BC Patil : ಸಿದ್ದರಾಮಯ್ಯ ಭೇಟಿಯಾದ ಕೌರವ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬಿ ಸಿ ಪಾಟೀಲ್ ಹೇಳಿದ್ದೇನು?
ಬೆಂಗಳೂರು, ಜುಲೈ 28: ರಾಜ್ಯ ಕಾಂಗ್ರೆಸ್ 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿದೆ. ಬರೋಬ್ಬರಿ 135 ಕ್ಷೇತ್ರದಲ್ಲೂ ಗೆಲುವು ಸಾಧಿಸಿದರು ಸಹ ಕಾಂಗ್ರೆಸ್ ಪಾಳಯಯಲ್ಲಿ ಆಪರೇಷನ್ ಹಸ್ತ ನಡೆಯುತ್ತಲೇ ಇದೆ. ಈಗಾಗಲೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇನ್ನೂ ಬಿಜೆಪಿ ಪಕ್ಷದಲ್ಲಿದ್ದು ಕಾಂಗ್ರೆಸ್ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನ ಈಗಾಗಲೇ ಬಿಜೆಪಿ ಆರು ವರ್ಷಗಳ ಕಾಲ ಉಚ್ಛಾಟಿಸಿದ್ದು, ಈ ಇಬ್ಬರು ನಾಯಕರು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೇ ಮುಂಬರುವ ಚುನಾವಣೆ ಹೊತ್ತಲಿ ಈ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಮಾಜಿ ಸಚಿವ ಬಿ ಸಿ ಪಾಟೀಲ್ ಭೇಟಿ ಮಾಡಿ ಮಾತುಕಥೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಬಿ ಸಿ ಪಾಟೀಲ್ ಸಹ ಕಮಲ ಬಿಟ್ಟು ಕೈ ಹಿಡಿಯುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಬಿಜೆಪಿ ಮಾಜಿ ಸಚಿವ ಬಿಸಿ ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗುವ ವದಂತಿ ಹಬ್ಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವುದು ಇದಕ್ಕೆ ಪುಷ್ಠಿ ನೀಡಿದೆ ಎನ್ನಲಾಗಿದೆ. ಆದರೆ, ಬಿ ಸಿ ಪಾಟೀಲ್ ಈ ವದಂತಿಯನ್ನು ತಳ್ಳಿಹಾಕಿದ್ದು, ಸಿದ್ದರಾಮಯ್ಯನವರ ಜೊತೆಗಿನ ಫೋಟೋ ಹಂಚಿಕೊಂಡು ಟೀಕಿಸಿದವರಿಗೆ ತಿರುಗೇಟು ನೀಡಿದ್ದಾರೆ. ನಾನು ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ, ಆದರೆ ಸಂಸ್ಕೃತಿ ಬಿಟ್ಟಿಲ್ಲ ಎಂದಿದ್ದಾರೆ. ವದಂತಿ ಹಬ್ಬಿಸುವವರ ಚಿಲ್ಲರೆ ಮನಸ್ಸಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಬಿಜೆಪಿ ಮಾಜಿ ಸಚಿವ ಬಿ ಸಿ ಪಾಟೀಲ್ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ. ಏನ್ರಿ ಎಂಥ ಚಿಲ್ಲರೆ ಮನಸ್ಸು ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬಂದಿದ್ದೇನೆ. ಆದರೆ, ಈ ದೇಶದ ಸಂಸ್ಕೃತಿಯನ್ನು ನಾನು ಯಾವತ್ತು ಬಿಟ್ಟಿಲ್ಲ. ಸಿದ್ದರಾಮಯ್ಯನವರು ಮತ್ತು ನನ್ನ ಸಂಬಂಧ ಬಹಳ ವರ್ಷ ಹಳೆಯದು ಒಬ್ಬ ಮುಖ್ಯಮಂತ್ರಿ ಕರ್ನಾಟಕ ಭವನಕ್ಕೆ ಬಂದಿದ್ದು, ನಾನು ಅಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದಕ್ಕೆ ಅಪಾರ್ಥ ಕಲ್ಪಿಸುವುದು ಬಹಳ ಚಿಲ್ಲರೆ ಎಂದು ಬಿ ಸಿ ಪಾಟೀಲ್ ಕಿಡಿಕಾರಿದ್ದಾರೆ. ಅನ್ಸಲ್ವಾ ಚಿಲ್ಲರೆ ಬುದ್ಧಿಜನ ಚಿಲ್ರೆ ವಿಚಾರ ಮಾಡ್ತಾರೆ. ಅನ್ನೋದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಾ ಎಂದು ಮಾಜಿ ಸಚಿವ ಬಿ ಸಿ ಪಾಟೀಲ್ ಪಕ್ಷಾಂತರ ಎಂದವರಿಗೆ ಟಾಂಗ್ ಕೊಟ್ಟಿದ್ದಾರೆ.












Click it and Unblock the Notifications