Namma Metro: ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಈ ಹೆಸರು: ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು,ಸೆಪ್ಟೆಂಬರ್ 09: ಬೆಂಗಳೂರು ನಗರದ ಮೆಟ್ರೋ ನಿಲ್ದಾಣವೊಂದಕ್ಕೆ ಸೈಂಟ್ ಮೇರಿ ಹೆಸರಿಡಬೇಕೆಂದ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಒಪ್ಪಿಗೆ ನೀಡಿದ್ದಾರೆ.ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ಸೈಂಟ್ ಮೇರಿಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾಮಕರಣ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ತುಂಬಾ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಸೆಂಟ್ ಮೇರಿಸ್ ಜನ್ಮದಿನದ ಶುಭಾಶಯ ಕೋರುತ್ತೇನೆ. ನಾನು ಮುಖ್ಯಮಂತ್ರಿ ಆಗಿ ಪ್ರತಿ ವರ್ಷ ತಪ್ಪದೇ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಬಹಳ ಜನ ಹರಕೆ ಹೊತ್ತುಕೊಳ್ತಾರೆ, ನಂತರ ಹರಕೆ ತೀರಿಸ್ತಾರೆ. ಪ್ರತಿಯೊಬ್ಬರು ಕೂಡ ದೈಹಿಕ, ಮಾನಸಿಕವಾಗಿ ಆರೋಗ್ಯ ಕೊಡಲಿ ಅಂತ ತಾಯಿ ಸೆಂಟ್ ಮೇರಿಯನ್ನು ಪ್ರಾರ್ಥನೆ ಮಾಡುತ್ತಾರೆ. ಅದಕ್ಕೋಸ್ಕರ ಸೆಂಟ್ ಮೇರಿಗೆ ಆರೋಗ್ಯ ಮಾತೆ ಅಂತ ಕರಿತಾರೆ ಎಂದು ಹೇಳಿದರು.

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ದಯೆಯಿಲ್ಲದ ದರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಧಾರ್ಮಿಕ ಸಹಿಷ್ಣತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ. ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ದವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು.
ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು. ಬಸವಣ್ಣನವರ ವಚನವನ್ನು ಹೇಳುತ್ತಲೇ ಯಾವ ಜಾತಿ ಎಂದು ಕೇಳುತ್ತೇವೆ. ಇದನ್ನು ಹೋಗಲಾಡಿಸಬೇಕಾದರೆ ಆರ್ಥಿಕ, ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ಅದಕ್ಕಾಗಿ ಕಸುಬು ಯಾವುದೇ ಇದ್ದರೂ ವಿದ್ಯೆ ಕಲಿಯಲೇಬೇಕು. ವೈದ್ಯರು, ಇಂಜಿನಿಯರ್, ಪ್ರೊಫೆಸರ್, ವಿಜ್ಞಾನಿಗಳಾಗಬೇಕು. ವೈದ್ಯರು, ಇಂಜಿನಿಯರ್ ಅಥವಾ ವಿಜ್ಞಾನಿಗಳಾಗುವುದು ಯಾರೊಬ್ಬರ ಸ್ವತ್ತಲ್ಲ. ಎಲ್ಲರಿಗೂ ಸಾಮರ್ಥ್ಯವಿದೆ.
