ಬೆಳಗಾವಿ ಹಲ್ಲೆ ಪ್ರಕರಣ; ಗ್ರಾಮಸ್ಥರಿಗೆ ದಂಡ ವಿಧಿಸಿ ಎಂದ ಕೋರ್ಟ್
ಬೆಂಗಳೂರು, ಡಿಸೆಂಬರ್ 19: ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ.
ಬೆಳಗಾವಿ ಘಟನೆ ಕುರಿತು ಸ್ವಯಂಪ್ರೇರಿತವಾಗಿ ಕೋರ್ಟ್ ಪ್ರಕರಣ ದಾಖಲಿಸಿಕೊಂಡಿದೆ. ಸೋಮವಾರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

"ಗ್ರಾಮದಲ್ಲಿ ನೆರೆದಿದ್ದವರ ಮುಂದೆ ಆರೋಪಿಗಳು ಹಿರೋಗಳಾಗಲು ಬಯಸುತ್ತಾರೆ. ಇದು ಸಾಮೂಹಿಕ ಮೂರ್ಖತನ, ಗ್ರಾಮಸ್ಥರ ಬೇಜವಾಬ್ದಾರಿತನ" ಎಂದು ಹೇಳಿತು.
ವಾದ ಆಲಿಸಿದ ವೇಳೆ, "ಇಡೀ ಘಟನೆಗೆ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿದ್ದಾರೆ. ಗ್ರಾಮದ ಪ್ರತಿಯೊಬ್ಬರಿಂದ ತೆರಿಗೆ ರೂಪದಲ್ಲಿ ಒಂದಷ್ಟು ಹಣ ಸಂಗ್ರಹಿಸಲಿ. ಇದರಿಂದ ಸಂದೇಶ ರವಾನೆಯಾಗಲಿ. ಇದೊಂದು ಪಾಠವಾಗಲಿ" ಎಂದು ಹೇಳಿತು.
ಆಗ ನ್ಯಾಯಮೂರ್ತಿ ದೀಕ್ಷಿತ್, "ಸಂದೇಶ ರವಾನೆಯಾಗಲೇಬೇಕು. ಗ್ರಾಮದ ಎಲ್ಲರಿಗೂ, ನಿರ್ದಿಷ್ಟವಾಗಿ ತಪ್ಪು ಮಾಡಿದವರು ಹಣ ಪಾವತಿಸುವಂತೆ ಮಾಡಬೇಕು. ಬ್ರಿಟಿಷರ ಕಾಲದಲ್ಲಿ ವಿಲಿಯಮ್ ಬೆಂಟಿಂಗ್ ಎಂಬಾತ ಕಳ್ಳತನ ಮಾಡುವವರಿದ್ದ ಗ್ರಾಮಕ್ಕೆ ಪುಂಡ ದಂಡ ಎಂಬ ತೆರಿಗೆ ವಿಧಿಸುತ್ತಿದ್ದ. ಅದೇ ರೀತಿಯಲ್ಲಿ ತೆರಿಗೆ ವಿಧಿಸಿದಲ್ಲಿ ಗ್ರಾಮಗಳಲ್ಲಿ ಜನರಿಗೆ ಸ್ವಲ್ಪ ಜವಾಬ್ದಾರಿ ಹೆಚ್ಚಾಗಲಿದೆ. ಇಂತಹ ಘಟನೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಮೌನವಾಗಿರದೆ ಕ್ರಮಕ್ಕೆ ಮುಂದಾಗಲಿದ್ದಾರೆ" ಎಂದರು.
