ದೆಹಲಿಗೆ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಚರ್ಚೆ?
ಬೆಂಗಳೂರು, ಏಪ್ರಿಲ್ 04; ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ನವದೆಹಲಿಗೆ ತೆರಳಲಿದ್ದಾರೆ. ಮುಖ್ಯಮಂತ್ರಿಗಳ ದೆಹಲಿ ಭೇಟಿ ಸಂಪುಟ ವಿಸ್ತರಣೆ ಕುರಿತು ಮತ್ತೆ ಚರ್ಚೆ ಆರಂಭವಾಗುವಂತೆ ಮಾಡಿದೆ.
ಮಂಗಳವಾರ ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ ಅಂತರರಾಜ್ಯ ನದಿ ನೀರು ಹಂಚಿಕೆ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆ ಚರ್ಚೆ ನಡೆಸಲಿದ್ದಾರೆ.
ಕರ್ನಾಟಕ-ತಮಿಳುನಾಡು ನಡುವೆ ಜಟಾಪಟಿಗೆ ಕಾರಣವಾಗಿರುವ ಮೇಕೆದಾಟು ಯೋಜನೆ ಕುರಿತು ರಾಜ್ಯದಲ್ಲಿ ನಡೆದ ಸರ್ವಪಕ್ಷದ ಸಭೆಯ ವಿವರಗಳನ್ನು ಸಚಿವರಿಗೆ ನೀಡಲಿದ್ದಾರೆ. ಯೋಜನೆಗೆ ಒಪ್ಪಿಗೆ ನೀಡುವಂತೆ ಮನವಿ ಸಲ್ಲಿಕೆ ಮಾಡಲಿದ್ದಾರೆ.

ಏಪ್ರಿಲ್ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ಜಲ ವಿವಾದದ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದು ಕಳೆದ ವಾರ ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಅದರಂತೆ ಏಪ್ರಿಲ್ 5ರ ಮಂಗಳವಾರ ದೆಹಲಿ ಭೇಟಿ ಕೈಗೊಂಡಿದ್ದಾರೆ.
ಸಂಪುಟ ವಿಸ್ತರಣೆ?: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ನಡೆಸಿದ ಬಳಿಕ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ ಭೇಟಿಯ ವೇಳೆ ಅಮಿತ್ ಶಾ ಸಂಪುಟ ವಿಸ್ತರಣೆ/ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದ್ದರಿಂದ ಈ ಕುರಿತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಇತರ ಹೈಕಮಾಂಡ್ ನಾಯಕರ ಜೊತೆ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಒಂದು ವೇಳೆ ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದರೆ ಕೆಲವು ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಈ ಕುರಿತು ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ. ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಕೆ. ಎಸ್. ಈಶ್ವರಪ್ಪ "ಕಾದು ನೋಡಿ" ಎಂಬ ಉತ್ತರವನ್ನು ಸೋಮವಾರ ನೀಡಿದ್ದಾರೆ.
ಹೈಕಮಾಂಡ್ ನಾಯಕರ ಜೊತೆಗಿನ ಮಾತುಕತೆ ಸಫಲವಾದರೆ ಏಪ್ರಿಲ್ 8ರಂದು ಸಂಪುಟ ವಿಸ್ತರಣೆ/ ಪುನಾರಚನೆ ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಇದೆ. ಮಂಗಳವಾರವೇ ಮುಖ್ಯಮಂತ್ರಿಗಳು ದೆಹಲಿ ಭೇಟಿ ಮುಗಿಸಿ ವಾಪಸ್ ಆಗಲಿದ್ದಾರೆ ಎಂಬ ಬಗ್ಗೆ ಖಚಿತವಾದ ಮಾಹಿತಿ ಸಿಕ್ಕಿಲ್ಲ.
ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಈಗ ಸಂಪುಟ ವಿಸ್ತರಣೆ ಮಾಡಿದರೆ ಆಗುವ ಪರಿಣಾಮಗಳ ಕುರಿತು ಹೈಕಮಾಂಡ್ ನಾಯಕರು ಲೆಕ್ಕಾಚಾರ ಹಾಕಲಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಈ ಕುರಿತು ಸುಧೀರ್ಘ ಚರ್ಚೆ ನಡೆಸುವ ಸಾಧ್ಯತೆ ಇದೆ.
ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಿ ಚುನಾವಣೆಯಲ್ಲಿ ಪಕ್ಷ ಸಂಘಟನೆಯ ಹೊಣೆಯನ್ನು ನೀಡಲು ಸಹ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ. ಯಾವ ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎನ್ನುವುದು ಸಹ ಕುತೂಹಲ ಮೂಡಿಸಿದೆ.
ಸಂಪುಟ ವಿಸ್ತರಣೆ ಮಾಡಬೇಕು ಎಂದು ಬಿಜೆಪಿಯ ಹಿರಿಯ ಶಾಸಕರು ಎರಡು ತಿಂಗಳ ಹಿಂದೆಯೇ ಬೇಡಿಕೆ ಇಟ್ಟಿದ್ದರು. ಆದರೆ ಹೈಕಮಾಂಡ್ ನಾಯಕರು ಐದು ರಾಜ್ಯಗಳ ಚುನಾವಣೆ ಕಾರ್ಯದಲ್ಲಿ ಬ್ಯುಸಿಯಾಗಿದ್ದ ಕಾರಣ ಮುಖ್ಯಮಂತ್ರಿಗಳು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.
ಈಗ ಐದು ರಾಜ್ಯಗಳ ಚುನಾವಣೆ ಮುಕ್ತಾಯಗೊಂಡು ಸರ್ಕಾರ ರಚನೆಯಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವುದರಿಂದ ಹೈಕಮಾಂಡ್ ನಾಯಕರು ರಾಜ್ಯದ ಬಗ್ಗೆ ವಿಶೇಷ ಗಮನ ವಹಿಸಿದ್ದಾರೆ.












Click it and Unblock the Notifications