ಸಿದ್ದರಾಮಯ್ಯನವರ ನಿದ್ರೆ ಸರ್ಕಾರದ ಈ ನಾಟಕ ಹೊಸದೇನಲ್ಲ: ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು, ಮಾರ್ಚ್ 22: ಸಿದ್ದರಾಮಯ್ಯನವರ ನಿದ್ರೆ ಸರ್ಕಾರದ ಈ ನಾಟಕ ಹೊಸದೇನಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರೈತರಿಗೆ ಬರ ಪರಿಹಾರ ವಿಷಯದಲ್ಲಿ ಇದೇ ರೀತಿ ನಾಟಕವಾಡುತ್ತದೆ. 2013-14ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಜುಲೈ-ಆಗಸ್ಟ್ ಅವಧಿಯ ಮುಂಗಾರಿನ ಬರಗಾಲಕ್ಕೆ 2014 ರ ಏಪ್ರಿಲ್ನಿಂದ ಇನ್ಪುಟ್ ಸಬ್ಸಿಡಿ ಪಾವತಿ ಮಾಡಲು ಶುರು ಮಾಡಿತ್ತು. ಅಂದರೆ ಅದಕ್ಕೆ ತೆಗೆದುಕೊಂಡ ಅವಧಿ 9 ತಿಂಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಬರ ನಿರ್ವಹಣೆಯಲ್ಲಿ ತನ್ನ ವೈಫಲ್ಯ ಹಾಗೂ ಬೇಜವಾಬ್ದಾರಿಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು
— Vijayendra Yediyurappa (Modi Ka Parivar) (@BYVijayendra) March 24, 2024
ಸುಪ್ರೀಂ ಕೋರ್ಟ್ ಅಂಗಳ ಪ್ರವೇಶಿಸಿರುವ ಸಿಎಂ @siddaramaiah ಅವರ ನಡೆ ರಾಜಕೀಯ ಪ್ರೇರಿತವಾಗಿದ್ದು ಇದು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಕರ್ನಾಟಕದ ಘನತೆಯನ್ನು ಕುಗ್ಗಿಸುವ ತಪ್ಪು ನಿರ್ಧಾರವಾಗಿದೆ.… https://t.co/1d1Ce79mHs
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಬರ ನಿರ್ವಹಣೆಯಲ್ಲಿ ತನ್ನ ವೈಫಲ್ಯ ಹಾಗೂ ಬೇಜವಾಬ್ದಾರಿಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಸುಪ್ರೀಂ ಕೋರ್ಟ್ ಅಂಗಳ ಪ್ರವೇಶಿಸಿರುವ ಸಿಎಂ ಸಿದ್ದರಾಮಯ್ಯ ಅವರ ನಡೆ ರಾಜಕೀಯ ಪ್ರೇರಿತವಾಗಿದ್ದು ಇದು ಭಾರತದ ಒಕ್ಕೂಟ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಕರ್ನಾಟಕದ ಘನತೆಯನ್ನು ಕುಗ್ಗಿಸುವ ತಪ್ಪು ನಿರ್ಧಾರವಾಗಿದೆ.

'ಕೈಲಾಗದವನು ಮೈಪರಚಿಕೊಂಡ' ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ಎಲ್ಲ ಎಡವಟ್ಟುಗಳಿಗೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವ ಮೂಲಕ ಚುನಾವಣಾ ಸಂದರ್ಭದ ಕುಟಿಲತನ ಪ್ರದರ್ಶಿಸಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದರು.
ಹಿಂದಿನ ಬಿಜೆಪಿ ಸರ್ಕಾರ ಬರ, ಪ್ರವಾಹ ಮುಂತಾದ ನೈಸರ್ಗಿಕ ವಿಕೋಪ ಎದುರಾದಾಗ ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಸಮತೋಲನ ಕಾಯ್ದು ಕೊಂಡು ಸಂಕಷ್ಟಿತ ಜನರ ಕಣ್ಣೀರು ಒರೆಸಿ ಪರಿಹಾರ ನೀಡಿತ್ತು. ಆದರೆ ಕಿಂಚಿತ್ತೂ ರೈತ ಕಾಳಜಿ ಇಲ್ಲದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಅಭಿವೃದ್ಧಿ ಶೂನ್ಯ ಜನವಿರೋಧಿ ಆಡಳಿತದ ಕರಾಳ ಮುಖವನ್ನು ಮುಚ್ಚಿಕೊಳ್ಳಲು ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ.
