ರಾಜ್ಯ ಬಿಜೆಪಿ ಸರ್ಕಾರಕ್ಕೆ ಗಂಡಾಂತರ ತಂದ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ?
ಬೆಂಗಳೂರು,
ಫೆ. 24: ಬೆಳಗಾವಿ ಜಿಲ್ಲಾ ಪಿಎಲ್ಡಿ ಬ್ಯಾಂಕ್ ಚುನಾವಣೆ ಹಿಂದಿನ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿತ್ತು, ಇದೀಗ ಡಿಸಿಸಿ ಬ್ಯಾಂಕ್ ಚುನಾವಣೆ ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯಕ್ಕೆ ಆತಂಕ ತಂದಿದೆ. ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿಗೆ ಬಿಜೆಪಿಯಲ್ಲೇ ಪೈಪೋಟಿ ನಡೆದಿದ್ದು, ಕುಂದಾನಗರಿಯ ಜಿಲ್ಲಾ ಬಿಜೆಪಿ ಈಗ 'ಮನೆಯೊಂದು ಮೂರು ಬಾಗಿಲು' ಎಂಬಂತಾಗಿದೆ. id="toptextpromo"> id='are-slot-1' class='oiad oi-axt oiadv'>ಸಹೋದರ
ರಮೇಶ್ ಕತ್ತಿ ಅವರನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮುಂದುವರೆಸಬೇಕೆಂದು ಎಂದು ಮಾಜಿ ಸಚಿವ ಉಮೇಶ್ ಕತ್ತಿ, ಮಂತ್ರಿಸ್ಥಾನ ವಂಚಿತ, ಆಪ್ತ ಮಹೇಶ್ ಕುಮಟಳ್ಳಿ ಅವರನ್ನು ಅಧ್ಯಕ್ಷ ಗಾದಿಯಲ್ಲಿ ಕೂಡಿಸಬೇಕೆಂದು ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಹಕಾರಿ ಕ್ಷೇತ್ರದಿಂದಲೇ ಬೆಳೆದಿರುವ ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಗಾದರೂ ಮಾಡಿ ಈ ಸಲ ಡಿಸಿಸಿ ಬ್ಯಾಂಕ್ ಅನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಬೇಕೆಂದು ಶತಪ್ರಯತ್ನ ನಡೆಸಿದ್ದಾರೆ. ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ತಂದಿಟ್ಟಿದೆ. id='are-slot-2' class='oiad oi-axt oiadv'>
ಡಿಸಿಸಿ ಬ್ಯಾಂಕ್ ಪಾಲಿಟಿಕ್ಸ್ ಯಡಿಯೂರಪ್ಪರಿಗೆ ಟೆನ್ಷನ್!
ಡಿಸಿಸಿ ಬ್ಯಾಂಕ್ ಸೇರಿದಂತೆ ಸ್ಥಳೀಯ ಆಡಳಿವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುವುದು ಬೆಳಗಾವಿ ಜಿಲ್ಲಾ ರಾಜಕಾರಣಿಗಳಿಗೆ ಪ್ರತಿಷ್ಠೆಯ ಸಂಗತಿ. ಹೀಗಾಗಿಯೇ ಅಲ್ಲಿನ ಪ್ರಭಾವಿ ಕತ್ತಿ, ಸವದಿ ಹಾಗೂ ಜಾರಕಿಹೊಳಿ ಕುಟುಂಬಗಳು ಸ್ಥಳೀಯ ಮಟ್ಟದ ಅಧಿಕಾರಕ್ಕಾಗಿ ಯಾವ ಮಟ್ಟದ ಜಿದ್ದಾಜಿದ್ದಿಗಾದರೂ ಸಿದ್ಧವಾಗಿರುತ್ತಾರೆ.
ಕಳೆದ ಮೈತ್ರಿ ಸರಕಾರ ಪತನಕ್ಕೆ ಕಾರಣವಾಗಿದ್ದು ಇಂಥದ್ದೆ ಪಿ ಎಲ್ ಡಿ ಬ್ಯಾಂಕ್ ಚುನಾವಣೆ. ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಿಂದಲೇ ಮೈತ್ರಿ ಸರ್ಕಾರ ಪತನವಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ, ಹೀಗಾಗಿ ಬೆಳಗಾವಿ ಜಿಲ್ಲಾ ಬಿಜೆಪಿ ಮುಸುಕಿನ ಗುದ್ದಾಟದಿಂದ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಉಂಟಾಗುವ ಸಾಧ್ಯತೆಗಳಿವೆ. ಇದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟೆನ್ಷನ್ ಶುರುವಾಗಲು ಕಾರಣವಾಗಿದೆ.

