ರಾಹುಲ್ ಗಾಂಧಿ ಭೇಟಿ ಮಾಡಿದ ಬೆಂಗಳೂರಿನ ಶಾಸಕರು
ಬೆಂಗಳೂರು, ಜುಲೈ 27 : ಕರ್ನಾಟಕ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ. ಬೆಂಗಳೂರು ನಗರದ ಮೂವರು ಶಾಸಕರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.
ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕಕ್ಕೆ ಆಷಾಢ ಅಡ್ಡಿ!
ನಿಗಮ ಮಂಡಳಿಗಳ ನೇಮಕ ಮತ್ತು ಸಂಪುಟ ವಿಸ್ತರಣೆ ಬಗ್ಗೆ ರಾಹುಲ್ ಗಾಂಧಿ ಅವರ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 30 ನಿಗಮ ಮಂಡಳಿಗಳಿಗೆ ಏಕಕಾಲದಲ್ಲಿ ಅಧ್ಯಕ್ಷರನ್ನು ನೇಮಿಸಲಾಗುತ್ತದೆ. ಕಾಂಗ್ರೆಸ್ 20, ಜೆಡಿಎಸ್ 10 ನಿಗಮ-ಮಂಡಳಿಗಳನ್ನು ಹಂಚಿಕೊಂಡಿವೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ 25 ಸಚಿವರನ್ನು ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಕಾಂಗ್ರೆಸ್ನಿಂದ 6, ಜೆಡಿಎಸ್ನಿಂದ ಒಬ್ಬರು ಶಾಸಕರು ಇನ್ನು ಸಂಪುಟ ಸೇರಬಹುದಾಗಿದೆ.
ಸಿದ್ದರಾಮಯ್ಯ ಭೇಟಿ ಮಾಡಿದ್ದರು : ಜುಲೈ 23ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು ಆಷಾಢ ಕಳೆದ ಮೇಲೆ ನಿಗಮ ಮಂಡಳಿ ನೇಮಕ, ಸಂಪುಟ ವಿಸ್ತರಣೆ ಮಾಡಲು ರಾಹುಲ್ ಗಾಂಧಿ ಒಪ್ಪಿಗೆ ನೀಡಿದ್ದರು.