಈ ವಿಷಯದ ಕುರಿತು ಸದನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಮಾಡಿದರು.
ಬೆಳಗಾವಿಯಲ್ಲಿಯೂ ಈ ಬಗ್ಗೆ ವಿಷಯ ಪ್ರಸ್ತಾಪಿಸಲಾಗಿತ್ತು. ಆಗ, ಅಡ್ವೊಕೇಟ್ ಜನರಲ್ ಸಲಹೆ ಪಡೆಯಲಾಗಿತ್ತು. ಲೋಕಾಯುಕ್ತರ ಪದಚ್ಯುತಿಗೂ ಮನವಿ ಸಲ್ಲಿಸಲಾಗಿತ್ತು ಎಂದು ಜಗದೀಶ್ ಶೆಟ್ಟರ್ ಹೇಳಿದರು. ಈ ವಿಷಯದ ಕುರಿತು ವಿವರವಾದ ಚರ್ಚೆ ನಡೆಸಲು ಅವಕಾಶ ಕೊಡಿ ಎಂದು ಸ್ಪೀಕರ್ಗೆ ಮನವಿ ಮಾಡಿದರು.
ಸರ್ಕಾರದ ಪರವಾಗಿ ಮಾತನಾಡಿದ ಕಾನೂನು ಸಚಿವ ಟಿಬಿ ಜಯಚಂದ್ರ ಅವರು ಬೆಳಗಾವಿಯಲ್ಲಿ ಲೋಕಾಯುಕ್ತದ ಹಗರಣದ ಬಗ್ಗೆ ಚರ್ಚೆ ನಡೆದಿದೆ. ಆದ್ದರಿಂದ, ಪುನಃ ಚರ್ಚೆ ಮಾಡುವುದು ಬೇಡ, ಸದನದ ಸಮಯವನ್ನು ಗಮನದಲ್ಲಿಟ್ಟುಕೊಂಡು ಬೇರೆ ವಿಚಾರದ ಕುರಿತು ಚರ್ಚೆ ನಡೆಸೋಣ ಎಂದು ಹೇಳಿದರು.











Click it and Unblock the Notifications