ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಅಚ್ಚರಿ ಹೇಳಿಕೆ ನೀಡಿದ ಬಿ ವೈ ವಿಜಯೇಂದ್ರ
ಬೆಂಗಳೂರು, ಜುಲೈ 04: ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬುತ್ತಿದೆ. ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದ ಅವರು, ರಾಜ್ಯದ ಕಾಂಗ್ರೆಸ್ ಸರಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಸರಕಾರಕ್ಕೆ ಅಸ್ಥಿರತೆ ಕಾಡುತ್ತಿದೆ. ಕಾಂಗ್ರೆಸ್ ಒಳಜಗಳ ಮಿತಿ ಮೀರಿದೆ. ಹಾದಿ ಬೀದಿ ಹೊಡೆದಾಟ ಮುಂದುವರೆದಿದೆ. ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ ಎಂದು ಹೇಳಿದರು.

ನರೇಂದ್ರ ಮೋದಿಜೀ ಅವರು 3ನೇ ಬಾರಿಗೆ ಅಧಿಕಾರಕ್ಕೆ ಏರಿದ್ದಾರೆ. ಇದು ದೇಶದ ಕಾರ್ಯಕರ್ತರ ಪರಿಶ್ರಮದ ಫಲ; ಇದೊಂದು ಐತಿಹಾಸಿಕ ಗೆಲುವು ಎಂದರು. ಇಂಡಿ ಒಕ್ಕೂಟ ಪೊಳ್ಳು ಭರವಸೆ ಮೂಲಕ ಅಧಿಕಾರ ಪಡೆಯಲು ಯತ್ನಿಸಿತ್ತು. ಆದರೆ, ಪ್ರಜ್ಞಾವಂತ ಮತದಾರರು ಅವರ ಷಡ್ಯಂತ್ರವನ್ನು ಬೆಂಬಲಿಸಲಿಲ್ಲ ಎಂದು ತಿಳಿಸಿದರು. ಮಾನ್ಯ ನಡ್ಡಾಜೀ, ಅಮಿತ್ ಶಾ ಅವರ ನೇತೃತ್ವದಲ್ಲಿ ಇದು ಐತಿಹಾಸಿಕ ಜಯಭೇರಿ ಎಂದು ಹೆಮ್ಮೆಯಿಂದ ನುಡಿದರು.
ಅಧಿಕಾರ ದರ್ಪ, ಅಧಿಕಾರ ದುರುಪಯೋಗದಿಂದ 18ರಿಂದ 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಸರಕಾರಕ್ಕೆ ನಮ್ಮ ಕಾರ್ಯಕರ್ತರು ಪಾಠ ಕಲಿಸಿದ್ದಾರೆ. ಅವರ ಪರಿಶ್ರಮದಿಂದ, ದಬ್ಬಾಳಿಕೆ ನಡುವೆ ಎನ್ಡಿಎ 19 ಸಂಸದರನ್ನು ಗೆದ್ದಿದೆ. ಅದರ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದು ಹೇಳಿದರು. ಕರ್ನಾಟಕದ ಪೊಳ್ಳು ಭರವಸೆ, ಒಡೆದಾಳುವ ನೀತಿ, ತುಷ್ಟೀಕರಣದ ಕಾಂಗ್ರೆಸ್ ಸರಕಾರದ ನೀತಿಯನ್ನು ಜನರು ಧಿಕ್ಕರಿಸಿ ನಮಗೆ ಬೆಂಬಲ ನೀಡಿದ್ದಾರೆ. ಫಟಾಪಟ್ ಸುಳ್ಳಿನ ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ ಎಂದು ವಿವರಿಸಿದರು.
ಬಿಜೆಪಿ ಮತ ಪ್ರಮಾಣ ಹೆಚ್ಚಾಗಿದೆ. 9 ಸಂಸದರನ್ನು ಗೆದ್ದಿದ್ದಾಗಿ ತಮ್ಮ ಬೆನ್ನು ತಟ್ಟಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ಬಿಜೆಪಿ-ಜೆಡಿಎಸ್ 142ರಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಲೀಡ್ ಪಡೆದಿದೆ. ಇದನ್ನು ಕಾಂಗ್ರೆಸ್ಸಿನ ಸಿಎಂಗೆ ನೆನಪು ಮಾಡುವುದಾಗಿ ಹೇಳಿದರು.
