ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣ ವಚನ ಸ್ವೀಕಾರ!
ಬೆಂಗಳೂರು, ಜು. 28: ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಇಂದು ತಾವು ಮಾತ್ರ ಪ್ರಮಾಣ ವಚನವನ್ನು ಸ್ವೀಕರಿಸುವುದಾಗಿ ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ ಹೈಕಮಾಂಡ್ನಿಂದ ಸೂಚನೆ ಬಂದಲ್ಲಿ ಬೊಮ್ಮಾಯಿ ಅವರೊಂದಿಗೆ ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಮೂವರು ಶಾಸಕರು ಕೂಡ ಪದಗ್ರಹಣ ಮಾಡುವ ಸಾಧ್ಯತೆಗಳಿಗೆ.
Recommended Video
ಬಸವರಾಜ ಬೊಮ್ಮಾಯಿ ಅವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲು ಸದ್ಯ ಕಾರ್ಯಕ್ರಮ ನಿಗದಿಯಾಗಿದೆ. ಆದರೆ ದೆಹಲಿಯಿಂದ ಸೂಚನೆ ಬಂದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆಯಾಗಿರುವ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಹಾಗೂ ಆರ್. ಅಶೋಕ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಕಿರುಪರಿಚಯ
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟ ವಿಸ್ತರಣೆಯತ್ತ ಗಮನ ಹರಿಸಲಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಒಂದೇ ಬಾರಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂಬ ಮಾಹಿತಿಯಿದೆ. ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಹಾಗೂ ಅತಿವೃಷ್ಟಿಯಿಂದ ನೆರೆ ಹಾವಳಿ ಸಂಕಷ್ಟವಿದೆ. ಹೀಗಾಗಿ ತಕ್ಷಣವೇ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಲು ಹೈಕಮಾಂಡ್ ಕೂಡ ತೀರ್ಮಾನ ಮಾಡಿದೆ ಎಂಬ ಮಾಹಿತಿಯಿದೆ.
ಅಚ್ಚರಿ ಎಂಬಂತೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಈ ಆಯ್ಕೆಯ ಹಿಂದೆ ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒತ್ತಡವಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಕಳೆದ ಒಂದು ವಾರದಿಂದ ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆ ಬಿಜೆಪಿಯಲ್ಲಿ ಜೋರಾಗಿತ್ತು. ಆದರೂ ಬಿಜೆಪಿ ಹೈಕಮಾಂಡ್ ಮಾತ್ರ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ.
ನಿನ್ನೆ (ಜು.27) ಸಂಜೆ ನಡೆದಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರನ್ನಾಗಿ ಬಸವರಾಜ ಬೊಮ್ಮಾಯಿ ಹೆಸರು ಸೂಚಿಸಿದ್ದರು. ಅದನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅನುಮೋದಿಸಿದ್ದರು. ಆ ಮೂಲಕ ಮುಂದಿನ ಸಿಎಂ ಯಾರು ಎಂದು ಕಳೆದೊಂದು ವಾರದಿಂದ ಕೇಳಿ ಬಂದಿದ್ದ ಊಹಾಪೋಗಳಿಗೆ ತೆರೆ ಬಿದ್ದಿತ್ತು.
ನಂತರ ಯಡಿಯೂರಪ್ಪ ಅವರೊಂದಿಗೆ ರಾಜಭವನಕ್ಕೆ ತೆರಳಿ ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕ ಬಸವರಾಜ ಬೊಮ್ಮಾಯಿ ಅವರು, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಅದನ್ನು ಅಂಗೀಕರಿಸಿ ಪ್ರಮಾಣ ವಚನಕ್ಕೆ ರಾಜ್ಯಪಾಲರು ಆಹ್ವಾನ ನೀಡಿದ್ದರು. ವೀಕ್ಷಕರಾಗಿ ಬಂದಿದ್ದ ಕೇಂದ್ರ ಸಚಿವರಾದ ಧರ್ಮೆಂದ್ರ ಪ್ರಧಾನ್, ಜಿ. ಕಿಶನ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆದಿತ್ತು.