ಬೆಂಗಳೂರಿಗೆ ಮುಂದಿನ 3 ಗಂಟೆ 'ಆರೆಂಜ್ ಅಲರ್ಟ್', ವಿಧಾನಸೌಧಕ್ಕೆ ನುಗ್ಗಿದ ಮಳೆ ನೀರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ವರುಣದೇವ ತನ್ನ ಕೃಪೆ ತೋರಿದ್ದು, ನಗರದಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ರಾಜಧಾನಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರಮುಖ ರಸ್ತೆಗಳು ನದಿಗಳಂತಾಗಿ ಮಾರ್ಪಟ್ಟಿವೆ.
ಸತತವಾಗಿ ಸುರಿಯುತ್ತಿರುವ ಈ ಮಳೆಗೆ ರಾಜ್ಯದ ವಿಧಾನಸೌಧ ಕೂಡ ಹೊರತಾಗಿಲ್ಲ. ಅಚ್ಚರಿಯೆಂಬಂತೆ ಅರ್ಥ ಗಂಟೆ ಸುರಿದ ಮಳೆಗೆ ವಿಧಾನಸೌಧದ ಆವರಣಕ್ಕೂ ನೀರು ನುಗ್ಗಿದೆ. ಆಲಿಕಲ್ಲುಗಳು ಸಹ ವಿಧಾನಸೌಧದ ಗೋಡೆಗಳಿಗೆ ಅಪ್ಪಳಿಸಿದೆ. ಭದ್ರತಾ ಸಿಬ್ಬಂದಿ ಹಾಗೂ ಅಲ್ಲಿಗೆ ಆಗಮಿಸುವ ಜನಪ್ರತಿನಿಧಿಗಳು, ಅಧಿಕಾರಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಧಾನಸೌಧದ ಸುತ್ತಮುತ್ತಲಿನ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ವಾಹನ ಸವಾರರ ಪರದಾಟ, ಟ್ರಾಫಿಕ್ ಜಾಮ್
ನಗರದ ಪ್ರಮುಖ ಜಂಕ್ಷನ್ಗಳಾದ ವೈಟ್ ಫೀಲ್ಡ್, ಸಿಲ್ಕ್ ಬೋರ್ಡ್, ಟಿನ್ ಫ್ಯಾಕ್ಟರಿ, ಕೋರಮಂಗಲ, ಇಂದಿರಾನಗರ, ಮೆಜೆಸ್ಟಿಕ್, ಶಾಂತಿ ನಗರ ಮತ್ತು ಕೆ.ಆರ್. ವೃತ್ತದಂತಹ ಪ್ರದೇಶಗಳಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು ವಾಹನ ಸವಾರರು ಪರದಾಡುವಂತಾಗಿದೆ. ನಗರದ ಶೇಷಾದ್ರಿಪುರಂನ ರಸ್ತೆಯಲ್ಲಿ ಮರ ಬಿದ್ದಿದ್ದು, ಶೇಷಾದ್ರಿಪುರಂದಿಂದ ಮಲ್ಲೇಶ್ವರಂ ನಡುವಿನ ಸಂಪರ್ಕ ರಸ್ತೆ ಬಂದ್ ಆಗಿದೆ. "ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿರುವುದರಿಂದ, ಸಾರ್ವಜನಿಕರು ಆದಷ್ಟು ಪರ್ಯಾಯ ಮಾರ್ಗಗಳನ್ನು ಬಳಸಬೇಕು ಮತ್ತು ತುರ್ತು ಕೆಲಸಗಳಿಲ್ಲದಿದ್ದರೆ ಮನೆಯಿಂದ ಹೊರಬರಬೇಡಿ" ಎಂದು ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಮಳೆಯ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹಾಗೂ ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ. "ಮಳೆ ನೀರು ಸರಾಗವಾಗಿ ಹರಿದುಹೋಗಲು ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಹವಾಮಾನ ಇಲಾಖೆಯ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದ ಪರಿಣಾಮವಾಗಿ ಈ ಮಳೆಯಾಗುತ್ತಿದ್ದು, ಮುಂದಿನ 3 ಗಂಟೆಗಳು ನಗರದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.













Click it and Unblock the Notifications