ಕರ್ನಾಟಕ ಶಾಂತಿ, ಸಾಮರಸ್ಯದ ನಾಡು; ರಾಜ್ಯದ ಜನತೆಗೆ ರಾಹುಲ್ ಭಾವುಕ ಪತ್ರ
ರಾಯಚೂರು, ಅ.23: ಕರ್ನಾಟಕದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಅಂತ್ಯವಾಗಿದೆ. ಭಾರತ ಐಕ್ಯತಾ ಯಾತ್ರೆ ಶುಕ್ರವಾರ ರಾಯಚೂರು ಜಿಲ್ಲೆಯ ಯರಮರಸ್ನಿಂದ ಆರಂಭವಾಗಿ ತೆಲಂಗಾಣ ಗಡಿ ಪ್ರವೇಶಿಸುವ ಮೂಲಕ ರಾಜ್ಯದಲ್ಲಿ ಅಂತ್ಯವಾಗಿದೆ.
ರಾಜ್ಯದಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆ ಭಾರೀ ಯಶಸ್ವಿಯಾಗಿದೆ ಎಂದು ರಾಹುಲ್ ಗಾಂಧಿ ರಾಜ್ಯದ ಜನತೆಗೆ ಭಾವನಾತ್ಮ ಪತ್ರ ಬರೆದು ಧನ್ಯವಾದ ಸಲ್ಲಿಸಿದ್ದಾರೆ. ರಾಯಚೂರಿನ ಯರಮರಸ್ನ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ರಾಹುಲ್ ಗಾಂಧಿ ಸಂದೇಶ ಹಂಚಿಕೊಂಡಿದ್ದಾರೆ.
"ಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುಧೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದೆ" ಎಂದಿದ್ದಾರೆ.
|
ಭಾರತ್ ಜೋಡೋಗೆ ಕರ್ನಾಟಕದಿಂದ ಅಭೂತಪೂರ್ವ ಬೆಂಬಲ
"ಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು "ಸರ್ವ ಜನಾಂಗದ ಶಾಂತಿಯ ತೋಟ" ಎಂದು ಬಣ್ಣಿಸಿದ್ದರು. ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ" ಎಂದು ಹೊಗಳಿದ್ದಾರೆ.
"ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನ ನಿರ್ವಹಿಸಲು ಕಷ್ಟಪಡುತ್ತಿದ್ದಾರೆ" ಎಂದು ರೈತರ ಸಂಕಷ್ಟಗಳನ್ನು ಎತ್ತಿ ಹಿಡಿದಿದ್ದಾರೆ.

ಕರ್ನಾಟಕದ ಇತಿಹಾಸ ತಿರುಚಿ ನಾಶಪಡಿಸಲಾಗುತ್ತಿದೆ!
"ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲಾ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ, ಹಾಗೇ ಮಾರುಕಟ್ಟೆಯನ್ನೂ ಸಹ ಈ ಸರ್ಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ" ಎಂದು ಆರೋಪಿಸಿದ್ದಾರೆ.
"ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನ, ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನ ತಿರುಚಿ ನಾಶಪಡಿಸಲಾಗುತ್ತಿದೆ" ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸೂಟು-ಬೂಟಿನ ಲೂಟಿ ಸರ್ಕಾರ; ರಾಹುಲ್
" 'ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ' ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು '40% ಕಮಿಷನ್' ಸರ್ಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ "ಸೂಟು-ಬೂಟಿನ ಲೂಟಿ ಸರ್ಕಾರ"ಕ್ಕೆ ತಕ್ಕ ಉದಾಹರಣೆಯಾಗಿದೆ" ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರಿ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಬಾಧಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ" ಎಂದು ಆಡಳಿತ ಪಕ್ಷವನ್ನು ಖಂಡಿಸಿದ್ದಾರೆ.

ಶಾಂತಿಯ ತೋಟ ಹಾಳಾಗಲು ಕಾಂಗ್ರೆಸ್ ಬಿಡುವುದಿಲ್ಲ!
"ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ. ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ" ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ನಡೆದ ಯಾತ್ರೆಯನ್ನು ವಿಡಿಯೋವನ್ನು ಭಾರತ್ ಜೋಡೋ ಅಧಿಕೃತ ಟ್ವಿಟ್ಟರ್ ಖಾತೆ ಹಂಚಿಕೊಂಡಿದ್ದು, ಅದೇ ವಿಡಿಯೋವನ್ನು ರಾಹುಲ್ ಗಾಂಧಿ ಕೂಡ ಹಂಚಿಕೊಂಡು ನಿಮ್ಮ ಪ್ರೀತಿಗೆ ಧನ್ಯವಾದ ಕರ್ನಾಟಕ ಎಂದಿದ್ದಾರೆ.












Click it and Unblock the Notifications