ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಕಾರ್ಯಕ್ರಮ: ಸಿಎಂ ಬೊಮ್ಮಾಯಿ ಭಾಗಿ
ನವದೆಹಲಿ, ಜುಲೈ 25: ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರವೇ ದೆಹಲಿಗೆ ತೆರಳಿದ್ದು, ಸೋಮವಾರ ಬೆಳಗ್ಗೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
"ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಕ್ರೀಡಾ ಮಂತ್ರಿಗಳನ್ನು ಭೇಟಿಯಾಗುತ್ತಿದ್ದೇನೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ ಸಂಜೆ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗುತ್ತಿದ್ದೇನೆ," ಎಂದು ಮುಖ್ಯಮಂತ್ರಿಗಳು ತಿಳಿಸಿದರು.
"ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆ ನಿಯಮಿತವಾಗಿ ನಡೆಯುತ್ತದೆ. ದೇಶದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚೆಯಾಗುತ್ತದೆ. ವಿಶೇಷವಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿಗಳು ಪರಿಶೀಲಿಸಿ, ಮಾರ್ಗದರ್ಶನ ನೀಡಿದ್ದಾರೆ. ಅಕ್ಟೋಬರ್ ನಲ್ಲಿ ಮುಂದಿನ ಸಭೆ ನಡೆಯಲಿದೆ," ಎಂದು ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಮುಖ್ಯಮಂತ್ರಿಗಳ ಮಂಡಳಿ ಸಭೆಯಲ್ಲಿ ಯೋಜನೆಗಳ ಅನುಷ್ಠಾನದಲ್ಲಿ ಮುಂದಿರುವ ರಾಜ್ಯಗಳು ತಮ್ಮ ವಿಚಾರ ವಿನಿಮಯ ಮಾಡುತ್ತಾರೆ. ರಾಜ್ಯದ ಯೋಜನೆಗಳಾದ ಐಟಿಐಗಳ ಮೇಲ್ದರ್ಜೆಗೇರಿಸಿರುವುದು, ಕಿಸಾನ್ ಸಮ್ಮಾನ್ , 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಕೈಗೊಂಡಿರುವ ಕ್ರಮಗಳು, ನೂತನ ಶಿಕ್ಷಣ ನೀತಿ ಬಗ್ಗೆ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Recommended Video