ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಸಂಪುಟದಿಂದ ಹೊರಕ್ಕೆ?
Recommended Video
ಬೆಂಗಳೂರು, ಜೂನ್ 13 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಶುಕ್ರವಾರ ನಡೆಯಲಿದೆ. ಮೂವರು ಶಾಸಕರು ಸಂಪುಟವನ್ನು ಸೇರಲಿದ್ದಾರೆ. ಸಚಿವ ಬಂಡೆಪ್ಪ ಕಾಶೆಂಪುರ್ ಅವರು ಸಂಪುಟದಿಂದ ಹೊರಬರುವ ಸಾಧ್ಯತೆ ಇದೆ.
ಗುರುವಾರ ಸಂಜೆ ಜೆಡಿಎಸ್ ವಲಯದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಂಡೆಪ್ಪ ಕಾಶೆಂಪುರ್ ಅವರ ಬದಲು ಹುಣಸೂರು ಶಾಸಕ ಎಚ್.ವಿಶ್ವನಾಥ್ ಸಂಪುಟ ಸೇರಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಜೆಡಿಎಸ್ ಕೋಟಾದಲ್ಲಿ 2, ಕಾಂಗ್ರೆಸ್ ಕೋಟಾದಲ್ಲಿ 1 ಸಚಿವ ಸ್ಥಾನ ಸದ್ಯ ಖಾಲಿ ಇದೆ. ಇಬ್ಬರು ಪಕ್ಷೇತರ ಶಾಸಕರು ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ.
ಜೆಡಿಎಸ್ ತನ್ನ ಪಾಲಿನ 1 ಸ್ಥಾನವನ್ನು ಪಕ್ಷೇತರ ಶಾಸಕರಿಗೆ ಬಿಟ್ಟುಕೊಡಲಿದೆ. ಮತ್ತೊಂದು ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಪಕ್ಷದ ಯಾವ ನಾಯಕರು ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ....

ಬಂಡೆಪ್ಪ ಕಾಶೆಂಪುರ್
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕನಸಿನ ಮಹತ್ವದ ಯೋಜನೆ ಸಾಲಮನ್ನಾ. ಸಹಕಾರ ಸಚಿವರು ಇದನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ಬಂಡೆಪ್ಪ ಕಾಶೆಂಪುರ್ ಅವರನ್ನು ಸಂಪುಟದಿಂದ ಕೈ ಬಿಡಲು ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ.

ರಾಜ್ಯಾಧ್ಯಕ್ಷರಾಗಿ ನೇಮಕ
ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪುರ್ ಅವರನ್ನು ಸಂಪುಟದಿಂದ ಕೈ ಬಿಟ್ಟು ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತದೆ. ಆ ಮೂಲಕ ಉತ್ತರ-ಕರ್ನಾಟಕ, ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.

ಎಚ್.ವಿಶ್ವನಾಥ್ ಸಂಪುಟಕ್ಕೆ
ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ಅವರ ಸ್ಥಾನಕ್ಕೆ ಹುಣಸೂರು ಶಾಸಕ ಎಚ್.ವಿಶ್ವನಾಥ್ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಬಿ.ಎಂ.ಫಾರೂಕ್ ಸಂಪುಟಕ್ಕೆ
ಜೆಡಿಎಸ್ ಕೋಟಾದಲ್ಲಿ 2 ಸ್ಥಾನ ಖಾಲಿ ಇದೆ. ಒಂದು ಸ್ಥಾನವನ್ನು ಪಕ್ಷೇತರ ಶಾಸಕರಿಗೆ ಬಿಟ್ಟುಕೊಟ್ಟು ಮತ್ತೊಂದಕ್ಕೆ ಅಲ್ಪ ಸಂಖ್ಯಾತ ನಾಯಕರನ್ನು ಸೇರಿಸಿಕೊಳ್ಳಲಾಗುತ್ತದೆ. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಸಂಪುಟ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.












Click it and Unblock the Notifications