Breaking: ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ನಾಳೆ ಬಿಜೆಪಿ ಸೇರ್ಪಡೆ
ಬೆಂಗಳೂರು, ಮೆ 16: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ.
ಕೇವಲ ಸಭಾಪತಿ ಸ್ಥಾನಕ್ಕೆ ಅಷ್ಟೆ ಅಲ್ಲದೆ ಪರಿಷತ್ ಸದಸ್ಯ ಸ್ಥಾನಕ್ಕೂ ಸಹ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಬಿಜೆಪಿ ಸಂಖ್ಯಾಬಲದ ಮೈತ್ರಿಯೊಂದಿಗೆ ಕಳೆದ ಫೆಬ್ರವರಿಯಲ್ಲಿ ಸಭಾಪತಿಯಾಗಿ ಆಯ್ಕೆಯಾಗಿದ್ದರು.
ವಿಧಾನ ಪರಿಷತ್ತು ಕಾರ್ಯದರ್ಶಿ ಅವರನ್ನು ಸೋಮವಾರ ಮಧ್ಯಾಹ್ನ ಭೇಟಿ ಮಾಡಿದ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಆದವರು ತಮ್ಮ ರಾಜೀನಾಮೆಯನ್ನು ಉಪಸಭಾಪತಿಗೆ ಸಲ್ಲಿಸಬೇಕಾಗುತ್ತದೆ. ಆದರೆ, ಸದ್ಯ ಉಪಸಭಾಪತಿ ಸ್ಥಾನ ಖಾಲಿ ಇರುವುದರಿಂದ ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿರುವ ಬಸವರಾಜ ಹೊರಟ್ಟಿ ಅವರು, "ಸಭಾಪತಿ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಒಂದೆರಡು ದಿನಗಳಲ್ಲಿ ಬಿಜೆಪಿ ಸೇರುತ್ತೇನೆ' ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮೋಹನ್ ಲಿಂಬಿಕಾಯಿ ಸಹ ಆಕಾಂಕ್ಷಿ ಎಂದು ಹೇಳಿದ್ದಾರಲ್ಲ ಎಂಬ ಬಗ್ಗೆ, "ಈ ಬಗ್ಗೆ ನಾನು ಏನೂ ಪ್ರತಿಕ್ರಿಯಿಸುವುದಿಲ್ಲ'' ಎಂದು ಅಷ್ಟೇ ಹೇಳಿದರು.
"ನನ್ನ ಕುಟುಂಬದಿಂದ ನಾನೊಬ್ಬನೇ ಚುನಾವಣೆಗೆ ನಿಲ್ಲುತ್ತೇನೆ. ಬೇರೆ ಯಾರೂ ರಾಜಕೀಯಕ್ಕೆ ಬರುವುದಿಲ್ಲ" ಎಂದು ಹೊರಟ್ಟಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.