DCM DK Shivakumar: ರಾತ್ರೋರಾತ್ರಿ ನೀರು ಬಿಟ್ಟವರು ಯಾರು? ಬೊಮ್ಮಾಯಿಗೆ ತಿರುಗೇಟು ಕೊಟ್ಟ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 19: ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಅವರ ಸರ್ಕಾರ ಇದ್ದಾಗ ರಾತೋರಾತ್ರಿ ನೀರು ಬಿಟ್ಟಿಲ್ವಾ..? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಂಗಳವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗ ಮಾತನಾಡಿದ ಅವರು, ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟಿನಲ್ಲಿ ನಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲಹೆಯನ್ನು ಬೊಮ್ಮಾಯಿ ನೀಡುತ್ತಿದ್ದಾರೆ. ನೀರು ಬಿಡಲು ನಾವು ತಯಾರಿಲ್ಲ, ಹೀಗಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ನೀರು ಬಿಡುಗಡೆ ಮಾಡದೆ ಕಾನೂನು ಹೋರಾಟ ನಡೆಸಬೇಕು ಎಂಬ ಬಸವರಾಜ ಬೊಮ್ಮಾಯಿ ಅವರ ಸಲಹೆ ಬಗ್ಗೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಎಷ್ಟು ನೀರು ಬಿಟ್ಟಿದ್ದರು ಎನ್ನುವ ದಾಖಲೆಗಳು ನಮ್ಮ ಬಳಿ ಇವೆ. ಆದರೆ ಸುಪ್ರೀಂ ಕೋರ್ಟ್ ಅನ್ನು ಗಮನದಲ್ಲಿ ಇರಿಸಿಕೊಳ್ಳಬೇಕಾಗುತ್ತದೆ. ನೀರು ಬಿಡಬೇಡಿ ಎಂದು ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದರೆ, ಬಸವರಾಜ ಬೊಮ್ಮಾಯಿ ಹಾಗೂ ನನ್ನ ಬಳಿ ಯಾವ ಆಯ್ಕೆ ಇದೆ? ಎಂದು ಪ್ರಶ್ನಿಸಿದ್ದಾರೆ.
ಮಾಜಿ ಮಬೊಮ್ಮಾಯಿ ಅವರು ರಾಜಕಾರಣ ಬದಿಗಿಡಲಿ. ಕೂಡಲೇ ಪ್ರಧಾನಿಗಳಿಗೆ ಮಧ್ಯಸ್ತಿಕೆ ವಹಿಸುವಂತೆ ಒತ್ತಡ ತರಲಿ. ನೀರು ನಿರ್ವಹಣಾ ಸಮಿತಿಗೂ ಮನವಿ ಸಲ್ಲಿಸಲಿ. ರಾಜ್ಯದ ಹಿತವನ್ನು ಅವರು ಮೊದಲು ಕಾಪಾಡಲಿ, ರಾಜಕಾರಣ ಬದಿಗಿಡಲಿ ಎಂದು ಹೇಳಿದರು. ನಾನು ಶೀಘ್ರದಲ್ಲೇ ದೆಹಲಿಗೆ ಹೋಗಲಿದ್ದು, ಸಂಸದರನ್ನು ಭೇಟಿ ಮಾಡಿ ಮನವಿ ಮಾಡಲಿದ್ದೇನೆ. ಮಧ್ಯಸ್ತಿಕೆ ವಹಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದರು.
ರಾಜ್ಯಸಭೆಯಲ್ಲಿ ಸೋಮವಾರ ಮಾತನಾಡಿದ ಎಚ್.ಡಿ.ದೇವೇಗೌಡರು, ನ್ಯಾಯಲಯದ ಹೊರಗಡೆ ಇತ್ಯರ್ಥ ಮಾಡಿಕೊಳ್ಳಿ ಎಂದು ಸಲಹೆ ನೀಡಿರುವುದು ಸರಿಯಾಗಿದೆ. ಹಿರಿತನದ ಅನುಭವದ ಮೇಲೆ ಅವರು ಮಾತನಾಡಿದ್ದಾರೆ. ಅವರ ಸಲಹೆ ಸ್ವೀಕಾರ್ಹವಾಗಿದೆ.
ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಉಪಯುಕ್ತ ಸಲಹೆ ನೀಡಲಿ. ಅವರೇ ನೇಮಕ ಮಾಡಿದ ಕಾನೂನು ತಜ್ಞರೇ ಈಗಲೂ ಇದ್ದಾರೆ. ಅವರ ಮಾತನ್ನು ಕೇಳಬೇಕೊ ಅಥವಾ ಇವರ ಮಾತನ್ನು ಕೇಳಬೇಕೊ? ಒಳ್ಳೆ ಸಲಹೆ ನೀಡಿದರೆ ಮಾತ್ರ ಅವರ ಮಾತನ್ನು ಕೇಳುತ್ತೇವೆ ಎಂದು ಹೇಳಿದರು.
ಹಿರಿಯ ವಕೀಲರಾದ ನಾರಿಮನ್ ಅವರ ಸಲಹೆ ಕೇಳಿದ್ದೀರಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಇರುವ ತಂಡದಲ್ಲಿ ಅವರ ಶಿಷ್ಯರೇ ಇದ್ದಾರೆ, ಸಲಹೆ ಕೇಳಿದ್ದೇವೆ. ಇದರ ಬಗ್ಗೆ ಆನಂತರ ಮಾತನಾಡುವೆ ಎಂದರು.












Click it and Unblock the Notifications