ಡಿಕೆಶಿ ಬೆನ್ನು ಹತ್ತಿದ ಬಸನಗೌಡ ಪಾಟೀಲ್ ಯತ್ನಾಳ್: ರಾಜ್ಯ ಸರ್ಕಾರದಿಂದ ಕಾನೂನು ಸಮರ
ಬೆಂಗಳೂರು ಸೆಪ್ಟೆಂಬರ್ 5: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಬೆನ್ನು ಹತ್ತಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯ ಸರ್ಕಾರದಿಂದ ಕಾನೂನು ಸಮರ ಶುರುವಾಗಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ವಿರುದ್ಧ ಯತ್ನಾಳ್ ಸುಪ್ರೀ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಆದೇಶದ ಅನ್ವಯ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ್ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಎರಡು ಅರ್ಜಿಗಳನ್ನು ವಜಾ ಮಾಡಿತ್ತು.

ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್ ಗೆ ಯತ್ನಾಳ್ ಅವರು ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಇದರೊಂದಿಗೆ ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಸಮರ ಮುಂದುವರೆಸುವ ಸಂದೇಶ ನೀಡಿದ್ದಾರೆ.
ಇತ್ತ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ. ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ನಿಯಮಗಳ ಉಲ್ಲಂಘಿಸಿದೆ ಎಂದು ಮೇಲ್ಮನವಿ ಅರ್ಜಿಯಲ್ಲಿ ಪಿಸಿಬಿ ಆರೋಪಿಸಿದೆ.

ಏನಿದು ಪ್ರಕರಣ?
ಕಾರ್ಖಾನೆಯ ತ್ಯಾಜ್ಯವನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ. ಅಲ್ಲದೇ ಪರಿಸರ ಹಾಗೂ ಮಾಲಿನ್ಯ ನಿಯಮಗಳನ್ನು ಪಾಲಿಸದೆ ಎಥೆನಾಲ್ ಘಟಕ ಆರಂಭಿಸಲಾಗಿದೆ. ತ್ಯಾಜ್ಯವನ್ನು ಅವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಇದು ನೀರಿನ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಲಬುರಗಿ ವಲಯದ ಉಪ ಪರಿಸರ ಅಧಿಕಾರಿ ಡಾ.ಆದಮ್ ಸಾಬ್ ಎಂ.ಪಟೇಲ್ 'ಜಲ (ಮಾಲಿನ್ಯ ತಡೆ) ಕಾಯ್ದೆ-1974ರ ಸೆಕ್ಷನ್ 49 ಹಾಗೂ ಸಿಆರ್ಪಿಸಿ ಸೆಕ್ಷನ್ 200' ಅಡಿ ಖಾಸಗಿ ದೂರು ದಾಖಲಿಸಿದ್ದರು.
ತ್ಯಾಜ್ಯ ನೀರನ್ನು ಮುಲ್ಲಾಮಾರಿ ನದಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ದಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಜೊತೆಗೆ ಕಾರ್ಖಾನೆ ತೆರೆಯಲು ಹೈಕೋರ್ಟ್ ಅನುಮತಿ ನೀಡಿತ್ತು.
ಆದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದಕ್ಕೆ ಅನುಮತಿ ನೀಡಿರಲಿಲ್ಲ. ಇದರಿಂದಾಗಿ ಯತ್ನಾಳ್ ಪ್ರತಿಭಟನೆಯನ್ನೂ ನಡೆಸಿದ್ದರು. ಇದೊಂದು ರಾಜಕೀಯ ದ್ವೇಷ ಎಂದು ಯತ್ನಾಳ್ ಆರೋಪಿಸಿ ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಸಮರ ಶುರು ಮಾಡಿದ್ದಾರೆ.












Click it and Unblock the Notifications