Bengaluru Rains: ತೀವ್ರ ಮಳೆ: ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ
ಬೆಂಗಳೂರು,ಮೇ 30: ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಎಲ್ಲೇ ಏನೇ ಅನಾಹುತವಾದರೂ ಸಮಾರೋಪಾದಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾಗ ಪ್ರದೇಶಗಳ ಸೂಕ್ತ ರೀತಿಯಲ್ಲಿ ಕ್ರಮ: ಆಯುಕ್ತರು
ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಉಪ ಮುಖ್ಯಮಂತ್ರಿಗಳು ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರ ಮಾರ್ಗದರ್ಶನದಂತೆ ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಅನಾಹುತ ತಡೆಯಲು ಸನ್ನದ್ಧ ಸ್ಥಿತಿಯಲ್ಲಿರುವಂತೆ ಸೂಚಿಸಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದರು
ಎಲ್ಲಾ ವಲಯಗಳ ಜಂಟಿ ಆಯುಕ್ತರು ಮತ್ತು ಕಾರ್ಯಪಾಲಕ ಅಭಿಯಂತರರು ಈಗಾಗಲೇ ಆಯಾ ವಲಯಗಳ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾಗಬಹುದಾದ ಪ್ರದೇಶಗಳ ವ್ಯಾಪ್ತಿಯಲ್ಲಿ ಇದ್ದು ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಪಾಲಿಕೆಯ ಅರಣ್ಯ ಇಲಾಖೆಯ ಅಧಿಕಾರಿಗಳೂ ಸಹಾ ಸನ್ನದ್ಧ ಸ್ಥಿತಿಯಲ್ಲಿದ್ದು ಯಾವುದೇ ವಿಪತ್ತಿನ ಪರಿಸ್ಥಿತಿಯನ್ನು ಎದುರಿಸಿ ನಿರ್ವಹಿಸಲು ಕಾರ್ಯಪ್ರವೃತ್ತರಾಗಿದ್ದಾರೆ. ಉಪ ಮುಖ್ಯಮಂತ್ರಿಗಳು ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಪಾಲಿಕೆ ಆಡಳಿತಾಧಿಕಾರಿಗಳು ಮತ್ತು ಮುಖ್ಯ ಆಯುಕ್ತರಿಗೆ ಈ ಕುರಿತು ನಿರ್ದೇಶನ ನೀಡಿದ್ದು, ಎಲ್ಲಾ ಅಧಿಕಾರಿಗಳು ಕಾರ್ಯತತ್ಪರರಾಗಿದ್ದಾರೆ.












Click it and Unblock the Notifications