Breaking; ಹಾಸನದ ಅಭ್ಯರ್ಥಿ, ಭವಾನಿ ರೇವಣ್ಣ ಮಹತ್ವದ ಘೋಷಣೆ
2023ರ ವಿಧಾನಸಭೆ ಚುನಾವಣೆಗೆ ಹಾನಸ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು?. ಮಾಜಿ ಸಚಿವ ಎಚ್. ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಈ ಕುರಿತು ಘೋಷಣೆ ಮಾಡಿದ್ದಾರೆ.
ಬೆಂಗಳೂರು, ಜನವರಿ 24; ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು?. ಪಕ್ಷದ ಭದ್ರಕೋಟೆಯಲ್ಲಿ ಪಕ್ಷ ಯಾರನ್ನು ಕಣಕ್ಕಿಳಿಸಲಿದೆ? ಎಂಬ ಕುತೂಹಲವಿದೆ. ಈ ನಡುವೆ ಮಂಗಳವಾರ ಮಹತ್ವದ ಘೋಷಣೆಯೊಂದು ಆಗಿದೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಕಕ್ಕೇಹಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಮಾಜಿ ಸಚಿವ ಎಚ್. ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ, "ಜೆಡಿಎಸ್ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನದಲ್ಲಿಯೇ ನನ್ನ ಹೆಸರು ಘೋಷಣೆಯಾಗಲಿದೆ" ಎಂದರು.
"ಜನರ ಪರಿಚಯ ಇದ್ದರೆ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ" ಎಂದು ಹೇಳಿದರು.

"ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ನಮ್ಮ ಕೈತಪ್ಪಿ ಹೋಗಿದ್ದರಿಂದ ರೇವಣ್ಣ ಅವರು ಆರಂಭಿಸಿರುವ ಹಲವು ಕೆಲಸಗಳು ಹಾಗೆ ಉಳಿದು ಹೋಗಿವೆ. ಅವುಗಳನ್ನು ಪೂರ್ಣಗೊಳಿಸಬೇಕಿದೆ" ಎಂದು ಭವಾನಿ ರೇವಣ್ಣ ತಿಳಿಸಿದರು.
ಹಾಸನ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಪ್ರೀತಮ್ ಗೌಡ. ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯೆಯಾದ ಭವಾನಿ ರೇವಣ್ಣ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿ. ಈ ಬಗ್ಗೆ ಹಿಂದೆಯೂ ಅನೇಕ ಬಾರಿ ಚರ್ಚೆ ನಡೆದಿದೆ.
2018ರ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಎಚ್. ಪ್ರಕಾಶ್ ಅಭ್ಯರ್ಥಿಯಾಗಿದ್ದರು. 50,342 ಮತಗಳನ್ನು ಪಡೆದು ಸೋಲು ಕಂಡಿದ್ದರು. ಬಿಜೆಪಿಯ ಪ್ರೀತಮ್ ಗೌಡ 63,348 ಮತಗಳನ್ನು ಪಡೆದು ಜಯಗಳಿಸಿದ್ದರು.
ಎಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ; ಭವಾನಿ ರೇವಣ್ಣ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿದೆ. ಹಾಸನದಿಂದ ಕಣಕ್ಕಿಳಿಯಲು ಅವರಿಗೆ ಇಚ್ಛೆ ಇರಬಹುದು. ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ" ಎಂದರು.












Click it and Unblock the Notifications