ʼಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥ, ಹುಚ್ಚಾಸ್ಪತ್ರೆಗೆ ಸೇರಿಸಬೇಕುʼ
ಬೆಂಗಳೂರು, ನವೆಂಬರ್ 01: ವಕ್ಫ್ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಮಾನಸಿಕವಾಗಿ ಅಸ್ವಸ್ಥರಾಗಿರುವ ಯತ್ನಾಳ್ ಅವರನ್ನ ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಹೇಳಿಕೆಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ.ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಮಾತನಾಡಿ, ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದರು.
ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ನಾನು ಶಕ್ತಿ ಯೋಜನೆ ವಿಚಾರವಾಗಿ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಕೇಳಿಸಿಕೊಂಡು ನೋಡಿ ಎಂದರು.
ಶಕ್ತಿ ಯೋಜನೆ ಕುರಿತು ಶೇ. 5-10 ರಷ್ಟು ಮಹಿಳೆಯರ ಅಭಿಪ್ರಾಯಗಳನ್ನು ನಾನು ಹೇಳಿದನೇ ಹೊರತು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಒಂದಷ್ಟು ಜನ ಮಹಿಳೆಯರು ಟಿಕೆಟ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರೂ ಬಸ್ ನಿರ್ವಾಹಕರು ಹಣ ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಇದರ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದ್ದೆ ಅಷ್ಟೇ" ಎಂದು ಸ್ಪಷ್ಟಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಒಗ್ಗಟ್ಟಾಗಿ ಇರಿ ಎನ್ನುವ ಸಂದೇಶ ಕೊಟ್ಟಿದ್ದು ಯಾವ ಕಾರಣಕ್ಕೆ ಎಂದು ಕೇಳಿದಾಗ, ಅವರು ವಿವಿಧ ಸಂದರ್ಭಗಳನ್ನು ವಿವರಿಸಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ನಾನು ಅಧ್ಯಕ್ಷನಾದ ಹಾಗೂ ಡಿಸಿಎಂ ಆದ ನಂತರ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದಾದರೂ ಅಹಿತಕರ ಘಟನೆಗಳು ನಡೆದಿವೆಯೇ? ನಾವುಗಳು ಅಚ್ಚುಕಟ್ಟಾಗಿ ಸರ್ಕಾರ ಹಾಗೂ ಪಕ್ಷವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ" ಎಂದರು.
ಒಂದಷ್ಟು ನಾಯಕರು ದೆಹಲಿಗೆ ಬಂದು ಭೇಟಿ ಮಾಡುತ್ತಿರುವ ಬಗ್ಗೆ ಖರ್ಗೆ ಅವರು ಪ್ರಸ್ತಾಪಿಸಿದ ಬಗ್ಗೆ ಕೇಳಿದಾಗ, "ಯಾರೂ ದೆಹಲಿಗೆ ತೆರಳಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ವಿಚಾರದಲ್ಲೂ ಮಧ್ಯಪ್ರವೇಶ ಮಾಡಿಲ್ಲ. ಇದುವರೆಗೂ ಇಂತಹ ಘಟನೆ ನಡೆದಿಲ್ಲ. ಅವರು ಹಿರಿಯರಾಗಿ ಸಲಹೆ ನೀಡಿದ್ದಾರೆ. ರಾಷ್ಟ್ರ ರಾಜಕಾರಣದ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ್ದಾರೆ. ಮೀಸಲಾತಿ ವಿಚಾರವಾಗಿ ಒಂದೊಂದು ರಾಜ್ಯ ಒಂದೊಂದು ನೀತಿ ಅಳವಡಿಸಿಕೊಂಡಿವೆ. ಸ್ಥಳೀಯವಾಗಿ ನಿಮ್ಮ ನೀತಿಯನ್ನು ನೀವು ನಿರೂಪಿಸಿಕೊಳ್ಳಿ. ಅದರಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮಾರ್ಮಿಕವಾಗಿ ಅವರು ಹೇಳಿದ್ದಾರೆ ಎಂದರು.
ಮಹಾರಾಷ್ಟ್ರದಲ್ಲಿಯೂ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕೇಳಿದಾಗ, ಕರ್ನಾಟಕ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು, ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿವೆ. ಬಿಜೆಪಿ ಹಾಗೂ ಇತರೇ ಪಕ್ಷಗಳ ಆಡಳಿತವಿರುವ ರಾಜ್ಯಗಳು ಸಹ ನಮ್ಮದೇ ಯೋಜನೆಗಳನ್ನು ಅನುಕರಿಸಿವೆ. ಇದು ನಮಗೆ ಹೆಮ್ಮೆ ಹಾಗೂ ಗರಿಮೆಯ ವಿಚಾರ ಎಂದು ಹೇಳಿದರು.












Click it and Unblock the Notifications