ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಸ್ಪರ್ಧೆ: ಮಾಜಿ ಸಿಎಂ ಏನಂದ್ರು?
ಮಂಡ್ಯ, ಸೆಪ್ಟೆಂಬರ್ 02: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಸಿ.ಪಿ.ಯೋಗೇಶ್ವರ್ ಅವರು ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲು ವರಿಷ್ಟರು ಸ್ಪಂದಿಸದಿದ್ದರೆ ಪಕ್ಷೇತರನಾಗಿ ಕಣಕ್ಕಿಳಿಯವುದಾಗಿ ಹೇಳಿದ್ದು, ಬಿಜೆಪಿ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದಿಂದ ಟಿಕೆಟ್ ನೀಡುವ ಕುರಿತು ಮೈತ್ರಿ ನಾಯಕರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಕುರಿತು ಮಾಜಿ ಮುಖ್ಯಮಂತಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ. ಅವರು ತಮ್ಮ ಪಕ್ಷದ ಪಮುಖರ ಜೊತೆಗೆ ಚರ್ಚೆ ಮಾಡುತ್ತಾರೆ. ಹಾಗೂ ಎನ್ಡಿಎ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಬಿಜೆಪಿ ವರಿಷ್ಠರು ಹಾಗೂ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದರು.

ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದರು. ಮುಡಾ ಕೇಸ್ನಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ತನಿಖೆಗೆ ಅನುಮತಿ ನೀಡಿದ್ದಕ್ಕೆ ಪ್ರತಿಯಾಗಿ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದೆಲ್ಲಾ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೈಪಡೆಗೆ ಟಾಂಗ್ ನೀಡಿದರು.
ಮುಖ್ಯಮಂತ್ರಿಗಳು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಮುಂದಾಗಿದ್ದಾರೆಂದು ಹೇಳುವುದು ಹಳೇ ಟ್ಯಾಕ್ಟಿಸ್. ಇದೆಲ್ಲವನ್ನು ಈ ರಾಜ್ಯದ ಜನ ಬಹಳ ನೋಡಿದ್ದಾರೆ ಎಂದು ತಿಳಿಸಿದರು. ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕೇವಲ ತನಿಖೆ ನಡೆಸಿ ಎಂದಷ್ಟೆ. ಆದರೆ, ಕಾಂಗ್ರೆಸ್ಸಿನ ಮಿತ್ರರು ಯಾಕೆ ಅಷ್ಟೊಂದು ಆತಂಕಗೊಂಡಿದ್ದಾರೋ ತಿಳಿಯದು. ಈಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅಂತಿಮ ಘಟ್ಟಕ್ಕೆ ಬಂದಿದೆ. ಕಾದು ನೋಡೋಣ ಎಂದರು.
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆಯವರ ವಿಚಾರದಲ್ಲಿ ರಾಜ್ಯಪಾಲರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ಸಿಗರು ಪ್ರಶ್ನಿಸುತ್ತಿದ್ದಾರೆ. ಆದರೆ ಇದಕ್ಕೆ ರಾಜ್ಯಪಾಲರು ತಕ್ಕ ಉತ್ತರ ಕೊಟ್ಟಿದ್ದಾರೆ. ನಮ್ಮ ಕಚೇರಿಯಲ್ಲಿ ಯಾವ ಕಡತವೂ ಬಾಕಿ ಉಳಿದಿಲ್ಲ ಎಂದು. ಅದೇನೆ ಇರಲಿ, ಅದಕ್ಕೂ ಇದಕ್ಕೂ ಥಳಕು ಹಾಕುವುದು ಸರಿಯಲ್ಲ ಎಂದು ಹೇಳಿದರು.
ಪ್ರಸ್ತುತ ರಾಜ್ಯದ ಮುಖ್ಯಸ್ಥನ ಮೇಲೆ ಆರೋಪವಿರುವುದರಿಂದ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ತನಿಖೆ ನಡೆಯಬೇಕು. ಆ ಬಳಿಕನ್ಯಾಯಾಲಯದ ನಿರ್ಧಾರದ ಮೇಲೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ನಿರ್ಧಾರವಾಗುತ್ತದೆ ಎಂದು ತಿಳಿಸಿದರು.
ಕೋವಿಡ್ಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ತರಿಸಿಕೊಂಡಿದ್ದಾರೆ. ಅದರಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ತಿಳಿದ ಬಳಿಕ ಪಕ್ಷ ಸೂಕ್ತ ಉತ್ತರ ನೀಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದೇ ವೇಳೆ ನಟ ದರ್ಶನ್ ವಿಚಾರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಷ್ಟೇ ಹೇಳಿದರು.












Click it and Unblock the Notifications