Breaking; ಶಾಸಕ ಹರೀಶ್ ಪೂಂಜಾಗೆ ಬೆದರಿಕೆ, ಸಿಐಡಿ ತನಿಖೆಗೆ ಆದೇಶ
ಬೆಂಗಳೂರು, ಅಕ್ಟೋಬರ್ 18; ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.
ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದರು. ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದ ಬಳಿಕ ಕಡತಗಳನ್ನು ಪೊಲೀಸರು ಸಿಐಡಿಗೆ ವರ್ಗಾವಣೆ ಮಾಡಿದ್ದಾರೆ.
ಅಕ್ಟೋಬರ್ 13ರ ಗುರುವಾರ ರಾತ್ರಿ 11.15ರ ಸುಮಾರಿಗೆ ಕೆಲವು ದುಷ್ಕರ್ಮಿಗಳು ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂಬುದು ಆರೋಪ. ಈ ಕುರಿತು ಶಾಸಕರ ಕಾರು ಚಾಲಕ ದೂರು ನೀಡಿದ್ದ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಫಳ್ನೀರ್ ನಿವಾಸಿ ರಿಯಾಜ್ (38) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಾಹನವೊಂದನ್ನು ವಶಕ್ಕೆ ಪಡೆದಿದ್ದರು. ಆರೋಪಿ ಮನೆಯ ಮೇಲೆ ದಾಳಿ ಮಾಡಿ ಎರಡು ಮೊಬೈಲ್, ಕಬ್ಬಿಣದ ರಾಡ್ ವಶಕ್ಕೆ ಪಡೆದಿದ್ದರು.
ವಿವಿಧ ಸಂಘಟನೆಗಳು ಈ ಪ್ರಕರಣದ ಕುರಿತು ಧ್ವನಿ ಎತ್ತಿದ್ದವು. ಪ್ರಕರಣದ ವಿವರವಾದ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದವು. ಈ ಹಿನ್ನಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿದೆ.
ಸ್ಪಷ್ಟನೆ ನೀಡಿದ್ದ ಎಸ್ಪಿ; ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ದಕ್ಷಿಣ ಕನ್ನಡ ಎಸ್ಪಿ ಋಷಿಕೇಶ್ ಸೋನಾವಣೆ, "ಇದು ಕೊಲೆಯತ್ನ ಪ್ರಕರಣವಲ್ಲ, ರೋಡ್ ರೇಜ್ನಿಂದ ನಡೆದ ಘಟನೆ" ಎಂದು ಹೇಳಿದ್ದರು.
"ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆ ಇದು. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ" ಎಂದು ತಿಳಿಸಿದ್ದರು.












Click it and Unblock the Notifications