ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಏರಿಕೆ; ಜಿಲ್ಲಾಧಿಕಾರಿಗಳ ಸಭೆ ಕರೆದ ಸಿಎಂ
ಬೆಂಗಳೂರು, ಜನವರಿ 18; ಕೋವಿಡ್ ಹರಡುವಿಕೆ ತಡೆಗೆ ಕಠಿಣ ನಿಯಮ ಜಾರಿಗೊಳಿಸಿದ್ದರೂ ಬೆಂಗಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿ ಸಹ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಸೋಮವಾರ ಮುಖ್ಯಮಂತ್ರಿಗಳು ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಕಂದಾಯ ಸಚಿವ ಆರ್. ಅಶೋಕ ಮತ್ತು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿದ್ದರು. ಸಭೆಯಲ್ಲಿ ವಾರಾಂತ್ಯ, ನೈಟ್ ಕರ್ಫ್ಯೂ ತೆರವುಗೊಳಿಸುವ ಕುರಿತು ಚರ್ಚೆ ನಡೆದಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಈ ಕುರಿತು ಅಭಿಪ್ರಾಯ ಸಂಗ್ರಹಣೆ ಮಾಡಲಿದ್ದಾರೆ.
ಸಂಜೆ 4 ಗಂಟೆಗೆ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಯಲಿದ್ದು, ಜಿಲ್ಲೆಗಳ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ, ಓಮಿಕ್ರಾನ್ ಹಾಗೂ ಪಾಸಿವಿಟಿ ದರ, ಆಸ್ಪತ್ರೆಯಲ್ಲಿ ಬೆಡ್ಗಳ ಲಭ್ಯತೆ, ಶಾಲಾ-ಕಾಲೇಜುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣ ಜನವರಿ 25-26ರಂದು ಭಾರೀ ಏರಿಕೆಯಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಎಚ್ಚರಿಸಿದೆ. ಅಲ್ಲಿಯವರೆಗೂ ಈಗಿರುವ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡದಂತೆ ಸಲಹೆಯನ್ನು ನೀಡಿದೆ.
ಜನವರಿ 21ರಂದು ಪುನಃ ಮತ್ತೊಂದು ತುರ್ತು ಸಭೆ ನಡೆಸಲಿರುವ ಬಸವರಾಜ ಬೊಮ್ಮಾಯಿ ವಾರಂತ್ಯದ ಕರ್ಫ್ಯೂ ಮುಂದುವರೆಸಬೇಕೇ? ರಾತ್ರಿ ಕರ್ಫ್ಯೂ ವಿಸ್ತರಣೆ ಮಾಡಬೇಕೆ? ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದುವರೆಗೂ ಪತ್ತೆಯಾಗುತ್ತಿರುವ ಕೋವಿಡ್ ಸೋಂಕಿತರಲ್ಲಿ ಬೆಂಗಳೂರು ನಗರವೊಂದರಲ್ಲೇ ಶೇ 75ರಿಂದ 80ರಷ್ಟು ಪ್ರಕರಣಗಳಿವೆ. ಜಿಲ್ಲೆಗಳಲ್ಲಿಯೂ ಪ್ರಕರಣಗಳ ಸಂಖ್ಯೆ ಮೂರಂಕಿ ಗಡಿ ದಾಟುತ್ತಿದೆ.

ಸೋಂಕಿನ ಪ್ರಮಾಣ ಹೆಚ್ಚಳ
ರಾಜ್ಯದ ಐದಾರು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗಿದ್ದು ಹಾಗೂ ಕೆಲವು ಜಿಲ್ಲೆಗಳಲ್ಲಿ ಇನ್ನು 2ನೇ ಡೋಸ್ ಲಸಿಕೆ ಪ್ರಮಾಣ ಜನರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಲಸಿಕೆ ನೀಡುವ ಪ್ರಮಾಣವನ್ನು ಹೆಚ್ಚಳ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವ ಸಾಧ್ಯತೆಯಿದೆ. ಹಾಗೆಯೇ ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲಿದ್ದಾರೆ.

