ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ ತಕ್ಕ ಶಾಸ್ತಿ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು, ಜೂನ್ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.
ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.

'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ
ಇನ್ ಸೈಟ್ ಐಎಎಸ್ ಅಕಾಡೆಮಿ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಅವರು, 'ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಆ ಸ್ಥಾನದಲ್ಲಿ, ಆ ಹುದ್ದೆಯಲ್ಲಿರಲು ಅನರ್ಹರು. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ' ಎಂದು ಹೇಳಿದರು.
'ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ?' ಎಂದು ಪ್ರಶ್ನಿಸಿದರು.
'ಸಮಾಜದಲ್ಲಿನ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯದ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು' ಎಂದು ಹೇಳಿದರು.
'ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ಗಳಾಗಿ ಮಾಡಬೇಕು' ಎಂದೂ ಅವರು ತಿಳಿಸಿದರು.












Click it and Unblock the Notifications