ಯತ್ನಾಳ್ ವಿರುದ್ಧ ಹೋರಾಟ; ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ
ಬೆಂಗಳೂರು, ಮಾರ್ಚ್ 03 : ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೋರಾಟ ನಡೆಸುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಯತ್ನಾಳ್ರನ್ನು ಸದನದಿಂದ ಅಮಾನತು ಮಾಡಬೇಕು ಎಂದು ಪಕ್ಷ ಪಟ್ಟು ಹಿಡಿದಿದೆ.
ಸೋಮವಾರ ಹಲವು ಕಾಂಗ್ರೆಸ್ ಶಾಸಕರು ಸದನಕ್ಕೆ ಗೈರಾಗಿದ್ದರು. ಆದ್ದರಿಂದ, ಪಕ್ಷ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಮಂಗಳವಾರ ಸದನಕ್ಕೆ ಗೈರಾಗಬಾರದು ಎಂದು ವಿಪ್ನಲ್ಲಿ ಸೂಚನೆ ನೀಡಲಾಗಿದೆ. ಈ ಮೂಲಕ ಸದನದಲ್ಲಿ ಸದಸ್ಯರ ಬಲ ಹೆಚ್ಚಿರುವಂತೆ ನೋಡಿಕೊಳ್ಳಲು ಮುಂದಾಗಿದೆ.
ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಅವರನ್ನು ಅವಮಾನಿಸಿರುವ ಯತ್ನಾಳ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸ್ಪೀಕರ್ ವಿರುದ್ಧ ಅಸಮಾಧಾನ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿದ್ದು, "ಸದನಕ್ಕೆ ಅಗೌರವ ತೋರುವ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ, ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ" ಎಂದು ಹೇಳಿದರು.

ಚರ್ಚೆಗೆ ಅವಕಾಶವನ್ನು ನೀಡಿ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿವರನ್ನು ಅವಮಾನಿಸಿರುವ ವಿಷಯದ ಕುರಿತು ಚರ್ಚಿಸಲು ಸಭಾಧ್ಯಕ್ಷರಿಗೆ ತಮ್ಮ ವಿವೇಚನಾಧಿಕಾರ ಬಳಸಿ ಅವಕಾಶ ನೀಡುವಂತೆ ಮನವಿ ಮಾಡಿದ್ದೆವು. ನಮ್ಮ ಆರೋಪವಿರುವುದು ಸರ್ಕಾರದ ವಿರುದ್ಧ ಅಲ್ಲ. ವಿಧಾನಸಭಾ ಕಲಾಪದ ನಿಯಮಾವಳಿ 363ರ ಪ್ರಕಾರ ನಮಗೆ ಚರ್ಚೆಗೆ ಅವಕಾಶ ನೀಡಬೇಕಿತ್ತು ಎಂದು ಕಾಂಗ್ರೆಸ್ ಹೇಳಿದೆ.

ತಮ್ಮ ಯೋಗ್ಯತೆಯನ್ನು ತಿಳಿಯಲಿ
ಬಸವನಗೌಡ ಪಾಟೀಲ್ ಯತ್ನಾಳ್ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ವಂಚನೆಯೂ ಸೇರಿದಂತೆ ಅವರ ಮೇಲೆ 20ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಚುನಾವಣಾ ಆಯೋಗದ ಮುಂದೆ ಒಪ್ಪಿಕೊಂಡಿದ್ದಾರೆ. ಅಂತಹವರಿಗೆ ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಮಾತನಾಡುವಾಗ ತಮ್ಮ ಯೋಗ್ಯತೆ ತಿಳಿಯಬೇಕಿತ್ತಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿಗೆ ಸವಾಲು ಹಾಕಿದ ಪ್ರತಿಪಕ್ಷ
ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ?. ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ.












Click it and Unblock the Notifications