ಹೊರ ರಾಜ್ಯಗಳಿಂದ ಬರುವವರು
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು ಅದರಲ್ಲೂ ಪ್ರಮುಖವಾಗಿ ಕೇರಳ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಬೇರೆ-ಬೇರೆ ಭಾಗಗಳಿಂದ ಕೆಲಸಕಾರ್ಯಗಳಿಗೆ ಕರ್ನಾಟಕಕಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡುವ ಸಾಧ್ಯತೆ ಇದೆ. ನಮ್ಮ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತಗ್ಗಿದರೂ ಬೇರೆ ರಾಜ್ಯಗಳಿಂದ ಆಗಮಿಸುವವರಿಂದ ಮತ್ತೆ ಸೋಂಕು ಹರಡುವ ಭೀತಿ ಇದೆ. ವಾರಂತ್ಯದ ಕರ್ಫ್ಯೂವನ್ನು ಗಡಿಭಾಗದ ಜಿಲ್ಲೆಗಳಲ್ಲಿ ಮುಂದುವರೆಸುವ ಸಾಧ್ಯತೆಯೂ ಇದೆ.

ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಹೊಣೆ
ಹೊರರಾಜ್ಯದಿಂದ ಬರುವವರಿಗೆ ಕಡ್ಡಾಯವಾಗಿ ಆರ್ಟಿಪಿಸಿಆರ್ ಪರೀಕ್ಷೆ ನಡೆಸುವುದು, ಲಸಿಕೆ ಪಡೆದಿರುವ ಪ್ರಮಾಣ ಪತ್ರ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡುವುದು. ಉಳಿದಂತೆ ಧಾರ್ಮಿಕ ಕೇಂದ್ರಗಳು, ಪ್ರವಾಸಿ ತಾಣಗಳು, ಮಾರುಕಟ್ಟೆ, ಸಿನಿಮಾ ಮಂದಿರಗಳು, ಈಜುಕೊಳ, ಕ್ಲಬ್ಗಳು ಸೇರಿದಂತೆ ಮತ್ತಿತರ ಕಡೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಸೂಚನೆ ನೀಡಲಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಸೋಂಕು ಕಂಡುಬಂದರೆ ಅವುಗಳನ್ನು ಮುಚ್ಚುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಸೋಂಕು ಹರಡುವಿಕೆ ತಡೆಯಲು ಜಿಲ್ಲಾಧಿಕಾರಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವ ನಿರೀಕ್ಷೆ ಇದೆ.

ಕಠಿಣ ನಿಯಮಗಳ ಜಾರಿಗೆ ಸೂಚನೆ
ಭಾರತದಲ್ಲಿನ ಅತಿ ಹೆಚ್ಚು ಸೋಂಕು ಪೀಡಿತ ರಾಜ್ಯಗಳ ಪೈಕಿ 5ನೇ ಸ್ಥಾನದಲ್ಲಿ ಕರ್ನಾಟಕವಿದೆ. ಈ ಹಿನ್ನಲೆಯಲ್ಲಿ ಎಚ್ಚರ ವಹಿಸುವಂತೆ ಕೇಂದ್ರ ಸರ್ಕಾರವು ಸೂಚನೆ ಕೊಟ್ಟಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಿದು ಸರ್ಕಾರಕ್ಕೂ ತಲೆ ನೋವಾಗಿದೆ. ಜಿಲ್ಲಾಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮುಖ್ಯಮಂತ್ರಿಗಳು ಈಗಿರುವ ಮಾರ್ಗಸೂಚಿಗಳ ಜೊತೆಗೆ ಕೆಲವು ಕಠಿಣ ನಿಯಮಗಳನ್ನು ತೆಗೆದುಕೊಳ್ಳಲು ನಿರ್ದೇಶನ ನೀಡುವ ಸಾಧ್ಯತೆ ಹೆಚ್ಚಾಗಿದೆ.












Click it and Unblock the Notifications