ಬಿಜೆಪಿ ಹಿಂದೆ ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಕೊಟ್ಟಿತ್ತು. ಆದರೆ, ಕಾಂಗ್ರೆಸ್ ಪಕ್ಷವು ಸುಳ್ಳು ಆರೋಪ ಮಾಡಿ ಚುನಾವಣೆ ಎದುರಿಸಿತ್ತು. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವು ಜನರ ಭರವಸೆಗಳನ್ನು ನುಚ್ಚುನೂರು ಮಾಡಿದೆ. ಗ್ಯಾರಂಟಿಗಳ ಮೂಲಕ ಒಳಿತು ಮಾಡುವುದಾಗಿ ಹೇಳಿದ ಕಾಂಗ್ರೆಸ್, ಭ್ರಷ್ಟಾಚಾರರಹಿತ ಆಡಳಿತದ ಭರವಸೆ ಕೊಟ್ಟಿತ್ತು. ಇವರ ಆಡಳಿತವೈಖರಿ, ಹಿಂದೆಂದೂ ಕಾಣದ ಭ್ರಷ್ಟಾಚಾರದ ಹಗರಣ ಹೊರಬರುತ್ತಿದೆ. ಇವರ ಮುಖವಾಡ ಕಳಚಿಬಿದ್ದಿದೆ ಎಂದರು.
ನಾಯಿ ಬಾಲ ಡೊಂಕು ಎಂಬಂತೆ ಪರಿಸ್ಥಿತಿ ಕಾಂಗ್ರೆಸ್ಸಿನದು. ವಾಲ್ಮೀಕಿ ನಿಗಮದಲ್ಲಿ ದಲಿತ ಸಮುದಾಯದ ಅನುಕೂಲಕ್ಕಾಗಿ ಕೊಟ್ಟ ಹಣವನ್ನು ಭ್ರಷ್ಟಾಚಾರಕ್ಕೆ ಬಳಸಿದ್ದಾರೆ. ಮೈಸೂರಿನ ಮೂಡಾ ಹಗರಣದಲ್ಲಿ ಸಿಎಂ ಕುಟುಂಬದವರ ಹೆಸರು ಕೇಳಿಬರುತ್ತಿದೆ. ಇದು ಸುಮಾರು 3ರಿಂದ 4 ಸಾವಿರ ಕೋಟಿ ಮೊತ್ತದ್ದು. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಜನವಿರೋಧಿ ಸರಕಾರ ಆಡಳಿತ ನಡೆಸುತ್ತಿದೆ ಎಂದು ವಿಜಯೇಂದ್ರ ಅವರು ಟೀಕಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಅವರು ಖಂಡಿಸಿದರು. ರಾಮೇಶ್ವರಂ ಕೆಫೆ ಸ್ಫೋಟ, ವಿಧಾನಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಕೂಗಿದ ಪ್ರಕರಣವನ್ನು ಉಲ್ಲೇಖಿಸಿದರು. 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ಸರಕಾರ ಕೊಟ್ಟ ಪರಿಹಾರ ಹಣವನ್ನು ಸರಿಯಾಗಿ ನೀಡಿಲ್ಲ ಎಂದು ಆಕ್ಷೇಪಿಸಿದರು. ಇದು ರೈತ ವಿರೋಧಿ ಸರಕಾರ ಎಂದು ದೂರಿದರು. ಮೇಕೆದಾಟು ಯೋಜನೆ ಪಾದಯಾತ್ರೆ, ಹೋರಾಟವನ್ನು ಪ್ರಸ್ತಾಪಿಸಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆ ಯೋಜನೆಗೆ ಒಂದೇ ಒಂದು ರೂಪಾಯಿಯನ್ನೂ ಮೀಸಲಿಟ್ಟಿಲ್ಲವೇಕೆ ಎಂದು ಕೇಳಿದರು.
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಭಾಷಣವನ್ನೂ ಅವರು ಪ್ರಸ್ತಾಪಿಸಿದರು. ಅವರು ಹಿಂದೂಗಳ ತೇಜೋವಧೆ, ಅವಮಾನ ಮಾಡಿದ್ದಾರೆ. ಜಮೀರ್ ಅಹ್ಮದ್ ಎಂಬ ಬೇಜವಾಬ್ದಾರಿ ಸಚಿವರಿದ್ದು, ಅವರ ಮಾತಿನಲ್ಲೂ ಅಹಂಕಾರದ ಹೇಳಿಕೆ ಇದೆ ಎಂದು ಖಂಡಿಸಿದರು.
ಲೂಟಿ ಮಾಡುವ, ಅಭಿವೃದ್ಧಿ ಶೂನ್ಯ ಸರಕಾರ ಇಲ್ಲಿದೆ. ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಶಾಲೆ ಮಕ್ಕಳು ಓಡಾಟಕ್ಕೆ ಬಸ್ ಇಲ್ಲದೆ ಪರದಾಡುವಂತಾಗಿದೆ. ಬಂಡವಾಳ ಹೂಡಿಕೆ ಶೂನ್ಯ ಎಂಬ ಸ್ಥಿತಿಗೆ ತಲುಪಿದೆ ಎಂದು ವಿವರಿಸಿದರು. ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ ಸೇರಿ ಎಲ್ಲ ದರ ಏರಿಕೆ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರಕಟಿಸಿದರು. ಅಧಿವೇಶನದಲ್ಲಿ ಜನವಿರೋಧಿ ಸರಕಾರದ ಕಿವಿ ಹಿಂಡಲಿದ್ದೇವೆ ಎಂದರು.












Click it and Unblock the Notifications