ಅಲ್ಲದೆ, ಗ್ರಾಮದ ಸಾಕ್ಷರತೆ ಪ್ರಮಾಣವೇನು?. ಸರ್ಕಾರ ಯಾವಾಗಲೂ ಆಲಸಿಯಾಗಿ ವರ್ತಿಸುತ್ತದೆ. ಜನರ ಭಾಗಿದಾರಿಕೆ ಹೇಗಿದೆ?. ಇಂಥ ಘಟನೆಗಳನ್ನು ನಿಯಂತ್ರಿಸುವುದಾದರೂ ಹೇಗೆ? ನಾವು ನಾಗರಿಕ ಸಮಾಜ ಎಂದು ಹೇಳಿಕೊಳ್ಳುತ್ತೇವೆ. ಇದರಲ್ಲಿ ಗ್ರಾಮಸ್ಥರ ಪಾತ್ರ ಏನಿದೆ?. ಈ ಘಟನೆಗೆ ಜನರು ಏಕೆ ಮೂಕಪ್ರೇಕ್ಷಕರಾಗಿದ್ದರು ಎಂಬುದಕ್ಕೆ ಕಾರಣಗಳಿವೆಯೇ?. ಅವರು ಪೊಲೀಸ್, ನ್ಯಾಯಾಂಗ, ರಾಜಕೀಯ ವ್ಯಕ್ತಿಗಳಿಗೆ ಹೆದರಿದ್ದಾರೆಯೇ? ಎಂದು ಪ್ರಶ್ನಿಸಿತು.
ಪೊಲೀಸರ ನಡತೆ ನಂಬಿಕೆಯಿಲ್ಲ: "ಜನರು ಏಕೆ ಅಪರಾಧದ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂಬ ಸಾಮಾಜಿಕ ಆಯಾಮವನ್ನು ನಿರ್ಲಕ್ಷಿಸಲಾಗದು. ತಮ್ಮನ್ನು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಿಲುಕಿಸಲಾಗುತ್ತದೆ. ತಮಗೆ ಸೂಕ್ತ ಗೌರವ ಸಿಗುವುದಿಲ್ಲ ಎಂದು ಸಾಕ್ಷಿಗಳು ಹೆದರುತ್ತಾರೆ" ಎಂದೂ ನ್ಯಾಯಪೀಠ ಹೇಳಿತು.
ಆಗ ನ್ಯಾ. ದೀಕ್ಷಿತ್ ಅವರು "ಕೆಲವು ಕಡೆಗಳಲ್ಲಿ ಹೊರತುಪಡಿಸಿ ಪೊಲೀಸ್ ಠಾಣೆಗಳಲ್ಲಿ ಸಾಕ್ಷಿಗಳು ಮತ್ತು ಆರೋಪಿಗಳಿಗೆ ವ್ಯತ್ಯಾಸವೇ ಇರುವುದಿಲ್ಲ. ಇದು ಜನರಿಗೆ ಒಪ್ಪಿಗೆಯಾಗುವುದಿಲ್ಲ. ಪೊಲೀಸರ ನಡೆತೆ, ನ್ಯಾಯಾಲಯವೂ ಸಹ ಜನರಲ್ಲಿ ನಂಬಿಕೆ ಹುಟ್ಟುವಂತೆ ಮಾಡುವುದಿಲ್ಲ. ಸಾಮೂಹಿಕ ಮೂರ್ಖತನ ಸಾಮಾಜಿಕ ವಿಚಾರವಾಗಿದೆ. ಇದಕ್ಕೆ ಮುಖಾಮುಖಿಯಾಗಬೇಕು. ಪೊಲೀಸರು ತಮ್ಮನ್ನು ಬ್ರಿಟಿಷ್ ಆಡಳಿತ ಎಂದುಕೊಳ್ಳಬಾರದು" ಎಂದರು.
ಅಡ್ವೊಕೇಟ್ ಜನರಲ್, ಈಗಾಗಲೇ ಸಂತ್ರಸ್ತೆಗೆ 5 ಲಕ್ಷ ಪರಿಹಾರ ನೀಡಲಾಗಿದೆ. 2.3 ಎಕರೆ ಭೂಮಿ ನೀಡಲಾಗುವುದು. ಪ್ರಕರಣದ ತನಿಖೆಯನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದೆ ಎಂದು ಸರ್ಕಾರದ ಪರ ಉತ್ತರ ನೀಡಿದರು.












Click it and Unblock the Notifications