ಯಡಿಯೂರಪ್ಪ ಅವರ ಆಡಳಿತದ 2019ರಲ್ಲಿ 9,72,517 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆಗ 6,71,314 ಫಲಾನುಭವಿಗಳಿಗೆ 1232.20 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2020ರಲ್ಲಿ 19,68,247 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆಗ 12,00,346 ಫಲಾನುಭವಿಗಳಿಗೆ 941.70 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2021ರಲ್ಲಿ 14,93,811 ಹೆಕ್ಟೇರ್ ಬೆಳೆಹಾನಿಯಾಗಿತ್ತು. ಆಗ 18,56,083 ಫಲಾನುಭವಿಗಳಿಗೆ 2446.10 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2022 ರಲ್ಲಿ 13,09,421, ಹೆಕ್ಟೇರ್ ಬೆಳೆಹಾನಿ ಆಗಿತ್ತು. ಆಗ 14,62,841 ಫಲಾನುಭವಿಗಳಿಗೆ 2031.15 ಕೋಟಿ ರೂ. ಪರಿಹಾರ ನೀಡಲಾಗಿತ್ತು.
2014-15ರ ಸಾಲಿನಲ್ಲಿ ಇದೇ ಸಿದ್ದರಾಮಯ್ಯನವರ ಸರ್ಕಾರ 2014ರ ಜುಲೈ-ಆಗಸ್ಟ್ ಅವಧಿಯ ಬರಗಾಲಕ್ಕೆ ಪರಿಹಾರ ನೀಡಲು, 2015 ಮಾರ್ಚ್ನಿಂದ ಇನ್ಪುಟ್ ಸಬ್ಸಿಡಿ ಪಾವತಿ ಶುರು ಮಾಡಿತ್ತು. ಅಂದರೆ ಇದಕ್ಕೆ ತೆಗೆದುಕೊಂಡ ಅವಧಿ 8 ತಿಂಗಳು! 2019-20 ನೇ ಸಾಲಿನಲ್ಲಿ ಬಿಜೆಪಿ ಸರ್ಕಾರವಿದ್ದಾಗ, 2019ರ ಆಗಸ್ಟ್-ಸೆಪ್ಟೆಂಬರ್ನಲ್ಲಿ ಪ್ರವಾಹ ವಿಕೋಪ ಉಂಟಾಗಿತ್ತು. ಆಗ 2019ರ ಅಕ್ಟೋಬರ್ನಿಂದ ಇನ್ಪುಟ್ ಸಬ್ಸಿಡಿ ಪಾವತಿ ಶುರು ಮಾಡಲಾಗಿತ್ತು. ಅಂದರೆ ಬರ ಪರಿಹಾರ ನೀಡಲು ಬಿಜೆಪಿ ಸರ್ಕಾರ ತೆಗೆದುಕೊಂಡ ಅವಧಿ ಕೇವಲ 2 ತಿಂಗಳು.
