ಅಯೋಧ್ಯೆ ತೀರ್ಪು; ಕೆಎಸ್ಆರ್ಟಿಸಿ ಬಸ್ ಸಂಚಾರವಿದೆಯೇ?
ಬೆಂಗಳೂರು, ನವೆಂಬರ್ 09 : ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರದ ಬಗ್ಗೆ ಎಚ್ಚರ ವಹಿಸಲಾಗಿದೆ. ಒಂದು ವೇಳೆ ಕಲ್ಲು ತೂರಾಟ ನಡೆದರೆ ಬಸ್ ಸಂಚಾರ ಸ್ಥಗಿತಗೊಳಿಸುವ ನಿರೀಕ್ಷೆ ಇದೆ.
ಕಲ್ಲು ತೂರಾಟದಂತಹ ಅಹಿತಕರ ಘಟನೆಗಳು ನಡೆದರೆ ತಕ್ಷಣ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಬಸ್ಗಳ ಸಂಚಾರದ ವೇಳೆ ಎಚ್ಚರ ವಹಿಸುವಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.

ಬಸ್ ಸಂಚಾರದ ವೇಳೆ ಸ್ಥಳೀಯ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ಕೇಂದ್ರ ಕಚೇರಿಯಿಂದ ಸೂಚನೆ ನೀಡಲಾಗಿದೆ. ರಾಜ್ಯಾದ್ಯಂತ ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕರೆ ನೀಡಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಶತಮಾನದಷ್ಟು ಹಳೆಯದಾದ ಅಯೋಧ್ಯೆ ವಿವಾದ ಕುರಿತು, ಸುಪ್ರೀಮ್ ಕೋರ್ಟ್ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿದೆ. ತೀರ್ಪು ಯಾರ ಪರವೇ ಬರಲಿ ಯಾರೂ ಭಾವೋದ್ವೇಗಕ್ಕೆ ಒಳಗಾಗಬಾರದು. ಕೋಮು ಸೌಹಾರ್ದ ಕದಡದೆ, ಶಾಂತಿ ಕಾಪಾಡಿಕೊಳ್ಳಬೇಕಾಗಿ ವಿನಂತಿ. "ತೀರ್ಪು ಏನೇ ಆಗಿರಲಿ ಶಾಂತಿ- ಸೌಹಾರ್ದತೆಯ ಅಂತಃಶಕ್ತಿ ಜಗದ ಬೆಳಕಾಗಲಿ" ಎಂದು ಮನವಿ ಮಾಡಿದ್ದಾರೆ.
ತೀರ್ಪಿನ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು, ವಿಭಾಗಾಧಿಕಾರಿಗಳು, ಪೊಲೀಸ್ ಇಲಾಖೆ ಮುಖ್ಯಸ್ಥರು ಜಿಲ್ಲಾ ಕೇಂದ್ರಗಳಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಲ್ಕು ಅಥವ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರದಂತೆ ನಿಷೇಧಿಸಲಾಗಿದೆ. ಸದ್ಯಕ್ಕೆ ಬಿಎಂಟಿಸಿ ಬಸ್ಗಳು ಎಂದಿನಂತೆ ಸಂಚಾರ ನಡೆಸುತ್ತಿವೆ.












Click it and Unblock the Notifications