ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೇ ಗಮನಸಿ ಇನ್ಮುಂದೆ ಈ ವ್ಯವಸ್ಥೆ ಇರಲ್ಲ!
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಅಪ್ಡೇಟ್ವೊಂದನ್ನು ನೀಡಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಈ ಬಾರಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇನ್ನಷ್ಟು ಶ್ರಮ ಹಾಕಬೇಕಾಗುತ್ತದೆ. ಎಸ್ಎಸ್ಎಲ್ಸಿ ಎನ್ನುವುದಿ ವಿದ್ಯಾರ್ಥಿಗಳ ಜೀವನದ ಬಹುಮುಖ್ಯ ಘಟ್ಟ ಎಂದೇ ಕರೆಯಲಾಗುತ್ತದೆ. ಶೈಕ್ಷಣಿಕ ಜೀವನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಉತ್ತೀರ್ಣರಾಗುವುದು, ಉತ್ತಮ ಅಂಕಗಳನ್ನು ಗಳಿಸುವುದು ತುಂಬಾ ಮುಖ್ಯ. ಇದೀಗ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಅಂಕಗಳಿಗೆ ಸಂಬಂಧಿಸಿದ್ದೇ ಆಗಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನೀಡುವ ಅಂಕಗಳ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಈ ಹಿಂದೆ (ಕಳೆದ ವರ್ಷ ನೀಡಲಾಗಿತ್ತು) ನೀಡಲಾಗಿದ್ದ ಗ್ರೇಸ್ ಮಾರ್ಕ್ಸ್ ನೀಡದೆ ಇರಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಸಿಗುವುದಿಲ್ಲ. ಅಂದರೆ ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗಲಿದೆ.

ಕಳೆದ ವರ್ಷ ಎಸ್ಎಸ್ಎಲ್ಸಿಯ ಫಲಿತಾಂಶವು ತೀರ ಕಳಪೆಯಾಗಿತ್ತು. ರಾಜ್ಯದ ಹಲವು ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕಸ್) ನೀಡಿದರ ಹೊರತಾಗಿಯೂ ಉತ್ತಮ ಫಲಿತಾಂಶ ಸಿಕ್ಕಿರಲಿಲ್ಲ. ಅಲ್ಲದೇ ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಚರ್ಚಿಸದೆ ಈ ನಿರ್ಧಾರ ತೆಗೆದುಕೊಂಡಿದ್ದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಮೇಲೆ ಗರಂ ಆಗಿದ್ದರು. ಶಿಕ್ಷಣ ತಜ್ಞರು ಹಾಗೂ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮುಂದಿನ ವರ್ಷದಿಂದ ಈ ರೀತಿಯ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದು ಬೇಡ ಎಂದಿದ್ದಾರೆ. ಹೀಗಾಗಿ, ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇನ್ಮುಂದೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೃಪಾಂಕವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬರೋಬ್ಬರಿ ಶೇ20 ರಷ್ಟು ಗ್ರೇಸ್ ಮಾರ್ಕಸ್: ರಾಜ್ಯ ಶಿಕ್ಷಣ ಇಲಾಖೆಯು ಕಳೆದ ಬಾರಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶೇ 20ರಷ್ಟು ಗ್ರೇಸ್ ಮಾರ್ಕ್ಸ್ ನೀಡಿತ್ತು. ಈ ರೀತಿ ಹೆಚ್ಚು ಗ್ರೇಸ್ ಮಾರ್ಕ್ಸ್ ನೀಡಿತ್ತು. ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು. ಶಿಕ್ಷಣ ಇಲಾಖೆಯ ಈ ನಿರ್ಧಾರದಿಂದ ಫೇಲ್ ಆಗುವ ಹಂತದಲ್ಲಿದ್ದ ಹಲವು ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಸಾಮಾನ್ಯವಾಗಿ ಶೇಕಡ 5ರಿಂದ 10ರಷ್ಟು ಮಾತ್ರ ಗ್ರೇಸ್ ಮಾರ್ಕ್ಸ್ ನೀಡಲಾಗುತ್ತದೆ. ಆದರೆ, ಕಳೆದ ವರ್ಷ ಶಿಕ್ಷಣ ಇಲಾಖೆಯ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಹೆಚ್ಚು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು ಎನ್ನುವ ಆರೋಪವೂ ಇದೆ.
2023-24 ಎಸ್ಎಸ್ಎಲ್ಸಿ ಫಲಿತಾಂಶ: ಕಳೆದ ವರ್ಷ (2023-24ನೇ ಸಾಲಿನ) ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಶೇಕಡ 20ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. 10ನೇ ತರಗತಿಯ 1.70 ಲಕ್ಷ ವಿದ್ಯಾರ್ಥಿಗಳಿಗೆ ಶೇ20 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೆ, 2022-23ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶಕ್ಕಿಂತಲೂ ಈ ವರ್ಷ ಶೇ10 ರಷ್ಟು ಫಲಿತಾಂಶ ಕುಸಿತ ಕಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ 6,31,204 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಫಲಿತಾಂಶ ಶೇ73.40 ಆಗಿತ್ತು. ಇದಕ್ಕೂ ಮುಂಚಿನ ರ್ಷ ಶೇ83 ರಷ್ಟು ಫಲಿತಾಂಶ ಇತ್ತು.
ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ಸ್ ತೆಗೆಯಲು ಕಾರಣವೇನು: ಕಳೆದ ಬಾರಿ ಗ್ರೇಸ್ ಮಾರ್ಕ್ಸ್ ನೀಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಶಿಕ್ಷಣ ತಜ್ಞರು ಸಹ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಈ ರೀತಿ ಗ್ರೇಸ್ಮಾರ್ಕ್ಸ್ ಕೊಡುವುದರಿಂದ ಸ್ಪರ್ಧಾತ್ಮಕತೆ ಮತ್ತು ಶಿಕ್ಷಣ ಗುಣಮಟ್ಟ ಕುಸಿತವಾಗಲಿದೆ. ಈ ಪದ್ಧತಿಯನ್ನು ಮುಂದುವರಿಸಬೇಡಿ ಎಂದಿದ್ದರು.












Click it and Unblock the Notifications