Breaking; ಮೂಡುಬಿದಿರೆಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 27; ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಭೇಟಿ ನೀಡಲಿದ್ದಾರೆ. ಮಂಗಳೂರು ಪ್ರವಾಸ ಕೈಗೊಂಡಿದ್ದ ಅವರು ಬೆಳಗ್ಗೆ ವಿಮಾನ ನಿಲ್ದಾಣದಿಂದ ತುರ್ತಾಗಿ ವಾಪಸ್ ಆಗಿದ್ದರು.
ಬುಧವಾರ ಮಧ್ಯಾಹ್ನ 1.45ಕ್ಕೆ ಹೆಚ್. ಎ. ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಸವರಾಜ ಬೊಮ್ಮಾಯಿ ಪ್ರಯಾಣ ಆರಂಭಿಸಲಿದ್ದಾರೆ. 3.20ಕ್ಕೆ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜು ಅನ್ನದಾಸೋಹ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
3.45ಕ್ಕೆ ಮೂಡುಬಿದಿರೆಯ ಜೈನ ಬಸದಿಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಪ್ರೆಸ್ ಕ್ಲಬ್ನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿಗಳು 4.15ಕ್ಕೆ ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಮಾಡಲಿದ್ದಾರೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಬಸವರಾಜ ಬೊಮ್ಮಾಯಿ ಬುಧವಾರ ಆರ್. ಟಿ. ನಗರದ ನಿವಾಸದಿಂದ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ತೆರಳಬೇಕಿತ್ತು. ಆದರೆ ವಿಮಾನ ಹೊರಡುವುದು ತಡವಾದ ಕಾರಣ ತುರ್ತಾಗಿ ವಾಪಸ್ ಆಗಿದ್ದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೋವಿಡ್ ವಿಚಾರದ ಕುರಿತ ಸಭೆಯಲ್ಲಿ ಪಾಲ್ಗೊಂಡ ಬಳಿಕ ಬಸವರಾಜ ಬೊಮ್ಮಾಯಿ ಪುನಃ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸಕ್ಕೆ ಹೊರಟಿದ್ದಾರೆ.











Click it and Unblock the Notifications