ಪಿಎಫ್ಐ ಸಂಘಟನೆ ವಿರುದ್ಧ ಕಠಿಣ ಕಾನೂನು ಕ್ರಮ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಫೆ. 19: ರಾಷ್ಟ್ರವಿರೋಧಿ ಹೇಳಿಕೆ ನೀಡಿರುವ ಆರೋಪದಡಿ ಪಿಎಫ್ಐ ಸಂಘಟನೆ ಮುಖಂಡರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಗೃಹ ಇಲಾಖೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿರುವ ಅವರು, ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಪಿಎಫ್ಐ ಮುಖಂಡರು ಕೊಟ್ಟಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಂಗಳೂರಿನ ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್ಐ ನಾಯಕರು ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಅದನ್ನು ಎಂದಿಗೂ ಸಹಿಸುವುದಿಲ್ಲ. ಸಂವಿಧಾನ ವಿರೋಧಿ ಹೇಳಿಕೆ ನೀಡುವ ಮೂಲಕ ಪಿಎಫ್ಐ ಸಂಸ್ಥೆ ತನ್ನ ನಿಜ ಬಣ್ಣವನ್ನು ಜಗತ್ತಿಗೆ ತೋರಿಸಿದೆ.
ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಆರ್ ಎಸ್ ಎಸ್ ಸಂಘಟನೆ ದೇಶಭಕ್ತಿಯ ಪ್ರತೀಕ. ಅಂತಹ ಆರ್ಎಸ್ಎಸ್ ವಿರುದ್ಧ PFI ಮುಖಂಡರು ಟೀಕೆ ಮಾಡಿರುವುದು ಖಂಡನಾರ್ಹ. ಇದು ದೇಶದ ಜನತೆಯನ್ನು ಒಡೆಯಲು ಮಾಡಿರುವ ಹುನ್ನಾರ. ಈ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.