Bengaluru Rain: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ
ಬೆಂಗಳೂರು, ಅಕ್ಟೋಬರ್ 21: ಬೆಂಗಳೂರಿನ ಹಲವು ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿದೆ.
ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ನಲ್ಲಿ ಭರ್ಜರಿ ಮಳೆಯಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲೂ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಸುರಿದಿರುವ ಮಳೆಗೆ ಮೈಸೂರು ರಸ್ತೆ ಆರ್ವಿ ಕಾಲೇಜಿನ ಸಮೀಪ ಹೆದ್ದಾರಿಯಲ್ಲಿ ಸೊಂಟದವರೆಗೂ ನೀರು ನಿಂತಿದೆ. ಕೆಂಗೇರಿಯ ರೈಲ್ವೆ ನಿಲ್ದಾಣದಲ್ಲಿ ಮಳೆಯ ನೀರು ರೈಲ್ವೆ ಹಳಿಗಳನ್ನು ಸಂಪೂರ್ಣ ಮುಳುಗಿಸಿದೆ.
ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್ ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವು ಕಡೆಗಳಲ್ಲಿ ಭರ್ಜರಿ ಭಾರಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಮರಗಳು ಧರೆಗುರುಳಿವೆ.
ಉತ್ತರ ಕನ್ನಡ , ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ದಾವಣಗೆರೆ ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಕ್ಟೋಬರ್ 22 ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಬೆಂಗಳೂರು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾತ್ರಿ ಇಡೀ ಮಳೆ ಸುರಿದಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದ ನಸುಕಿನ ಜಾವದವರೆಗೆ ಆರ್ಭಟಿಸಿದ್ದ ವರುಣರಾಯ ಆರ್ಭಟಿಸಿದ್ದಾನೆ. ನಸುಕಿನಜಾವ ಸುರಿದ ಭಾರಿ ಮಳೆಗೆ ನಗರದ ರಸ್ತೆಗಳಲ್ಲಿ ಮೊಣಕಾಲಿನವರೆಗೂ ನೀರು ನಿಂತಿದೆ. ಇದರಿಂದ ಕಚೇರಿಗಳಿಗೆ ತೆರಳುತ್ತಿದ್ದವರು ಪರದಾಡುವಂತಾಯಿತು. ಬೈಕ್ ಮತ್ತು ಆಟೋ ಇಂಜಿನ್ಗಳಲ್ಲಿ ನೀರು ಹೊಕ್ಕು ನಡುರಸ್ತೆ ಬಂದ್ ಆಗಿ ನಿಂತಿವೆ. ಇತ್ತ ಭರ್ಜರಿ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ.
ಬಿಬಿಎಂಪಿ ಮುನ್ನೆಚ್ಚರಿಕೆ ಸಂದೇಶ
ಭಾರಿ ಮಳೆಯಾಗುತ್ತಿರುವ ಮತ್ತು ಮಳೆಯ ಮುನ್ಸೂಚನೆ ಇರುವುದರಿಂದ ಬೆಂಗಳೂರು ಜನತೆಗೆ ಬಿಬಿಎಂಪಿ ಹಲವು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಲಹೆ ನೀಡಿದೆ.
ನಾಗರಿಕರೇ, ಇದು 21.10.2024 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಕೆಳಗಿನ ಪ್ರದೇಶಗಳಲ್ಲಿ ದಯವಿಟ್ಟು ಮುನ್ನೆಚ್ಚರಿಕೆಗಳನ್ನು ಅನುಸರಿಸಿ. ಮನೆಯೊಳಗೆಯೇ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ. ಸುರಕ್ಷಿತ ಸ್ಥಳಗಳಲ್ಲಿ ಆಶ್ರಯವನ್ನು ಪಡೆದುಕೊಳ್ಳಿ, ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ. ವಿದ್ಯುತ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ಅನ್ಪ್ಲಗ್ ಮಾಡಿ ಇಡಿ. ತಕ್ಷಣವೇ ಜಲಮೂಲಗಳಿಂದ ಹೊರಬನ್ನಿ ಎಂದು ಬಿಬಿಎಂಪಿ ಸಲಹೆ ನೀಡಿದೆ.












Click it and Unblock the Notifications