Bengaluru 2nd Airport : 2ನೇ ವಿಮಾನ ನಿಲ್ದಾಣದ ಜಾಗದ ಕುರಿತು ಆ ಇಬ್ಬರು ಪ್ರಭಾವಿ ನಾಯಕರ ನಡುವೆ ಜಟಾಪಟಿ
ಬೆಂಗಳೂರು, ಫೆಬ್ರವರಿ 18: ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತು ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಬೆಂಗಳೂರಿನ 2 ನೇ ವಿಮಾನ ನಿಲ್ದಾಣದ ಕುರಿತು ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್ ಡಿ ದೇವೇಗೌಡ್ರು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದು, ಇದೀಗ ಕಾಂಗ್ರೆಸ್ ನ ಇಬ್ಬರು ಪ್ರಭಾವಿ ನಾಯಕರ ನಡುವೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಜಾಗದ ಕುರಿತು ಜಟಾಪಟಿ ನಡೆಯುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ರಾಜ್ಯದ ಪ್ರಸ್ತಾವನೆಗೆ ಕೇಂದ್ರ ಸರಕಾರದಿಂದಲೂ ಸಕಾರಾತ್ಮಕ ಸ್ಪಂದನೆಯ ಭರವಸೆ ಮೂಡಿದೆ. ಆದರೆ, ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗಬೇಕು? ಯಾವ ಜಾಗ ಸೂಕ್ತ ಎಂಬ ವಿಚಾರದಲ್ಲಿಆಡಳಿತರೂಢ ಕಾಂಗ್ರೆಸ್ ಪಕ್ಷದ ಪ್ರಭಾವಿಗಳ ನಡುವೆ ಹಗ್ಗ ಜಗ್ಗಾಟ ನಡೆದಿದ್ದು, ತಮ್ಮ ಕ್ಷೇತ್ರಕ್ಕೆ ಹತ್ತಿರವಾಗುವ ಸ್ಥಳವನ್ನ ಅಂತಿಮಗೊಳಿಸಲು ಇಬ್ಬರು ನಾಯಕರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯದ ವಿಮಾನ ನಿಲ್ದಾಣದಲ್ಲಿ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡುವ ಪ್ರಯತ್ನವನ್ನು ರಾಜ್ಯ ಸರಕಾರ ಮುಂದಾಗಿದೆ. ಆದರೆ ಸೂಕ್ತವಾದ ಒಂದು ಸ್ಥಳ ಆಯ್ಕೆ ವಿಚಾರದಲ್ಲಿಇನ್ನೂ ಸರ್ಕಾರ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಬೆಂಗಳೂರಿನ 2 ನೇ ವಿಮಾನ ನಿಲ್ದಾಣದ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ
ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸ್ಥಳದ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಮೊದಲ ಸ್ಥಳ ಅಂತಿಮ ಮಾಡಿವ ಜವಾಬ್ದಾರಿ ಸರ್ಕಾರದ್ದಾಗಿದೆ. ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಜಾಗಕ್ಕೆ ಬಿಡದಿ, ನೆಲಮಂಗಲ ಸಮೀಪದ ಸೋಲೂರು, ಹಾರೋಹಳ್ಳಿ ಎಂಬ ಪ್ರಮುಖ ಮೂರು ಸ್ಥಳ ಅಂತಿಮವಾಗಿವೆ. ಆದರೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ನಮ್ಮ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಎರಡನೇ ವಿಮಾನಿ ನಿಲ್ದಾಣ ನಿರ್ಮಾಣದ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ ಮಾತನಾಡಿ, ರಾಜ್ಯದ 21 ಜಿಲ್ಲೆಗಳ ಸಂಪರ್ಕಕ್ಕೆ ಅನುಕೂಲವಾಗುವ ದೃಷ್ಟಿಯಿಂದ ತುಮಕೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಂದರೆ ಒಳ್ಳೆಯದು ಎಂದು ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ಬಿಡದಿಯಲ್ಲಿ ನಿರ್ಮಾಣವಾದರೆ ಎಷ್ಟು ಪ್ರಮಾಣದಲ್ಲಿ ಅನುಕೂಲವಾಗುತ್ತದೆಯೋ, ತುಮಕೂರಿನಲ್ಲಿ ನಿರ್ಮಾಣವಾದರೂ ಅಷ್ಟೇ ಅನುಕೂಲವಾಗಲಿದೆ. ನಮ್ಮ ಬೇಡಿಕೆಯನ್ನು ನಾವಿಟ್ಟಿದ್ದೇವೆ. ಚರ್ಚೆ ಮಾಡಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಇದೊಂದು ತಾಂತ್ರಿಕ ವಿಚಾರವಾಗಿದ್ದು ಸಾಧಕ, ಬಾಧಕ ಆಧರಿಸಿ ನಿರ್ಣಯ ಮಾಡಲಾಗುತ್ತದೆ. ಎಲ್ಲಿಮಾಡಬೇಕು ಎಂಬ ಬಗ್ಗೆ ಸರಕಾರ ಅಂತಿಮವಾಗಿ ನಿರ್ಧಾರ ಮಾಡಲಿದೆ. ಈ ಬಗ್ಗೆ ಚರ್ಚೆಯ ಅಗತ್ಯವಿಲ್ಲ. ಇದೊಂದು ಮೂಲಸೌಕರ್ಯ ಯೋಜನೆಯಾಗಿದ್ದು, ರಾಜ್ಯದ ಜನಸಮುದಾಯಕ್ಕೆ ಅನುಕೂಲವಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಇನ್ನೂ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನಮ್ಮ ಊರಿನಲ್ಲೇ ಹೊಸ ಏರ್ಪೋರ್ಟ್ ಬರಬೇಕು ಎಂಬ ಆಸೆ ನನಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಾಕಷ್ಟು ರೀತಿ ರಿವಾಜುಗಳಿವೆ. ಬಿಡದಿ, ನೆಲಮಂಗಲ - ಸೋಲೂರು, ತುಮಕೂರು ಈ ಪೈಕಿ ಯಾವ ಜಾಗದಲ್ಲಿಆಗಬೇಕು ಎಂಬುದನ್ನು ತೀರ್ಮಾನ ಮಾಡುವುದು ನಮ್ಮ ಕೈಯಲ್ಲಿಲ್ಲ. ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.












Click it and Unblock the Notifications