2020-21 ರ ಸಾಲಿನಲ್ಲಿ, 2020ರ ಆಗಸ್ಟ್-ಅಕ್ಟೋಬರ್ನಲ್ಲಿ ಪ್ರವಾಹ ಉಂಟಾಗಿತ್ತು. ಆಗ ಅಕ್ಟೋಬರ್ನಿಂದಲೇ ಪರಿಹಾರ ವಿತರಣೆ ಶುರುವಾಗಿತ್ತು. ಅಂದರೆ ಬಿಜೆಪಿ ಸರ್ಕಾರ ತೆಗೆದುಕೊಂಡ ಅವಧಿ 2 ತಿಂಗಳು. 2021-22 ನೇ ಸಾಲಿನಲ್ಲಿ, 2021ರ ಆಗಸ್ಟ್ನಲ್ಲಿ ಪ್ರವಾಹವಾದಾಗ, ಸೆಪ್ಟೆಂಬರ್ನಿಂದಲೇ ಪರಿಹಾರ ವಿತರಣೆ ಶುರುವಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 2 ತಿಂಗಳು. ಇದೇ ಸಾಲಿನಲ್ಲಿ, ಮತ್ತೊಮ್ಮೆ ಅಕ್ಟೋಬರ್-ನವೆಂಬರ್ ನಲ್ಲಿ ಪ್ರವಾಹ ಉಂಟಾಗಿ, ಆಗ ನವೆಂಬರ್ ನಿಂದಲೇ ಪರಿಹಾರ ವಿತರಣೆ ಮಾಡಲಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 1 ತಿಂಗಳು.
2022-23 ನೇ ಸಾಲಿನಲ್ಲಿ, 2022ರ ಮೇ-ಜೂನ್-ಜುಲೈ ತಿಂಗಳಲ್ಲಿ ಪ್ರವಾಹವಾದಾಗ ಜುಲೈನಿಂದ ಪರಿಹಾರ ವಿತರಣೆ ಶುರು ಮಾಡಲಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 1 ತಿಂಗಳು. ಮತ್ತೆ ಇದೇ ಸಾಲಿನಲ್ಲಿ, 2022 ರ ಆಗಸ್ಟ್-ಸೆಪ್ಟೆಂಬರ್ನಲ್ಲಿ ಪ್ರವಾಹ ಉಂಟಾಯಿತು. ಆಗ 2 ತಿಂಗಳಲ್ಲಿ ಪರಿಹಾರ ವಿತರಣೆ ಶುರು ಮಾಡಲಾಯಿತು. ಮೇಲಿನ ಈ ಎಲ್ಲಾ ಅಂಶಗಳನ್ನು ಗಮನಿಸಿದರೆ ಒಂದಂತೂ ಸ್ಪಷ್ಟವಾಗುತ್ತದೆ. ಕಷ್ಟ ಕಾಲದಲ್ಲಿ ರೈತರ ನೆರವಿಗೆ ಬರುವುದಕ್ಕಿಂತ ರೈತರ ಕಣ್ಣೀರಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದೇ ಕಾಂಗ್ರೆಸ್ ಸರ್ಕಾರದ ಅಮಾನವೀಯ ಕುತಂತ್ರ ಅನ್ನಿಸುತ್ತಿದೆ.
ಮಾನ್ಯ ಸಿದ್ದರಾಮಯ್ಯನವರೇ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಹೇಗೆ ವ್ಯವಹರಿಸಬೇಕು ಎನ್ನುವುದನ್ನು ಬರಪೀಡಿತ ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ನೋಡಿ ನೀವು ಕಲಿಯಬೇಕಿದೆ. ಇದುವರೆಗು ಸುಮ್ಮನಿದ್ದು ಚುನಾವಣಾ ಪ್ರಕ್ರಿಯೆ ಚಾಲ್ತಿಯಲ್ಲಿರುವ ಈ ಹೊತ್ತಿನಲ್ಲೇ ಸುಪ್ರೀಂ ಕದ ತಟ್ಟುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರದ ಕಾಳಜಿ 'ಮೊಸಳೆ ಕಣ್ಣೀರಿನದು'ಎಂಬುದನ್ನು ಅರ್ಥಮಾಡಿಕೊಳ್ಳುವಷ್ಟು ಕರ್ನಾಟಕದ ಜನತೆ ಪ್ರಬುದ್ಧರಿದ್ದಾರೆ, ಇದಕ್ಕೆ ತಕ್ಕನಾದ ಉತ್ತರ ಅತೀ ಶೀಘ್ರದಲ್ಲೇ ನೀವು ಪಡೆಯಲ್ಲಿದ್ದೀರಿ ಎಂದು ವಿಜಯೇಂದ್ರ ಹೇಳಿದ್ದಾರೆ.












Click it and Unblock the Notifications