ಜೆಡಿಎಸ್ಗೆ ಗುಡ್ ಬೈ ಹೇಳಿದ ಬೇಳೂರು,ರಾಜೂಗೌಡ
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ಸಚಿವ ರಾಜುಗೌಡ (ನರಸಿಂಹನಾಯಕ್) ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಚುನಾವಣೆಯಲ್ಲಿ ಸೋತಿದ್ದರು. ನಂತರ ಪಕ್ಷದ ಚಟುವಟಿಕೆಗಳಿಂದ ದೂರವೇ ಇದ್ದ ಅವರು ಇದೀಗ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ.
ಸಾಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೇಳೂರು ಗೋಪಾಲಕೃಷ್ಣ ಮತ್ತು ಸುರಪುರದಿಂದ ಸ್ಪರ್ಧಿಸಿದ್ದ ರಾಜುಗೌಡ ಯಾವ ಪಕ್ಷ ಸೇರಲಿದ್ದಾರೆ ಎಂಬುದು ನಿಗೂಢವಾಗಿದೆ. ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ರಾಯಚೂರು ಕ್ಷೇತ್ರದಿಂದ ರಾಜುಗೌಡ ರನ್ನು ಕಣಕ್ಕಿಳಿಸಲು ಜೆಡಿಎಸ್ ತಯಾರಿ ನಡೆಸಿತ್ತು. ಆದರೆ, ಅವರು ಪಕ್ಷವನ್ನೇ ತೊರೆದು ಹೋಗುತ್ತಿದ್ದಾರೆ. [ಜೆಡಿಎಸ್ ತೊರೆಯಲು ಬೇಳೂರು ಸಜ್ಜು]
ಇವರು ಮೊದಲಿಗರಲ್ಲ : ಕೆಲವು ದಿನಗಳ ಹಿಂದೆ ಮಾಜಿ ಸಚಿವ ಬಸನರಾಜ್ ಪಾಟೀಲ್ ಯತ್ನಾಳ್ ಜೆಡಿಎಸ್ ತೊರೆದಿದ್ದರು. ನಂತರ ಶಶಿಲ್ ನಮೋಶಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಸದ್ಯ ಬೇಳೂರು ಗೋಪಾಲಕೃಷ್ಣ ಮತ್ತು ರಾಜೂಗೌಡ ಪಕ್ಷ ತೊರೆದಿದ್ದಾರೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್.ಚಂದ್ರಶೇಖರ್ ಅವರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. [ಜೆಡಿಎಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ]
ಜೆಡಿಎಸ್ ಭದ್ರಕೋಟೆ ಎನಿಸಿರುವ ಮೈಸೂರು ಭಾಗದಲ್ಲಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲು ಬಿಜೆಪಿ ಸಜ್ಜಾಗುತ್ತಿದೆ. ಆದ್ದರಿಂದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಚಂದ್ರಶೇಖರ್ ಅವರನ್ನು ಪಕ್ಷಕ್ಕೆ ಸೆಳೆಯಲು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರು ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಇದರಿಂದ ಜೆಡಿಎಸ್ ಪಕ್ಷಕ್ಕೆ ತವರು ನೆಲದಲ್ಲೇ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ.