ಕರ್ನಾಟಕದಲ್ಲಿ ಮತ್ತೊಮ್ಮೆ ಬೊಮ್ಮಾಯಿ ಸರ್ಕಾರ ಅಸ್ತಿತ್ವಕ್ಕೆ
ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿರುವ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಪುತ್ರನಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
ಹೀಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬೊಮ್ಮಾಯಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಇದು ಎರಡನೇ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಒಂದು ಎಚ್.ಡಿ. ದೇವೇಗೌಡ ಹಾಗೂ ಪುತ್ರ ಎಚ್.ಡಿ. ಕುಮಾರಸ್ವಾಮಿ. ಮತ್ತೊಂದು ಎಸ್.ಆರ್.ಬೊಮ್ಮಾಯಿ ಹಾಗೂ ಪುತ್ರ ಬಸವರಾಜ ಬೊಮ್ಮಾಯಿ.
ಬಿಜೆಪಿ ಹೈಕಮಾಂಡ್ನಿಂದ ವೀಕ್ಷಕರಾಗಿ ಬೆಂಗಳೂರಿಗೆ ಬಂದಿದ್ದ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಹಾಗೂ ಅರುಣ್ ಸಿಂಗ್ ತಂಡ ಬಸವರಾಜ ಬೊಮ್ಮಾಯಿವರನ್ನು ನೂತನ ಸಿಎಂ ಆಗಿ ತೀರ್ಮಾನಿಸಿದೆ. ರಾಜ್ಯದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
ಇನ್ನು ಅಂತಿಮವಾಗಿ ಸಿಎಂ ರೇಸ್ನಲ್ಲಿ ಮೂರು ಹೆಸರು ಕೇಳಿ ಬರುತ್ತಿದ್ದವು. ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ್ ಹಾಗೂ ಬಸವರಾಜ ಬೊಮ್ಮಾಯಿ. ಬಿ.ಎಸ್. ಯಡಿಯೂರಪ್ಪ ಆಪ್ತರಾಗಿರುವ ಬಸವರಾಜ ಬೊಮ್ಮಾಯಿ ಅಂತಿಮವಾಗಿ ಶಾಸಕಾಂಗ ಪಕ್ಷದ ನಾಯಕಾರಗಿ ಆಯ್ಕೆಯಾಗಿದ್ದಾರೆ.
ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಯ ಶಿಗ್ಗಾವಿ- ಸವಣೂರು ಕ್ಷೇತ್ರದ ಶಾಸಕರಾಗಿರುವ ಬಸವರಾಜ ಬೊಮ್ಮಾಯಿ ಅನುಭವಿ ರಾಜಕಾರಣಿಯಾಗಿದ್ದು, ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಹಲವು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು.
ಬಸವರಾಜ ಬೊಮ್ಮಾಯಿ ಹೆಸರನ್ನು ಮುಖ್ಯಮಂತ್ರಿ ಕುರ್ಚಿಗೆ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ. ಯಾಕೆಂದರೆ ಬಸವರಾಜ ಬೊಮ್ಮಾಯಿಯನ್ನು ಸಿಎಂ ಮಾಡಿದರೆ ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರನ ಭವಿಷ್ಯಕ್ಕೆ ಯಾವುದೇ ಅಡ್ಡಿಯುಂಟಾಗುವುದಿಲ್ಲ ಎನ್ನಬಹುದು.
Recommended Video
ಬುಧವಾರದಂದು ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ರಾಜಭವನದಲ್ಲಿ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ.