Panchamasali: ಸಮಾಜದವರ ಮೇಲಿನ ಹಿಂಸಾಚಾರ ಖಂಡನೀಯ: ಇತಿಹಾಸ ನೆನಪಿಸಿದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 11: ಕರ್ನಾಟಕ ಬಿಜೆಪಿ ಸರ್ಕಾರದ ಅವಧಿಯಲ್ಲಿ 2011-12 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಕೆಲಸವಾಯಿತು. ಬಿಜೆಪಿ ಸರ್ಕಾರ ಅಂದು ಗಮನಾರ್ಹ ಕಾರ್ಯ ಮಾಡಿತ್ತು. ಹಿಂದಿನಿಂದಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಪಂಚಮಸಾಲಿಗಳ ಮೇಲಿದ್ದ ಮನೋಭಾವ ಎಂತದ್ದು ಎಂಬುದು ಗೊತ್ತಿದೆ. ನೆನ್ನೆಯು ಪಂಚಮಸಾಲಿಗಳ ಮೇಲಿನ ಲಾಠಿ ಚಾರ್ಜ್, ಹಿಂಸಾಚಾರವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದರು.
ಪಂಚಮಸಾಲಿ ಸಮಾಜದ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ಧೋರಣೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದೂರಿರುವ ಅವರು, ಸರ್ಕಾರಕ್ಕೆ ಚಾಟಿ ಬೀಸಿದರು. ಬೆಳಗಾವಿ ಸುವರ್ಣ ಸೌಧ ಬಳಿ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಸಮಾಜದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಕೆಲವ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರ ಮೇಲೆ ಕಲ್ಲು ತೂರಾಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಂಚಮಸಾಲಿ ಸಮಾಜ ಲಿಂಗಾಯತರಲ್ಲಿಯೇ ಅತ್ಯಂತ ದೊಡ್ಡ ಸಮಾಜ. ರೈತಾಪಿ ಕುಟುಂಬ ಹೊಂದಿರುವ ಸಮಾಜ, ನಾಡಿಗೆ ಅನ್ನಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಮಾಜ, ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ ಈ ಸಮಾಜಕ್ಕೆ ಸೇರಿದವರಾಗಿದ್ದರು. ಸಂಗೊಳ್ಳಿ ರಾಯಣ್ಣ ಹಾಲು ಮತದ ಸಮಾಜಕ್ಕೆ ಸೇರಿದವರಾಗಿದ್ದರೂ ಕಿತ್ತೂರು ಚನ್ನಮ್ಮಳ ಬಲಗೈ ಬಂಟರಾಗಿದ್ದರು.
ಪಂಚಮಸಾಲಿ ಸಮಾಜದ ಬೇಡಿಕೆ ತಿರಸ್ಕಾರ
2016 ರಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಸಮಿತಿ ಮುಂದೆ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎ ಗೆ ಸೇರಿಸಬೇಕೆಂಬ ಬೇಡಿಕೆ ಇತ್ತು. ಆಗ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇತ್ತು. ಆಗ ಕಾಂತರಾಜ್ ಸಮಿತಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಲು ಸಂಪೂರ್ಣವಾಗಿ ತಿರಸ್ಕಾರ ಮಾಡಲಾಯಿತು. ಇದು ಪಂಚಮಸಾಲಿ ಸಮುದಾಯದ ವಿರುದ್ಧ ಅಂದಿನ ಸರ್ಕಾರಕ್ಕೆ ಇದ್ದ ಮನೋಭಾವ ಏನೆಂದು ತೋರಿಸುತ್ತದೆ ಎಂದರು.
ಧರ್ಮ ಆಧಾರದಲ್ಲಿ ಮೀಸಲಾತಿಗೆ ಅವಕಾಶ ಇಲ್ಲ
ಧರ್ಮದ ಆಧಾರದ ಮೇಲೆ ಮೀಸಲಾತಿ ಇಲ್ಲ ಎನ್ನುವುದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಅದರ ಅನುಗುಣವಾಗಿ ರಾಜ್ಯದಲ್ಲಿ ಅಲ್ಪ ಸಂಖ್ಯಾತರಿಗೆ ಪ್ರವರ್ಗ 2ಬಿ ಯಲ್ಲಿ ನೀಡಿದ್ದ ಶೇಕಡಾ 4 ರಷ್ಟು ಮೀಸಲಾತಿ ನಾವು ಸಂವಿಧಾನ ಬದ್ದವಾಗಿ, ಕಾನೂನಾತ್ಮಕವಾಗಿ ಪ್ರವರ್ಗ 3ಸಿ ಮತ್ತು 3ಡಿ ಮಾಡಿ ವೀರಶೈವ ಲಿಂಗಾಯತ ಮತ್ತು ವಕ್ಕಲಿಗ ಸಮುದಾಯಗಳಿಗೆ ಹಂಚಿಕೆ ಮಾಡಿದ್ದೇವೆ. ಆಂಧ್ರದ ವಿಚಾರದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅನ್ನುವುದನ್ನು ಆಂಧ್ರಪ್ರದೇಶ ಹೈಕೋರ್ಟ್ ಕೂಡ ಎತ್ತಿ ಹಿಡಿದಿದೆ ಎಂದು ಅವರು ವಿವರಿಸಿದರು.
ಈಗ ಪಶ್ಚಿಮ ಬಂಗಾಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಧರ್ಮಾಧಾರಿತ ಮೀಸಲಾತಿ ನೀಡಲು ಅವಕಾಶ ಇಲ್ಲ ಅಂತ ಬಹಳ ಸ್ಪಷ್ಟವಾಗಿ ಹೇಳಿದೆ. ಹೀಗಿದ್ದರೂ ಕೂಡ ರಾಜ್ಯ ಸರ್ಕಾರ ನಾವು ಮಾಡಿರುವ ತೀರ್ಮಾನಕ್ಕೆ ಬೆಂಬಲ ಕೊಡಲು ನಿರಾಕರಿಸುತ್ತಿದೆ.
ಸುಪ್ರೀಂ ಕೋರ್ಟ್ಗೆ ಅರ್ಜಿ: ಬಿಜೆಪಿ ಸ್ಪಷ್ಟನೆ
ಕೆಲವು ಕಾಂಗ್ರೆಸ್ ಪಕ್ಷದ ನಾಯಕರು (ಸಿಎಂ ಬೆಂಬಲಿಗರು) ನಮ್ಮ ಸರ್ಕಾರದ ಆದೇಶದ ವಿರುದ್ದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬಂದಾಗ ವಿಧಾನಸಭಾ ಚುನಾವಣೆ ಘೊಷಣೆ ಆಗಿತ್ತು. ಚುನಾವಣೆ ನೀತಿ ಸಂಹಿತೆ ಇತ್ತು ಅದಕ್ಕಾಗಿ ಮಧ್ಯಂತರ ಆದೇಶ ಕೊಡುವುದು ಬೇಡ, ನಾವು ಪೂರ್ಣ ಪ್ರಮಾಣದ ವಾದ ಮಾಡುತ್ತೇವೆ ಎಂದು ನಮ್ಮ ವಕೀಲರು ಹೇಳಿದ್ದರು.
ಸುಪ್ರೀಂ ಕೋರ್ಟ್ ಮುಂದಿನ ದಿನಾಂಕ ನೀಡುವವರೆಗೂ ಸದರಿ ಆದೇಶ ಜಾರಿ ಮಾಡಬೇಡಿ ಎಂದು ಹೇಳಲಾಗಿತ್ತು. ಕೋರ್ಟ್ ಸೂಚನೆಯಂತೆ ನಾವು ಮುಂದಿನ ವಿಚಾರಣೆವರೆಗೆ ಮಾತ್ರ ಆದೇಶ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇವೆ. ಮತ್ತೊಂದು ವಿಚಾರಣೆ ಬಂದಾಗಲೂ ನಾವು ಮುಂದಿನ ವಿಚಾರಣೆವರೆಗೆ ಮಾತ್ರ ಜಾರಿ ಮಾಡುವುದಿಲ್ಲ ಎಂದು ಅಂದೆ ಸ್ಪಷ್ಟಪಡಿಸಿದ್ದೆವು.
ನಮಗೆ ಪೂರ್ಣ ಪ್ರಮಾಣದ ವಾದ ಮಾಡಲು ಕೊರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನಾವು ಹೇಳಿದ್ದೇವು ಹೊರತು ನಾವು ನಮ್ಮ ಆಜ್ಞೆಯನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ಮುಖ್ಯಮಂತ್ರಿಗಳು ತಿರುಚುವ ಪ್ರಯತ್ನ ಮಾಡುತ್ತಿರುವುದು ಅತ್ಯಂತ ಖೇದಕರ ಸಂಗತಿ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹಾಕಿರುವ ಅರ್ಜಿ ವಾಪಸ್ ಪಡೆಯುವಂತೆ ಸೂಚಿಸಬೇಕು. ಇಲ್ಲದಿದ್ದರೆ, ಕಾನೂನು ಬದ್ಧವಾಗಿ ನಾವು ಮಾಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಿ ನಾವು ಮಾಡಿರುವ ಹೊಸ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು.
ನಿನ್ನೆ ಪಂಚಮಸಾಲಿ ಸಮುದಾಯದ ಹೋರಾಟದಲ್ಲಿ ಹಿಂಸಾಚಾರ ಆಗಿರುವುದು ಅಲ್ಲಿಯ ಅಧಿಕಾರಿಗಳ ದಾರ್ಷ್ಟ್ಯ್, ದುರ್ನಡತೆ ಮತ್ತು ದರ್ಪ ಕಾರಣ. ಮುಖ್ಯಮಂತ್ರಿಗಳಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಮತ್ತು ಪ್ರಜಾಪ್ರಭುತ್ವದಲ್ಲಿ ನಮ್ಮಹಕ್ಕು ಕೇಳಲು ಸ್ವತಂತ್ರರು ಅನ್ನುವ ಬಗ್ಗೆ ಅವರಿಗೆ ನಂಬಿಕೆ ಇದ್ದರೆ, ಕೂಡಲೇ ಲಾಠಿ ಚಾರ್ಜ್ ಮಾಡಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಅವರು ಆಗ್ರಹಿಸಿದರು.
ಪಂಚಮಸಾಲಿ ಸಮಾಜದ ಮುಖಂಡರು ಮತ್ತು ಹಿರಿಯರನ್ನು ಮಾತುಕತೆಗೆ ಕರೆಯಿಸಿ ಸೌಹಾರ್ದತೆಯಿಂದ ಬಗೆ ಹರಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಒತ್ತಾಯಿಸಿದರು.












Click it and Unblock the Notifications