Breaking: ವಿಧಾನ ಪರಿಷತ್ ಚುನಾವಣೆ: ಚುಂಚನಸೂರುಗೆ ಬಿಜೆಪಿ ಟಿಕೆಟ್
ಬೆಂಗಳೂರು ಜುಲೈ 30: ಮುಂದಿನ ತಿಂಗಳ ಆಗಸ್ಟ್ 11ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿಯು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರನ್ನು ಅಭ್ಯರ್ಥಿನ್ನಾಗಿ ಘೋಷಿಸಿದೆ. ಸಿಎಂ ಇಬ್ರಾಹಿಂ ಕಳೆದ ಮಾರ್ಚ್ 31ರಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿ ಹೊರತು ಉಳಿದ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
ಕಾಂಗ್ರೆಸ್ ನಲ್ಲಿದ್ದ ಸಿಎಂ ಇಬ್ರಾಹಿಂ ಅವರು ಕಳೆದ ಮಾರ್ಚ್ 31ರಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು. ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆ ತೆರವಾಗಿದ್ದ ಅವರ ಸ್ಥಾನಕ್ಕೆ ಆ.11ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿತ್ತು.
ಮೂಲತಃ ಕಾಂಗ್ರೆಸ್ ನಲ್ಲಿದ್ದ ಬಾಬುರಾವ್ ಚಿಂಚನಸೂರ್ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವರಾಗಿದ್ದರು. ಬಳಿಕ ಕಳೆದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಸೋಲು ಅನುಭವಿಸಲು ಕಾರಣರಾಗಿದ್ದರು. ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸದ್ಯ ಕಾರ್ಯನಿರ್ವಹಿಸುತ್ತಿದ್ದಾರ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗುರಮಿಠಕಲ್ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಅವರಿಗೆ ಸದ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮಣೆ ಹಾಕಲಾಗಿದೆ.
ನಿಗದಿಯಂತೆ ಆಗಸ್ಟ್ 11ಕ್ಕೆ ಉಪಚುನಾವಣೆ ನಡೆಯಲಿದ್ದು, ಅಂದೇ ಮತ ಎಣಿಕೆ ಸಹ ನಡೆಯಲಿದೆ. ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ನಂತರ 5ಗಂಟೆಗೆ ಮತ ಎಣಿಕೆ ನಡೆಯಲಿದೆ. ಆಗಸ್ಟ್ 1ರವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.