Belekeri port scam: ಸತೀಶ್ ಸೈಲ್ಗೆ ಜೈಲು ಶಿಕ್ಷೆ: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದೇನು?
ಬೆಂಗಳೂರು ಅಕ್ಟೋಬರ್ 26: ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದು ನಿವೃತ್ತ ನ್ಯಾಯಾಧೀಶ ಸಂತೋಷ್ ಹೆಗ್ಡೆ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೆ ಪ್ರತಿಕ್ರಿಯಿಸಿದ ಸಂತೋಷ್ ಹೆಗ್ಡೆ ಅವರು ಈ ಹೇಳಿಕೆ ನೀಡಿದ್ದಾರೆ.
ಬೇಲೆಕೇರಿ ಬಂದರಿನಿಂದ ವಶಪಡಿಸಿಕೊಂಡ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ ಅಕ್ರಮವಾಗಿ ರಫ್ತು ಮಾಡಿದ್ದಕ್ಕಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಕೃಷ್ಣ ಸೈಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂತೋಷ್ ಹೆಗ್ಡೆ ಅವರು, 'ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ. ಅವರಿಗೂ ಕೂಡ ಶಿಕ್ಷೆ ಆಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತದೆ. ಇದು ನಿಜಕ್ಕೂ ಉತ್ತಮ ಬೆಳವಣಿಗೆ.
ನ್ಯಾಯಾಲಯದ ಈ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. ದೊಡ್ಡ ರಾಜಕಾರಣಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಇಂದು ಕೋರ್ಟ್ ಕೊಟ್ಟ ತೀರ್ಪು ನನ್ನ ಜೊತೆ ಕೆಲಸ ಮಾಡಿದ ಅಧಿಕಾರಿಗಳಿಗೆ ಸಂತೃಪ್ತಿ ಸಿಕ್ಕಂತಾಗುತ್ತೆ. ಇದರಲ್ಲಿ ಭಾಗಿ ಆದವರಿಗೂ ಶಿಕ್ಷೆ ಆಗಬೇಕು' ಎಂದರು.
ಕೋರ್ಟ್ ಸೈಲ್ಗೆ ಶಿಕ್ಷೆ ವಿಧಿಸಿದ್ದು ವಿಧಾನಸಭೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ ಕೂಡ ಎದುರಾಗಿದೆ. ಸತೀಶ್ ಸೈಲ್ಗೆ ನ್ಯಾಯಾಲಯ ದಂಡದೊಂದಿಗೆ ಶಿಕ್ಷೆ ವಿಧಿಸಿರುವುದು ವಿಪಕ್ಷಗಳ ವಾಗ್ದಾಳಿಗೆ ಅಸ್ತ್ರ ಸಿಕ್ಕಂತಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸರ್ಕಾರ ಕೂಡಲೇ ಸತೀಶ್ ಸೈಲ್ರನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 4 ಪ್ರಕರಣದಲ್ಲಿ ಶಿಕ್ಷೆ ಪ್ರಕಟ ಮಾಡಿದೆ. ಒಂದು ಪ್ರಕರಣದಲ್ಲಿ 7 ವರ್ಷ, ಮತ್ತೊಂದು ಪ್ರಕರಣದಲ್ಲಿ 5 ಹಾಗೂ ಮಗದೊಂದು ಪ್ರಕರಣದಲ್ಲಿ 3 ವರ್ಷ ಶಿಕ್ಷೆ ವಿಧಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಈ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ಈ ಮಹತ್ವದ ತೀರ್ಪನ್ನು ನೀಡಿದ್ದಾರೆ. ಅಲ್ಲದೆ, 9 ಕೋಟಿ 60 ಲಕ್ಷ ರೂಪಾಯಿ ದಂಡವನ್ನು ಪಾವತಿ ಮಾಡುವಂತೆ ಆದೇಶ ಮಾಡಿದೆ. 420 ವಂಚನೆ ಪ್ರಕರಣದಲ್ಲಿ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪ್ರಕರಣದಲ್ಲಿ ಸತೀಶ್ ಸೈಲ್ ಗೆ 3 ವರ್ಷ ಹಾಗೂ ಒಳಸಂಚು ಪ್ರಕರಣದಲ್ಲಿ 5 ವರ್ಷ ಶಿಕ್ಷೆಯನ್ನು ವಿಧಿಸಿದೆ. ಸತೀಶ್ ಸೈಲ್ ವಿರುದ್ಧ ಬೆಲೆಕೇರಿ ಅದಿರು ಅಕ್ರಮ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಾಗಿತ್ತು. ಇದರ ವಿರುದ್ಧ ಸುದೀರ್ಘ ವಿಚಾರಣೆ ನಡೆದಿತ್ತು. ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿತ್ತು. ಇದೀಗ ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.
ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಲೋಕಾಯುಕ್ತ ಹಾಗೂ ಅರಣ್ಯಾಧಿಕಾರಿಗಳು 2010 ರಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡಿದ್ದರು . ನೂರಾರು ಕೋಟಿ ಬೆಲೆ ಬಾಳುವ ಅಕ್ರಮ ಅದಿರನ್ನು ಜಪ್ತಿ ಮಾಡಲಾಗಿತ್ತು. ಸುದೀರ್ಘ 14 ವರ್ಷಗಳ ವಿಚಾರಣೆಯ ಬಳಿಕ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರ ಆರೋಪಿಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿತ್ತು. ಇದೀಗ ಶಿಕ್ಷೆಯನ್ನು ನ್ಯಾಯಾಲಯ ಘೋಷಣೆ ಮಾಡಿದೆ.












Click it and Unblock the Notifications