ಅಧ್ಯಕ್ಷ ಗಾದಿಗೆ ಬಿಜೆಪಿಯಲ್ಲಿಯೆ ನಡೆದಿದೆ ಪೈಪೋಟಿ
ಸಧ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ರಮೇಶ್ ಕತ್ತಿ ಅವರನ್ನು ಅಧ್ಯಕ್ಷಸ್ಥಾನದಲ್ಲಿ ಮುಂದುವರೆಯಲು ಎಲ್ಲರನ್ನು ಒಪ್ಪಿಸಿ ಅವಕಾಶ ಮಾಡಿಕೊಡಬೇಕು ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಉಮೇಶ್ ಕತ್ತಿ ಈಗಾಗಲೇ ಬೇಡಿಕೆ ಇಟ್ಟಿದ್ದಾರೆ.
ಮಂತ್ರಿಸ್ಥಾನ ವಂಚಿತ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಸರ್ಕಾರ ನೇಮಿಸಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬದು ರಮೇಶ್ ಜಾರಕಿಹೊಳಿ ಅವರ ಒತ್ತಾಯ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾಗಿದ್ದ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಅನ್ಯಾಯವಾದರೇ ರಾಜೀನಾಮೆ ಕೊಡಲೂ ಸಿದ್ಧ ಎಂದು ಸಚಿವ ರಮೇಶ್ ಜಾರಕಿಹೊಳಿ ಈಗಾಗಲೇ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
ಈ ಮಧ್ಯೆ ಡಿಸಿಎಂ ಲಕ್ಷ್ಮಣ ಸವದಿ ಅವರೂ ತಮ್ಮ ಆಪ್ತರೊಬ್ಬರನ್ನು ಅಧ್ಯಕ್ಷ ಗಾದಿಯಲ್ಲಿ ಕೂಡಿಸುವ ಮೂಲಕ ಡಿಸಿಸಿ ಬ್ಯಾಂಕ್ ಆಡಳಿತ ಹಿಡಿಯಲು ಪ್ರಯತ್ನ ನಡೆಸಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಸವದಿ ಅವರಿಗೆ ಸಾಥ್ ಕೊಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಏರ್ಪಡುವ ಎಲ್ಲ ಸಾಧ್ಯತೆಗಳಿದ್ದು, ಅದರ ನೇರ ಪರಿಣಾಮ ರಾಜ್ಯ ಬಿಜೆಪಿ ಸರ್ಕಾರದ ಮೇಲಾಗಲಿದೆ.

ಏಪ್ರೀಲ್ ತಿಂಗಳಿನಲ್ಲಿ ನಡೆಯಲಿದೆ ಚುನಾವಣೆ
ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಬರುವ ಏಪ್ರೀಲ್ ತಿಂಗಳಿನಲ್ಲಿ ನಡೆಯಲಿದೆ. ಮುಂದಿನ ತಿಂಗಳಿನಿಂದಲೇ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಒಟ್ಟು ಹದಿನಾರು ಜನ ಸದಸ್ಯರು ಹಾಗೂ ಸರ್ಕಾರದಿಂದ ನಾಮನಿರ್ದೇಶನಗೊಳ್ಳುವ ಇಬ್ಬರು ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಲಿದ್ದಾರೆ.
ಹೀಗಾಗಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯ ರಾಜಕಾರಣ ನಿಯಂತ್ರಿಸಿದೆ ಕುಂದಾನಗರಿ ರಾಜಕೀಯ
ಬೆಳಗಾವಿ ಜಿಲ್ಲೆಯ ರಾಜಕೀಯ ರಾಜ್ಯ ರಾಜಕಾರಣವನ್ನು ನಿಯಂತ್ರಿಸಿರುವುದು ಹಲವು ಬಾರಿ ಸಾಬೀತಾಗಿದೆ. 1970 ಹಾಗೂ 2019ರಲ್ಲಿ ಹೀಗೆ ಎರಡು ಬಾರಿ ನೇರವಾಗಿ ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು ರಾಜ್ಯ ಸರ್ಕಾರ ಬದಲಿಸಿದ್ದಾರೆ. ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ.
ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಡಿಸಿಎಂ ಲಕ್ಷ್ಣಣ ಸವದಿ ಅವರನ್ನು ನಿಯಂತ್ರಿಸುವುದು ಯಡಿಯೂರಪ್ಪ ಅವರಿಗೆ ದೊಡ್ಡ ವಿಚಾರವೇನಲ್ಲ. ಆದರೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ನಿಯಂತ್ರಿಸುವುದು ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಲಭವಲ್ಲ. ಹೀಗಾಗಿಯೇ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಷಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ತಲೆ ನೋವಾಗಿರುವುದಂತೂ ಸತ್ಯ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯ ಪ್ರಭಾವಿಗಳನ್ನು ಹೇಗೆ ಸಮಾಧಾನ ಮಾಡುತ್ತಾರೆ ಎಂಬುದರ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ ಎಂದರೂ ತಪ್ಪಿಲ್ಲ!












Click it and Unblock the Notifications