ಬಾರ್ ಲೈಸೆನ್ಸ್: ಗೊಂದಲ ತಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು, ಅಕ್ಟೋಬರ್ 06: ರಾಜ್ಯದಲ್ಲಿ ಹೊಸ ಮದ್ಯದಂಗಡಿ ತೆರೆಯಲು ಅವಕಾಶ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ಗೊಂದಲ ಮೂಡಿಸಿವೆ.
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 1,000 ಮದ್ಯದಂಗಡಿಗಳನ್ನು ಪ್ರಾರಂಭಿಸಲು ಉದ್ದೇಶಿಸಿದೆ ಎಂಬ ಊಹಾಪೋಹಗಳ ನಡುವೆ, ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸೂಕ್ತ ಸ್ಥಳಗಳಲ್ಲಿ ಮದ್ಯದಂಗಡಿಗಳಿಗೆ ಹೊಸ ಪರವಾನಗಿ ನೀಡಲಾಗುವುದು ಎಂದು ಉಪ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ, ಸರ್ಕಾರ ಹೊಸದಾಗಿ ಮದ್ಯದಂಗಡಿ ಆರಂಭಿಸುವುದಿಲ್ಲ. ಮದ್ಯದಂಗಡಿ ಪ್ರಸ್ತಾವನೆಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಸಚಿವರು ಹೇಳಿದ್ದರು, ಆದರೆ ನಾವು ಯಾವುದೇ ಹೊಸ ಮದ್ಯದ ಅಂಗಡಿಗಳನ್ನು ತೆರೆಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆದರೆ, ಇದಕ್ಕೆ ವ್ಯತಿರಿಕ್ತ ಎಂಬಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಹೊಸ ಮದ್ಯದಂಗಡಿ ಆರಂಭಿಸುವ ಪ್ರಸ್ತಾವನೆಯನ್ನು ಪರಿಗಣಿಸಿ ಕೆಲವೆಡೆ ಪರವಾನಗಿ ನೀಡಲಾಗುವುದು. ಕಳೆದ 30 ವರ್ಷಗಳಿಂದ ಮದ್ಯದ ಪರವಾನಗಿಗಳನ್ನು ನೀಡಲಾಗಿಲ್ಲ. ನಾವು ಹಳ್ಳಿಗಳಲ್ಲಿ ಬಾರ್ಗಳನ್ನು ತೆರೆಯುತ್ತಿಲ್ಲ. ಪ್ರಸ್ತಾವನೆಯನ್ನು ಪರಿಗಣಿಸಿ ಸೂಕ್ತ ಪ್ರದೇಶಗಳಲ್ಲಿ ಮದ್ಯಕ್ಕೆ ಅನುಮತಿ ನೀಡುತ್ತೇವೆ. ಜನರು ಕುಡಿಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ:
ಇತ್ತೀಚೆಗೆ 3 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕಳೆದ ತಿಂಗಳು ಹೇಳಿದ್ದರು.
ಈ ಬಗ್ಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು. ಕಾಂಗ್ರೆಸ್ ಐದು ಗ್ಯಾರಂಟಿಗಾಗಿ ಹಣವನ್ನು ಸಂಗ್ರಹಿಸುವ ಪ್ರಯತ್ನ ಮಾಡುತ್ತಿದೆ. ಎಚ್ಡಿ ಕುಮಾರಸ್ವಾಮಿ ಸರ್ಕಾರವು ಕರ್ನಾಟಕವನ್ನು 'ಕುಡುಕ ರಾಜ್ಯ' ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಮದ್ಯದಂಗಡಿ ಈ ವಿಚಾರದಲ್ಲಿ ಸಿಎಂ ಹಾಗೂ ಉಪಮುಖ್ಯಮಂತ್ರಿ ಪರಸ್ಪರ ವ್ಯತಿರಿಕ್ತ ಹೇಳಿಕೆ ನೀಡಿರುವ ಬೆನ್ನಲ್ಲೇ ಇದು ಸಹಜವಾಗಿ ಮತ್ತೆ ಬಿಜೆಪಿ ಜೆಡಿಎಸ್ಗೆ ಟೀಕೆಗೆ ಕಾರಣವಾಗಲಿದೆ.












Click it and Unblock the Notifications