ಇಂದೇ ಬಿಜೆಪಿ ರಾಜ್ಯಾಧ್ಯಕ್ಷ ಅಭ್ಯರ್ಥಿ ಹೆಸರು ಘೋಷಣೆ?
ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ವಿಚಾರವು ಬಣ ಬಡಿದಾಟದ ಕಿಡಿ ಹೊತ್ತಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆಯಲಿರುವ ಹಿನ್ನೆಲೆ ಇಂದೇ ಅಭ್ಯರ್ಥಿ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಹೈಕಮಾಂಡ್ ಭೇಟಿಯಾಗಲು ಇಂದು ದೆಹಲಿಗೆ ತೆರಳಲಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬಣದಲ್ಲಿರುವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಬಿ.ಪಿ.ಹರೀಶ್, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಹಲವರು ದೆಹಲಿಗೆ ಹೋಗಲಿದ್ದು, ಬಿಜೆಪಿ ಹೈಕಮಾಂಡ್ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಾಯಕರೆಲ್ಲರೂ ದೆಹಲಿಯಲ್ಲೇ ಕೆಲದಿನ ವಾಸ್ತವ್ಯ ಹೂಡಲಿದ್ದಾರೆ. ಹೈಕಮಾಂಡ್ ನಾಯಕರನ್ನು ಭೇಟಿಯಾಗಿಯೇ ವಾಪಸ್ ಬರಲು ನಿರ್ಧರಿಸಿದ್ದಾರೆ.

ಈಗಾಗಲೇ ಜೆ.ಪಿ.ನಡ್ಡಾ ಅವರಿಗೆ ಪತ್ರದ ಮೂಲಕ ವಿಜಯೇಂದ್ರ ಅವರ ಬಗ್ಗೆ ದೂರು ನೀಡಿರುವ ಯತ್ನಾಳ್ ಹಾಗೂ ಹಲವು ನಾಯಕರು ದೆಹಲಿಯಲ್ಲೇ ತಮ್ಮ ಬಣದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಹೆಸರು ಘೋಷಣೆ ಮಾಡಲು ಸಜ್ಜಾಗಿದೆ. ನಿನ್ನೆ ಯತ್ನಾಳ್ ಬಣದ ನಾಯಕರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.
ತಮ್ಮ ಬಣದಿಂದ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಗೆ ಯಾರನ್ನು ಸ್ಪರ್ಧೆಗೆ ಇಳಿಸಬೇಕು ಎಂಬುದು ದೆಹಲಿಯಲ್ಲೇ ನಿರ್ಧಾರವಾಗಲಿದೆ. ಸದ್ಯ ಈ ಬಣದಿಂದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕುಮಾರ್ ಬಂಗಾರಪ್ಪ ಅವರ ಹೆಸರು ಮುನ್ನೆಲೆಯಲ್ಲಿದೆ. ದೆಹಲಿಯಲ್ಲಿ ಅಭ್ಯರ್ಥಿ ಹೆಸರು ಅಂತಿಮವಾಗಲಿದ್ದು, ಇಂದು ಅಥವಾ ನಾಳೆ ಘೋಷಣೆಯಾಗಲಿದೆ ಎನ್ನಲಾಗಿದೆ.

ಯತ್ನಾಳ್ ಬಣವು ಜೆ.ಪಿ.ನಡ್ಡಾ ಅವರ ಭೇಟಿಗೆ ಸಮಯ ಕೇಳಿದ್ದು, ಇನ್ನೂ ಅಲ್ಲಿಂದ ಒಪ್ಪಿಗೆ ಸಿಕ್ಕಿಲ್ಲ. ಹಾಗಾಗಿ ಎಲ್ಲ ನಾಯಕರು ದೆಹಲಿಯಲ್ಲೇ ಉಳಿದುಕೊಂಡು ನಡ್ಡಾರನ್ನ ಭೇಟಿಯಾಗುವ ತವಕದಲ್ಲಿದೆ. ಯಾವ ಕಾರಣಕ್ಕೂ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಟ್ಟು ಹಿಡಿಯಲಿದ್ದಾರೆ.
ಈಗಾಗಲೇ ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಕೂಡ ವಿಜಯೇಂದ್ರ ಬಗ್ಗೆ ಅಸಮಾಧಾನ ಹೊರಹಾಕಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಖುದ್ದಾಗಿ ಭೇಟಿಯಾಗಿ, ವಿಜಯೇಂದ್ರ ಅವರನ್ನು ಕೂಡಲೇ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಮನವಿ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬಾರದು ಎಂದು ಒತ್ತಡ ಹೇರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಕೂಡಲೇ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಯಿಸಿ ಎಂದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಗಂಭೀರವಾಗಿ ಪರಿಗಣಿಸುವುದಾಗಿ ಜೆ.ಪಿ.ನಡ್ಡಾ ಕೂಡ ಹೇಳಿದ್ದಾರಂತೆ. ಈಗ ಯತ್ನಾಳ್ ಬಣ ಕೂಡ ದೆಹಲಿಗೆ ಹೋಗುತ್ತಿದ್ದು, ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ. ಹೈಮಾಂಡ್ ನಾಯಕರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವುದೇ ಸದ್ಯದ ಕುತೂಹಲ.












Click it and Unblock the Notifications