ಗ್ರಾಮೀಣಾಭಿವೃದ್ಧಿ ವಿವಿಗೆ ಇನ್ನು ಸಿಎಂ ಕುಲಾಧಿಪತಿ ವಿಧೇಯಕಕ್ಕೆ ಅಸ್ತು: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆಯಲು ನಿನ್ನೆ (ನವೆಂಬರ್ 29) ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕುಲಾಧಿಪತಿ ಸ್ಥಾನವನ್ನು ಮುಖ್ಯಮಂತ್ರಿಗಳಿಗೆ ನೀಡುವ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.
ಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಸೇರಿ 4 ರಾಜ್ಯಗಳಲ್ಲಿ ಈಗಾಗಲೇ ಇಂತಹ ಮಸೂದೆ ಅಂಗೀಕರಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದು, ಕಾಂಗ್ರೆಸ್ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಶಿಕ್ಷಣದಲ್ಲಿ ರಾಜಕೀಯ ಬೆರೆಯಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರೂ ಆದ ಗೌರವಾನ್ವಿತ ರಾಜ್ಯಪಾಲರೇ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾಗಿರುವುದು ಶಿಕ್ಷಣದ ಭೂಷಣ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದ್ಯ ಈಗಿರುವ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿರುವುದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿ ಅವರಿಗೆ ನೀಡಲು ಹೊರಟಿರುವ ಸರ್ಕಾರದ ನಿಲುವು ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲೂ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದರು.

ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿರುವ ಹಾಗೂ ರಾಜ್ಯಪಾಲರನ್ನು ವೈರಿಯಂತೆ ನೋಡುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿರುವುದು, ಸಾಂವಿಧಾನಿಕ ವ್ಯವಸ್ಥೆನ್ನು ವಿಚಲಿತಗೊಳಿಸುವ ಹೊನ್ನಾರದಿಂದ ಕೂಡಿದೆ. ರಾಜ್ಯ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಸಿದ ಪಾಳೇಗಾರಿಕೆ
ಇನ್ನು ಚುನಾವಣೆಯಲ್ಲಿ ಇವಿಎಂ ಬದಲು ಮತ ಪತ್ರದ ಮತದಾನ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿ.ವೈ ವಿಜಯೇಂದ್ರ, ಜನಮನ್ನಣೆ ಗಳಿಸಿಕೊಳ್ಳುವಲ್ಲಿ ವಿಫಲವಾದಾಗಲೆಲ್ಲ ಹತಾಶೆಗೊಂಡು ಕುಣಿಯಲಾರದವರು ನೆಲ ಡೊಂಕು ಅಂದರಂತೆ ಎಂಬ ಹಾಗೆ ಕಾಂಗ್ರೆಸ್ಸಿಗರು ಇವಿಎಂ ಕಡೆ ಬೊಟ್ಟು ಮಾಡಿ ತೋರಿಸುತ್ತಾರೆ.
ಗೆದ್ದಾಗ ಇವಿಎಂ ಬಗ್ಗೆ ಸೊಲ್ಲೆತ್ತುವುದಿಲ್ಲ, ಸೋತು ನೆಲಕ್ಕುರುಳಿದಾಗ ಮಾತ್ರ ಇವಿಎಂ ದೋಷ ಎಂದು ಆರೋಪಿಸುವುದು ಕಾಂಗ್ರೆಸ್ ಪಕ್ಷದ ಚಾಳಿಯಾಗಿದೆ. ಸರ್ವೋಚ್ಚ ನ್ಯಾಯಾಲಯ ಮತ್ತೆ ಮತ್ತೆ ಮುಖಕ್ಕೆ ಮಂಗಳಾರತಿ ಎತ್ತಿದರೂ, ಇನ್ನೂ ಕೂಡ ಪ್ರಜಾಪ್ರಭುತ್ವದ ಸುಧಾರಣಾ ವ್ಯವಸ್ಥೆಯನ್ನು ಅಣಕಿಸುತ್ತಿರುವ ಕಾಂಗ್ರೆಸ್ಸಿಗರ ನಡವಳಿಕೆ ಈ ಹಿಂದೆ ಪ್ರಜಾಪ್ರಭುತ್ವದ ಹೆಸರಿನಲ್ಲಿ ನಡೆಸಿದ ಪಾಳೇಗಾರಿಕೆ ರಾಜಕಾರಣವನ್ನು ಬಯಸುವ ಮನಸ್ಥಿತಿ ಬಿಂಬಿಸುತ್ತದೆ ಎಂದಿದ್ದಾರೆ.












Click it and Unblock the Notifications