ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಮರು ಆಯ್ಕೆ
ಬೆಳಗಾವಿ,ಡಿಸೆಂಬರ್ 21: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಇತರರು ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇನ್ನೂ ಹಂಗಾಮಿ ಸಭಾಪತಿಯಾಗಿದ್ದ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಆಡಳಿತ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

1980 ರಲ್ಲಿ ಪ್ರಥಮ ಬಾರಿ ವಿಧಾನ ಪರಿಷತ್ತಿಗೆ ಆಯ್ಕೆ, 1980, 1986, 1992, 1998, 2004, 2010, 2016 ಹಾಗೂ 2022ರಲ್ಲಿ ಸತತ ಎಂಟನೇ ಅವಧಿಗೆ ಪಶ್ಚಿಮ ಶಿಕ್ಷಕ ಮತಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸತತವಾಗಿ 8ನೇ ಬಾರಿಗೆ ವಿಧಾನ ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಆಗುತ್ತಿರುವದು ರಾಷ್ಟ್ರದ ಇತಿಹಾಸದಲ್ಲಿಯೇ ದಾಖಲೆ.
ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳದ ಸಮಿಶ್ರ ಸರಕಾರದಲ್ಲಿ ಸಚಿವ ಸ್ಥಾನವನ್ನು ಅಲಂಕರಿಸಿದರು. ಈ ಅವಧಿಯಲ್ಲಿ ವಿಜ್ಞಾನ-ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ನಂತರ ಜೆ.ಡಿ.ಎಸ್.ಮತ್ತು ಬಿ.ಜೆ.ಪಿ.ಸಮಿಶ್ರ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಕಾನೂನು ಮತ್ತು ಸಂಸದೀಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ.

21-06-2018 ರಿಂದ 12-12-2018 ರವರೆಗೆ ಮತ್ತು 09-02-2021 ರಿಂದ 16-05-2022ರ ವರೆಗೆ ಎರಡು ಬಾರಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಇನ್ನೂ ಬಿಜೆಪಿಯಲ್ಲಿ 2 ಬಾರಿ ಪ್ರಧಾನ ಕಾರ್ಯದರ್ಶಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಆಗಿಯೂ ಕಾರ್ಯನಿರ್ವಹಿಸಿರುವ ಮಲ್ಕಾಪುರೆ ಪಕ್ಷದ ಹಿರಿಯ ಸದಸ್ಯರಾಗಿದ್ದಾರೆ. ಹಂಗಾಮಿ ಸಭಾಪತಿಯಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದರು. ಆದರೆ ಮತ್ತೊಂದು ಕಡೆ ಮಾತುಕೊಟ್ಟು ಬಸವರಾಜ ಹೊರಟ್ಟಿ ಅವರನ್ನು ಜೆಡಿಎಸ್ ನಿಂದ ಬಿಜೆಪಿಗೆ ಕರೆತರಲಾಗಿದ್ದು, ಬಿಜೆಪಿಗೆ ಬರುವ ಕಾರಣದಿಂದಲೇ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನೀಡಿದ್ದರು, ಇದೀಗ ಕೊಟ್ಟ ಮಾತಿನಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಮಂಗಳವಾರ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದರು. ಇದೀಗ ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಮರು ಆಯ್ಕೆಯಾಗಿದ್ದಾರೆ.












Click it and Unblock the Notifications