ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಉಪಟಳ: ಅರಣ್ಯ ಪ್ರಿಯರ ಬೇಸರ
ಬೆಂಗಳೂರು, ಆಗಸ್ಟ್ 2: ಕರ್ನಾಟಕದ ಅರಣ್ಯ ಪ್ರದೇಶವಾದ ಬಂಡೀಪುರ ರಾಷ್ಟ್ರೀಯ ಉದ್ಯಾನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಿರುವುದು ಪರಿಸರ ಪ್ರೇಮಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತೀವ್ರ ಅಸಮಧಾನಕ್ಕೆ ಕಾರಣವಾಗಿದೆ.
ಕಳೆದ 15 ವರ್ಷಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕರ್ನಾಟಕದಿಂದ ತಮಿಳುನಾಡು ಹಾಗೂ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅನುಮತಿ ನೀಡಿರಲಿಲ್ಲ. ಈ ಪ್ರದೇಶದಲ್ಲಿ ಅವ್ಯಾಹತವಾಗಿರುವ ಕಾಡು ಪ್ರಾಣಿಗಳು, ಜಲಚರವನ್ನು ಸಂಪಕ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾತ್ರಿ ವೇಳೆ ಸಂಚಾರ ನಿಷೇಧಿಸಿ ಆದೇಶವನ್ನು ಹೊರಡಿಸಿತ್ತು.
ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬೇಡ ಸುಪ್ರೀಂಗೆ ವರದಿ
ಅಲ್ಲದೆ ಈ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರದಿಂದ ಭಾರಿ ಪ್ರಮಾಣದ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಹಿಂದೆ ವಾಹನ ಸಂಚಾರ ನಿಷೇಧ ಕ್ರಮ ಕೈಗೊಂಡಿತ್ತು. ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಕೂಡ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಒತ್ತಡ ಬಂದಿತ್ತಾದರೂ ಆಗ ಸರ್ಕಾರ ಮಣಿದಿರಲಿಲ್ಲ.
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅನುಮತಿ ನೀಡಲು ತಮಿಳುನಾಡು ಹಾಗೂ ಕರ್ನಾಟಕದ ಸಾರಿಗೆ ಲಾಬಿ ಸಾಕಷ್ಟು ಪ್ರಯತ್ನ ನಡೆಸಿದರೂ ಕೂಡ ಯಾವುದೇ ಪ್ರಯೋಜನ ಆಗಿರಲಿಲ್ಲ. ರಾತ್ರಿ ವೇಳೆ ವಾಹನ ಸಂಚಾರದಿಂದ ಕಾಡು ಪ್ರಾಣಿಗಳು ಸಾವನ್ನಪ್ಪುವುದಲ್ಲದೆ ಜನರು ಅಲ್ಲಲ್ಲಿ ವಾಹನಗಳಿಂದ ಕೆಳಗಿಳಿದು ಕಾಡು ಪ್ರಾಣಿಗಳನ್ನು ರಾತ್ರಿ ವೇಳೆ ನೋಡುವ ದುಸ್ಸಾಹಸಕ್ಕೂ ಕೈ ಹಾಕುವುದರಿಂದ ಅನೇಕ ಅವಘಡಗಳು ಸಭವಿಸಿವೆ.
ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳ ಸುರಕ್ಷತೆ ಹಾಗೂ ವಾಹನಗಳ ಮೇಲೆ ಪ್ರಾಣಗಳು ನಡೆಸಬಹುದಾದ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಡಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿತ್ತು. ಈಗ ಏಕಾ ಏಕಿ ರಾಜ್ಯ ಸರ್ಕಾರ ಹಳೇ ನಿರ್ಧಾರದಿಂದ ಹಿಂದೆ ಸರಿದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.