ಕರ್ನಾಟಕದಲ್ಲಿ ಮೊದಲ ಕೊರೊನಾವೈರಸ್ ಕೇಸ್ ಪತ್ತೆ
ಬೆಂಗಳೂರು, ಮಾರ್ಚ್.09: ಚೀನಾದಲ್ಲಿ ಹುಟ್ಟಿ, ವಿಶ್ವದಲ್ಲಿ ಹರಡಿ, ಭಾರತೀಯರಲ್ಲೂ ಭಯವನ್ನು ಹುಟ್ಟಿಸಿದ ಕೊರೊನಾ ವೈರಸ್ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಕೊರೊನಾ ವೈರಸ್ ಸೋಂಕಿತ ಪ್ರಕರಣವು ಪತ್ತೆಯಾಗಿದೆ.
ಕರ್ನಾಟಕ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದ ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲ ರೀತಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.
Live Updates: ರಾಜ್ಯದಲ್ಲಿ ಮೊದಲ ಕೊರಾನಾ ವೈರಸ್ ಪ್ರಕರಣ ಪತ್ತೆ
ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಟೆಕ್ಕಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ 432 ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.
ಅಮೆರಿಕಾದಿಂದ ಮಾರ್ಚ್.01ರಂದು ಬೆಂಗಳೂರಿಗೆ ಟೆಕ್ಕಿ
ಅಮೆರಿಕಾಗೆ ತೆರಳಿದ್ದ ಬೆಂಗಳೂರು ಮೂಲದ ಟೆಕ್ಕಿ ಕಳೆದ ಮಾರ್ಚ್.01ರಂದು ಮತ್ತೆ ರಾಜ್ಯಕ್ಕೆ ವಾಪಸ್ ಆಗಿದ್ದರು. ವಿದೇಶದಿಂದ ಆಗಮಿಸಿದ ವ್ಯಕ್ತಿಯಲ್ಲಿ ಸೋಂಕಿತ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿರುವುದು ಸ್ಪಷ್ಟವಾಗಿದೆ.
ಟೆಕ್ಕಿ ಕುಟುಂಬಸ್ಥರಿಗೂ ಪ್ರತ್ಯೇಕ ಕೊಠಡಿಯಲ್ಲಿ ತಪಾಸಣೆ
ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ವರ್ಷದ ಟೆಕ್ಕಿ ಜೊತೆಗೆ ಅವರ ಪತ್ನಿ, ಒಂದು ಮಗು ಹಾಗೂ ಕಾರ್ ಚಾಲಕನನ್ನು ಕೂಡಾ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಎಲ್ಲರ ಆರೋಗ್ಯ ಸ್ಥಿತಿಯ ಮೇಲೆ ತಜ್ಞ ವೈದ್ಯರ ತಂಡವು ನಿಗಾ ವಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.
ಕೊರೊನಾ ಗಂಡಾಂತರ, ಮಕ್ಕಳಿಗೆ ರಜೆ: ಹಾಗಾದ್ರೆ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ?
ಕರ್ನಾಟಕದಲ್ಲಿ 982 ಮಂದಿಗೆ ವೈದ್ಯಕೀಯ ತಪಾಸಣೆ
ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇದುವರೆಗೂ ರಾಜ್ಯದಲ್ಲಿ 982 ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. 700 ಜನರನ್ನು ಮನೆಯಲ್ಲೇ ದಿಗ್ಬಂಧನದಲ್ಲಿ ಇರಿಸಿ ತಪಾಸಣೆಗೆ ಒಳಪಡಿಸಲಾಗಿತ್ತು. 12 ಮಂದಿಯನ್ನು ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕರ್ನಾಟಕದಲ್ಲಿ 12 ಜನರ ಮೇಲೆ ತೀವ್ರ ನಿಗಾ
ಇನ್ನು, ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ 12 ಮಂದಿಯನ್ನು ಆಸ್ಪತ್ರೆಗಳ ಐಸೋಲೆಟೆಡ್ ವಾರ್ಡ್ ಗಳಲ್ಲಿ ಇರಿಸಿ ತೀವ್ರ ನಿಗಾ ವಹಿಸಲಾಗಿದೆ. ಬೆಂಗಳೂರಿನಲ್ಲಿ 8, ಹಾಸನದಲ್ಲಿ 1, ಬಾಗಲಕೋಟೆಯಲ್ಲಿ 1 ಹಾಗೂ ದಕ್ಷಿಣ ಕನ್ನಡದಲ್ಲಿ 2 ಮಂದಿಯ ಮೇಲೆ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.