ನಾನು ಕುರುಬ ಜಾತಿಯಲ್ಲಿ ಹುಟ್ಟಿದ್ದರೂ ಮುಖ್ಯಮಂತ್ರಿಯಾಗಿಲ್ಲವೆ. ಹುಟ್ಟಿನಿಂದ ಎಲ್ಲವೂ ನಿರ್ಧಾರವಾಗುವುದಿಲ್ಲ. ಅವಕಾಶಗಳು ದೊರೆಯುವುದು ಹಾಗೂ ಅದನ್ನು ಬಳಕೆ ಮಾಡುವುದರ ಮೇಲೆ ನಿರ್ಧಾರವಾಗುತ್ತದೆ. ದೇವಸ್ಥಾನಕ್ಕೆ ಪ್ರವೇಶ ದೊರೆಯದಿದ್ದರೆ, ದೇವಸ್ಥಾನವೇ ನಿಮ್ಮ ಬಳಿ ಕರೆತರಲು ಪ್ರಯತ್ನಿಸಿ ಎಂದು ನಾರಾಯಣಗುರುಗಳು ತಿಳಿಸಿದ್ದರು. ನಾರಾಯಣ ಗುರುಗಳ ಕಾಲಮಾನದಲ್ಲಿ ಕೇರಳದಲ್ಲಿ ಶೂದ್ರವರ್ಗದವರನ್ನು ತುಚ್ಛವಾಗಿ ಕಾಣುವ ಪರಿಸ್ಥಿತಿಯಿತ್ತು.
ಪರ್ಯಾಯ ವ್ಯವಸ್ಥೆಯನ್ನು ನಾರಾಯಣ ಗುರುಗಳು ಹುಡುಕಿದರು. ಅವರು ಮೊದಲನೇ ದೇವಸ್ಥಾನ ಕಟ್ಟಿದ್ದು 1885ರಲ್ಲಿ. ಅಲ್ಲಿಂದೀಚೆಗೆ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಕಟ್ಟಿದರು. ಮೇಲ್ಜಾತಿಯವರೇ ಪೂಜಾರಿಗಳಾಗಬೇಕೆಂದು ದೇವರು ಹೇಳಿಲ್ಲ. ಪೂಜಾರಿಗಳಾದವರಿಗೆ ತರಬೇತಿ ಕೊಡುವ ವ್ಯವಸ್ಥೆಯನ್ನು ಕೂಡ ಮಾಡುತ್ತಾರೆ. ಒಂದು ಜಾತಿ, ಒಂದು ಮತ, ಒಂದು ದೇವರು ಎಂಬ ಮಾತುಗಳನ್ನು ಅವರು ಹೇಳಿದರು. ಸರ್ಕಾರ ಎಲ್ಲರಿಗೂ ಉಚಿತ ಶಿಕ್ಷಣ ನೀಡುತ್ತಿದೆ. ಕಡ್ಡಾಯ ಶಿಕ್ಷಣ ನೀಡಲು ಬದ್ಧವಾಗಿದೆ. ಪೋಷಕರು ತಾವು ಯಾವುದೇ ವೃತ್ತಿಯನ್ನು ಮಾಡುತ್ತಿರಲಿ, ಮಕ್ಕಳಿಗೆ ಮಾತ್ರ ಒಳ್ಳೆಯ ಶಿಕ್ಷಣ ಕೊಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡುವುದು ತಂದೆ ತಾಯಿಗಳ ಕರ್ತವ್ಯ.
ವಿದ್ಯೆ ಇಲ್ಲದೆ ಹೋಗಿದ್ದರೆ ದೇವರಾಜ ಅರಸು ಅವರನ್ನು ಮೊದಲ್ಗೊಂಡು, ನಾನಾಗಲಿ, ಬಂಗಾರಪ್ಪನವರಾಗಲಿ, ವೀರಪ್ಪ ಮೊಯ್ಲಿ ಅವರಾಗಲಿ, ಎಸ್. ಎಂ.ಕೃಷ್ಣ ಅವರಾಗಲಿ, ದೇವೇಗೌಡ ಅವರಾಗಲಿ ಮುಖ್ಯಮಂತ್ರಿಗಳಾಗಲು ಸಾಧ್ಯವಿತ್ತೆ? ಎಲ್ಲಾ ಸಾಧನೆಗಳಿಗೂ ಶಿಕ್ಷಣವೇ ಅಡಿಪಾಯ ಎಂದು ಶಿಕ್ಷಣದ ಮಹತ್ವವನ್ನು ನಾರಾಯಣ ಗುರುಗಳು ಪದೇ ಪದೇ ಹೇಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ಯಲ್ಲಿ ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.












Click it and Unblock the Notifications