ವಿಜಯೇಂದ್ರ ಇಳಿಸಲು ಪಟ್ಟು: ಮಾಜಿ ಸಿಎಂ ಜೊತೆಗೆ ಯತ್ನಾಳ್ ಬಣ ಮಹಾತಂತ್ರ
ಬೆಂಗಳೂರು, ಫೆಬ್ರವರಿ 06: ಬಿಜೆಪಿ ಪಕ್ಷವನ್ನ ಕಟ್ಟಿ ಬೆಳೆಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿಯ ಹಲವು ಸಮುದಾಯದ ನಾಯಕರು ಸಮರ ಸಾರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನ ಮೊದಲು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ್ ಬಣ ಪಣತೊಟ್ಟಿದ್ದು, ದೆಹಲಿಯಲ್ಲಿ ಯತ್ನಾಳ್ ಬಣದ ಹಲವು ನಾಯಕರು ವರಿಷ್ಠರ ಭೇಟಿಗೆ ಕಾದುಕುಳಿತ್ತಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮತ್ತಿತರ ನಾಯಕರು ಕರ್ನಾಟಕ ಭವನದಲ್ಲಿ ಸಭೆ ಸೇರಿ ಸಮಾಲೋಚನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ದ ಸಮರ ಸಾರಿರುವ ಯತ್ನಾಳ್ ಬಣ ಇದೀಗ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈಗಾಗಲೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಪಕ್ಷದ ಭಿನ್ನಮತೀಯ ನಾಯಕರು ಬುಧವಾರ ಸುದೀರ್ಘವಾಗಿ ಮಾತುಕತೆ ನಡೆಸಿದ್ದು, ಸಭೆಯಲ್ಲಿ ಮುಂದಿನ ಹೋರಾಟದ ಕುರಿತು ರಣತಂತ್ರ ರೂಪಿಸಿದ್ದಾರೆ. ಅಲ್ಲದೇ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ಮಹದಾಸೆಗೆ ಫಲ ಸಿಗಲಿಲ್ಲ. ಹೀಗಾಗಿ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಹೈಕಮಾಂಡ್ ನಾಯಕರಿಗೆ ದೂರು ನೀಡಲು ಯತ್ನಾಳ್ ಬಣ ಪಟ್ಟು ಹಿಡಿದಿದೆ.
ಬಿ ವೈ ವಿಜಯೇಂದ್ರ ಅವರ ವಿರುದ್ಧ ಯತ್ನಾಳ್ ಬಣ ರಣತಂತ್ರ ರೂಪಿಸಿದ್ರೆ, ಬಿ ವೈ ವಿಜಯೇಂದ್ರ ಪರ ಮಾಜಿ ಶಾಸಕ ರೇಣುಕಾಚಾರ್ಯ ಅವರ ಬ್ಯಾಟಿಂಗ್ ಬಿಸಿದ್ರು. ಅಲ್ಲದೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಟಸ್ಥ ಬಣದಲ್ಲಿ ಈವರೆಗೆ ಗುರುತಿಸಿಕೊಂಡಿದ್ದರು. ವಿಜಯೇಂದ್ರ ಅವರನ್ನು ಅಧ್ಯಕ್ಷ ರನ್ನಾಗಿ ಮುಂದುವರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಯತ್ನಾಳ್ ಬಣ ಹಾಗೂ ತಟಸ್ಥ ನಿಲುವಿನ ನಾಯಯರು ವರಿಷ್ಠರ ಮುಂದೆ ಸ್ಪಷ್ಟ ಸಂದೇಶ ರವಾನೆಗೆ ಮುಂದಾಗಿದ್ದಾರೆ. ಯಡಿಯೂರಪ್ಪ ಬಳಿ ನಾನೇ ಲಿಂಗಾಯತ ನಾಯಕ ಎಂದು ವಿಜಯೇಂದ್ರ ಬಿಂಬಿಸಿಕೊಳ್ಳುತ್ತಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದರೆ 2028ರಲ್ಲಿ ಮುಖ್ಯಮಂತ್ರಿಯಾಗಬಹುದು ಎಂದೂ ಲೆಕ್ಕಾಚಾರ ಹಾಕಿದ್ದಾರೆ. ಪಕ್ಷದ ಹಿರಿಯ ನಾಯಕರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ವಿಜಯೇಂದ್ರ ವಿರುದ್ಧ ಲಿಂಗಾಯತ ನಾಯಕರೆಲ್ಲ ಒಟ್ಟಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿ, ಬಿಜೆಪಿ ಪ್ರಧಾನ ಸಂಘಟನೆ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಕುಮಾರ್ ಬಂಗಾರಪ್ಪ ಅವರು ಭೇಟಿ ಮಾಡಿ ವಿಜಯೇಂದ್ರ ಕಾರ್ಯವೈಖರಿ ಬಗ್ಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಲಿಂಗಾಯತ ಸಮುದಾಯದ ನಾಯಕರೆಲ್ಲ ವರಿಷ್ಠರನ್ನು ಭೇಟಿ ಮಾಡಿ ತಮ್ಮ ನಿಲುವು ತಿಳಿಸಬೇಕು. ಅದಕ್ಕೂ ಮುನ್ನ, ಲಿಂಗಾಯತ ಸಂಸದರು ಹಾಗೂ ಶಾಸಕರು ಸಭೆ ನಡೆಸಿ ವಿಜಯೇಂದ್ರ ವಿರುದ್ಧದ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದು ಯತ್ನಾಳ್ ಬಣ ಮುಂದಾಗಿದೆ.












Click it and Unblock the Notifications