ರಾಜ್ಯ ಸರ್ಕಾರದ ಆಡಳಿತ ಯಂತ್ರ ರಿಪೇರಿ ಮಾಡಿ: ಕಾಂಗ್ರೆಸ್ ಹೈಕಮಾಂಡ್ಗೆ ವಿಜಯೇಂದ್ರ ಆಗ್ರಹ
ಬೆಂಗಳೂರು, ಸೆಪ್ಟೆಂಬರ್ 10: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಬಂದರೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆಗಳು ಜೋರಾಗಿದೆ. ಜೊತೆಗೆ ಸಚಿವರು, ಪಕ್ಷದ ಹಿರಿಯರ ನಾಯಕರು ಕೂಡ ಸಿಎಂ ಆಗುವ ಆಸೆಯನ್ನು ಹೊರಹಾಕುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಕಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 'ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಮೊದಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ಸಿಗರು ಮುಸುಕಿನ ಗುದ್ದಾಟ ಆರಂಭಿಸಿದ್ದಾರೆ.

ಸುಳ್ಳು ಭರವಸೆಗಳ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ತುಕ್ಕುಹಿಡಿಸಿದೆ. ಜನವಿರೋಧಿ ಆಡಳಿತಕ್ಕೆ ಹೆಸರಾಗಿ ಭ್ರಷ್ಟತೆಯ ಕಿರೀಟ ಮುಡಿಗೇರಿಸಿಕೊಂಡಿದೆ. ಜನರು ಇದರಿಂದ ಪರಿತಪಿಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ನಿಜಕ್ಕೂ ನೈತಿಕತೆ ಇದ್ದರೆ, ಕರ್ನಾಟಕದ ಜನರ ಬಗ್ಗೆ ಕಾಳಜಿ ಇದ್ದರೆ ಕೆಟ್ಟು ಹಾಳಾಗಿರುವ ರಾಜ್ಯ ಸರ್ಕಾರದ ಆಡಳಿತ ಯಂತ್ರ ರಿಪೇರಿ ಮಾಡುವ ಪ್ರಯತ್ನ ಮಾಡಲಿ ಎಂದು ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡ್ಗೆ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಮುಸುಕಿನ ಗುದ್ದಾಟ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಅತ್ತ ಈ ಪ್ರಕರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸುತ್ತಿದ್ದರೆ, ಇತ್ತ ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗುತ್ತಾರೆ ಎನ್ನುವ ಲೆಕ್ಕಾಚಾರ ಜೋರಾಗಿದೆ.
ಮೊದಲಿನಿಂದಲೂ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಂದೆಡೆಯಾದರೆ, ಪಕ್ಷದಲ್ಲಿ ಹಿರಿಯ ನಾಯಕರೆನಿಸಿಕೊಂಡವರ ಚಿತ್ತವೂ ಸಿಎಂ ಕುರ್ಚಿಯ ಮೇಲಿದೆ. ಇತ್ತೀಚಿಗಷ್ಟೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ನಡೆದ ಗೌಪ್ಯ ಸಭೆ ಈ ಅನುಮಾನಕ್ಕೆ ಪುಷ್ಠಿಕೊಟ್ಟಿದೆ. ಜೊತೆಗೆ ಸತೀಶ್ ಜಾರಕಿಹೊಳಿಯವರು ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿರುವುದು ಹಲವು ಚರ್ಚೆಯನ್ನು ಹುಟ್ಟುಹಾಕಿದೆ.












Click it and Unblock the Notifications