ವಿಧಾನ ಪರಿಷತ್ ಉಪ ಚುನಾವಣೆಗೆ ಅಧಿಸೂಚನೆ ಪ್ರಕಟ
ಬೆಂಗಳೂರು, ಫೆ. 25: ವಿಧಾನಸಭೆಯಿಂದ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ವಿಧಾನ ಪರಿಷತ್ ಜೆಡಿಎಸ್ ಸದಸ್ಯರಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರುವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಕಳೆದ ಡಿಸೆಂಬರ್ 28, 2020ರಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರಾಗಿದ್ದ ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಆ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಮಾರ್ಚ್ 15 ರಂದು ನಡೆಯಲಿರುವ ಚುನಾವಣೆಗೆ ಇಂದು (ಫೆ. 25) ರಂದು ಅಧಿಸೂಚನೆ ಜಾರಿಯಾಗಿದೆ. ಮಾರ್ಚ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 5 ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಾಸ್ ಪಡೆಯಲು ಮಾರ್ಚ್ 8 ಕೊನೆಯ ದಿನ. ಮಾರ್ಚ್ 15 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಬಳಿಕ ಅಂದು ಸಂಜೆ 5 ಗಂಟೆಗೆ ಮತ ಎಣಿಕೆ, ಬಳಿಕ ಫಲಿತಾಂಶ ಪ್ರಕಟವಾಗಲಿದೆ ಎಂದು ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿಗಳಾಗಿದ್ದ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸುವ ನಿಟ್ಟಿನಲ್ಲಿ ಪರಿಷತ್ ಕಲಾಪದಲ್ಲಿ ಹೈಡ್ರಾಮಾ ನಡೆದಿತ್ತು. ಅದೇ ಸಂದರ್ಭದಲ್ಲಿ ಉಪ ಸಭಾಪತಿಗಳಾಗಿದ್ದ ಎಸ್.ಎಲ್. ಧೆರ್ಮೇಗೌಡ ಅವರನ್ನು ಬಲವಂತವಾಗಿ ಸ್ಪೀಕರ್ ಸ್ಥಾನದಲ್ಲಿ ಸದಸ್ಯರು ಕೂಡಿಸಿದ್ದರು. ಬಳಿಕ ಮತ್ತೊಂದು ಪಕ್ಷದ ಸದಸ್ಯರು ಅವರನ್ನು ಬಲವಂತವಾಗಿ ಸಭಾಪತಿಗಳ ಪೀಠದಿಂದ ಎಳೆದು ಹಾಕಿದ್ದರು.
Recommended Video
ಇದೇ ವಿಚಾರವಾಗಿ ಮನನೊಂದಿದ್ದ ಎಸ್.ಎಲ್. ಧರ್ಮೇಗೌಡ ಅವರು, ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ತನಿಖೆ ನಡೆಸಲು ಸದನ ಸಮಿತಿ ರಚಿಸಲಾಗಿದ್ದು, ಸಮಿತಿ ಮಧ್ಯಂತರ ವರದಿಯನ್ನು ಕೊಟ್ಟಿದೆ. ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊಡಲು ಡೆತ್ ನೋಟ್ ಬರೆದಿದ್ದು, ಪರಿಷತ್ನಲ್ಲಿ ನಡೆದ ಗಲಾಟೆಯೆ ತಮ್ಮ ಆತ್ಮಹತ್ಯೆ ನಿರ್ಧಾರಕ್ಕೆ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ.